ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಇದುವರೆಗೂ ಪತ್ತೆಯಾಗಿಲ್ಲ ಎಂದು ನಿರ್ಲಕ್ಷ್ಯ ಸಲ್ಲದು. ಸೋಂಕು ನಾನಾ ಕಡೆ ಲಗ್ಗೆ ಇಡುತ್ತಿರುವುದರಿಂದ ಈಗಿನಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟಾನಿಟ್ಟಾಗಿ ಕೈಗೊಳ್ಳಿ ಎಂದು ಸಚಿವ ಶಿವರಾಜ ತಂಗಡಗಿ ತಾಕೀತು ಮಾಡಿದ್ದಾರೆ.
ಕೋವಿಡ್-19ನೇ ತಳಿಯಾದ ಒಮಿಕ್ರಾನ್ ಸಬ್ವೇರಿಯಂಟ್ ಜೆಎನ್.1 ಎನ್ನುವ ವೈರಾಣು ಈಗಾಗಲೇ ಸಿಂಗಾಪುರ, ಇಂಡೋನೇಷ್ಯಾ, ಮಲೇಶಿಯ, ಚೀನಾ ದೇಶಗಳಲ್ಲಿ ಕಾಣಿಸಿಕೊಂಡಿದೆ. ಈಗಾಗಲೇ ದೇಶದ ಗೋವಾ, ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಪ್ರಕರಣ ವರದಿಯಾಗಿವೆ. ವೈರಾಣು ಸಮುದಾಯದಲ್ಲಿ ಹರಡುವ ಸಾಧ್ಯತೆ ಇದ್ದು, ಇದನ್ನು ತಡೆಗಟ್ಟಲು ಜಿಲ್ಲಾಡಳಿತ, ಆರೋಗ್ಯ ಇಲಾಖೆ ಸನ್ನದ್ಧವಾಗಬೇಕು ಎಂದು ನಿರ್ದೇಶನ ನೀಡಿದರು.
ಸಂಶಯಾಸ್ಪದ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ಮಾಡದೇ ಪರೀಕ್ಷೆಗೊಳಪಡಿಸುವ ಕಾರ್ಯ ನಿಯಮಿತವಾಗಿ ನಡೆಸಬೇಕು ಎಂದರು.ಆಸ್ಪತ್ರೆಗಳಲ್ಲಿ ಔಷಧಿ ಸೇರಿದಂತೆ ಪಿಪಿಇ ಕಿಟ್, ಎನ್-95 ಮಾಸ್ಕ್ ಕೊರತೆಯಾಗಬಾರದು. ಈ ನಿಟ್ಟಿನಲ್ಲಿ ಪತ್ರ ಬರೆದು ಅಗತ್ಯ ಪ್ರಮಾಣದಲ್ಲಿ ಔಷಧಿ, ಪಿಪಿಇ ಕಿಟ್, ಮಾಸ್ಕ್, ಹ್ಯಾಂಡ್ ಗ್ಲೌಸ್ ಸೇರಿದಂತೆ ಎಲ್ಲ ಬಗೆಯ ವೈದ್ಯಕೀಯ ಪರಿಕರಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯತೆ ಇರುವಂತೆ ನೋಡಿಕೊಳ್ಳಬೇಕು ಎಂದರು.
ಜಿಲ್ಲೆಗೆ ಪ್ರತಿನಿತ್ಯ 70 ಪರೀಕ್ಷೆ ನಡೆಸುವ ಗುರಿ ನಿಗದಿಪಡಿಸಿದ್ದಾರೆ. 10 ದಿನಗಳಿಗೆ ಆಗುವಷ್ಟು ಪರಿಕರಗಳನ್ನು ನೀಡಿದ್ದಾರೆ. ಕಳೆದ 10 ದಿನಗಳಲ್ಲಿ 112 ಮಾದರಿ ಸಂಗ್ರಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಎಸ್ಪಿ ಯಶೋದಾ ವಂಟಿಗೋಡಿ, ಎಡಿಸಿ ಸಾವಿತ್ರಿ ಕಡಿ, ಎಸಿ ಕ್ಯಾ.ಮಹೇಶ ಮಾಲಗಿತ್ತಿ, ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ನಿರ್ದೇಶಕ ಡಾ.ಇಟಗಿ, ತಹಸೀಲ್ದಾರ ವಿಠ್ಠಲ್ ಚೌಗಲಾ ಇದ್ದರು.
15 ದಿನಗಳೊಳಗೆ ಜಿಲ್ಲಾಸ್ಪತ್ರೆಯ ಪ್ರತಿಯೊಂದು ಕಡೆಗೆ ಶುಚಿತ್ವ ಕಾಣಬೇಕು. ಆಸ್ಪತ್ರೆಯ ಒಳಗೆ ಮತ್ತು ಹೊರಗೆ ಆರೋಗ್ಯಕರ ವಾತಾವರಣ ಇರಬೇಕು. ಒಡೆದ ಕಿಟಗಿ, ಬಾಗಿಲು, ಲೈಟ್ ಸರಿಪಡಿಸಬೇಕು ಎಂದು ಸಚಿವರು ಬೋಧಕ ಆಸ್ಪತ್ರೆಯ ನಿರ್ದೇಶಕರಿಗೆ ಗಡುವು ನೀಡಿದರು.