)
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಶುಕ್ರವಾರ ಏರ್ಪಡಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬೇರೆಲ್ಲೂ ಕಾಣದಂತಹ ಅರಣ್ಯ ಸಂಪತ್ತಿದೆ. ಜಾನಪದ ಕಲೆಗಳ ತವರು, ಮಹದೇಶ್ವರ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಭರಚುಕ್ಕಿ, ಟಿಬೆಟ್ ಕಾಲೋನಿಗಳಂತಹ ಸ್ಥಳಗಳಿದ್ದು, ಪ್ರವಾಸೋದ್ಯಮದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳಿವೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.
ಜಿಲ್ಲೆಯಲ್ಲಿ ಅರಣ್ಯ ಪ್ರವಾಸೋದ್ಯಮದಿಂದ ಮಾನವ-ಪ್ರಾಣಿ ಸಂಘರ್ಷ ಹೆಚ್ಚಾಗಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ಮೊದಲ ಆದ್ಯತೆ ನೀಡಲಾಗುವುದು.ಕೃಷಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈಗಾಗಲೇ ಅಮೃತ ಭೂಮಿಗೆ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದೇನೆ. ನಮ್ಮ ಪಾರಂಪರಿಕ ಆಟಗಳು, ಕೃಷಿ ಪದ್ಧತಿಗಳು ನಮ್ಮ ಮುಂದಿನ ಪೀಳಿಗೆಗೆ ಗೊತ್ತಾಗಬೇಕು. ಇದಕ್ಕಾಗಿ ರೈತ ಮುಖಂಡರ ಜೊತೆ ಚರ್ಚಿಸಿದ್ದೇನೆ ಎಂದರು.
ಜಿಲ್ಲೆ ಹಿಂದೆ ರೇಷ್ಮೆಗೆ ಹೆಸರಾಗಿತ್ತು. ಮತ್ತೆ ರೇಷ್ಮೆ ಕೃಷಿ ಅಭಿವೃದ್ದಿಪಡಿಸಲು, ರೈತರೊಂದಿಗೆ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು. ಅರಿವು ಮೂಡಿಸಲಾಗುವುದು, ಅದರಲ್ಲೂ ಕಾಡಂಚಿನ ಗ್ರಾಮಗಳಲ್ಲಿ ಇದರ ಬಗ್ಗೆ ಹೆಚ್ಚು ಅರಿವು ಮೂಡಿಸಿ, ಜೋಳದ ಬದಲು ರೇಷ್ಮೆ ಬೆಳೆದಾಗ ಮಾನವ-ಪ್ರಾಣಿ ಸಂಘರ್ಷವನ್ನು ತಡೆಗಟ್ಟಬಹುದು ಮತ್ತು ರೇಷ್ಮೆಯಿಂದ ಪ್ರತಿ ತಿಂಗಳು ಆದಾಯ ಸಿಗುವಂತೆ ಮಾಡಲಾಗುವುದು ಎಂದರು.
ಜಿಲ್ಲೆ ಜಾನಪದ ತವರು, ಇಲ್ಲಿ ಸಾಕಷ್ಟು ಪ್ರತಿಭೆಗಳಿವೆ, ಆದಿವಾಸಿಗಳಿರುವ ಈ ಜಿಲ್ಲೆಯಲ್ಲಿ ಪ್ರತಿಭೆಗಳಿಗೆ ಭರವಿಲ್ಲ. ಈ ನಿಟ್ಟಿನಲ್ಲಿ ಅವರ ಪ್ರತಿಭೆಗಳನ್ನು ಹೊರತರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಜಾನಪದ ಕಲೆಗಳ ಬಗ್ಗೆ ವಸ್ತು ಸಂಗ್ರಹಾಲಯ ತೆರೆಯಲಾಗುವುದು.ಮಾನವ-ಪ್ರಾಣಿ ಸಂಘರ್ಷಗಳನ್ನು ತಡೆಗೆ ಅರಣ್ಯ ಇಲಾಖೆ ಹಾಗೂ ರೈತರೊಂದಿಗೆ ಎರಡು ಸಭೆಗಳನ್ನು ನಡೆಸಿದ್ದು, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.
ಜಿಲ್ಲೆಯ ಹನೂರು ಹಾಗೂ ಚಾಮರಾಜನಗರ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಅಧಿಕಾರಿಗಳ ಸಭೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದು, ಬೇಸಿಗೆಯಲ್ಲಿ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.ಸಿಎಸ್ಆರ್ ಅನುದಾನ ಸದುಪಯೋಗಪಡಿಸಿಕೊಂಡು ಸರ್ಕಾರಿ ವಿದ್ಯಾರ್ಥಿ ನಿಲಯಗಳ ಮೂಲಭೂತ ಸೌಕರ್ಯಕ್ಕೆ ಗಮನಹರಿಸಲಾಗುವುದು, ಜಿಲ್ಲಾ ಕೇಂದ್ರದಲ್ಲಿ ಸುಸಜ್ಜಿತ ಉದ್ಯಾನವನಗಳ ಜೊತೆ ಸ್ಚಚ್ಚತೆಗೆ ಹೆಚ್ಚಿನ ಅದ್ಯತೆ ನೀಡಲಾಗುವುದು. ಎರಡು ಅವಧಿಯಲ್ಲಿ ಪೌರ ಕಾರ್ಮಿಕರು ಕೆಲಸ ನಿರ್ವಹಿಸುವಂತೆ ಈಗಾಗಲೇ ನಗರಸಭೆಗೆ ಸೂಚನೆ ನೀಡಲಾಗಿದೆ ಎಂದರು.
ಜಿಲ್ಲೆಯನ್ನು ಕಸಮುಕ್ತ, ಪ್ಲಾಸ್ಟಿಕ್ ಮುಕ್ತ, ಬಾಲ್ಯ ವಿವಾಹ ಮುಕ್ತ ಮಾಡುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ಹಂತ ಹಂತವಾಗಿ ಒಂದೊಂದು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಮಾದರಿ ಗ್ರಾಮವನ್ನಾಗಿ ಮಾಡಿ, ಜನರಲ್ಲಿ ಅರಿವು ಮೂಡಿಸಲಾಗುವುದು ಎಂದರು.ಫಲಿತಾಂಶ ಸುಧಾರಣೆಗೆ ಕ್ರಮ:
ಈ ಬಾರಿಯ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಪ್ರಗತಿ ಸಾಧಿಸಲು ಸುಧಾರಣೆ ಕೈಗೊಂಡಿದ್ದು, ಬುಡಕಟ್ಟು ಜನರ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ನಂತರ ಮುಂದಕ್ಕೆ ಹೋಗಲಾರದೆ ಜೆಸಿಬಿ ಡ್ರೈವರ್ಗಳಾಗುತ್ತಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಗಮನಹರಿಸಿ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದರು.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಎನ್. ಸಿದ್ದಲಿಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ ಲಕ್ಕೂರು ಎಸ್. ಪ್ರಸಾದ್ ಹಾಜರಿದ್ದರು.