ಗ್ಯಾರಂಟಿ ಸಮಸ್ಯೆ ಸ್ಥಳೀಯ ಹಂತದಲ್ಲಿಯೇ ಪರಿಹರಿಸಲು ಕ್ರಮ

KannadaprabhaNewsNetwork |  
Published : Mar 30, 2025, 03:00 AM IST
29ಕೆಪಿಎಲ್24 ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ | Kannada Prabha

ಸಾರಾಂಶ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಮಹತ್ತರ ಐದು ಗ್ಯಾರಂಟಿ ಯೋಜನೆಗಳು ಬಡ, ಹಿಂದುಳಿದ ವರ್ಗಗಳ ಹಾಗೂ ಜನ ಸಾಮಾನ್ಯರ ಬದುಕಿಗೆ ಆಸರೆಯಾಗಿವೆ

ಕೊಪ್ಪಳ: ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಗ್ರಾಮೀಣ ಮತ್ತು ಹೋಬಳಿ ಹಂತದಲ್ಲಿ ಪ್ರಗತಿ ಪರಿಶೀಲನಾ ಸಭೆ ಕೈಗೊಂಡು ಗ್ಯಾರಂಟಿ ಯೋಜನೆಗಳ ನಡೆ ಗ್ರಾಪಂ ಕಡೆ ಕಾರ್ಯಕ್ರಮದ ಮೂಲಕ ಸಮಸ್ಯೆಗಳನ್ನು ಸ್ಥಳೀಯ ಹಂತದಲ್ಲಿಯೇ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.

ಅವರು ಶನಿವಾರ ಕೊಪ್ಪಳ ಜಿಪಂ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಮಹತ್ತರ ಐದು ಗ್ಯಾರಂಟಿ ಯೋಜನೆಗಳು ಬಡ, ಹಿಂದುಳಿದ ವರ್ಗಗಳ ಹಾಗೂ ಜನ ಸಾಮಾನ್ಯರ ಬದುಕಿಗೆ ಆಸರೆಯಾಗಿವೆ. ಈ ಯೋಜನೆಗಳಡಿ ಜಿಲ್ಲೆಯ ಯಾವುದೇ ಅರ್ಹ ಫಲಾನುಭವಿಗಳು ಹೊರಗುಳಿಯದಂತೆ ಶೇ.100 ರಷ್ಟು ಪ್ರಗತಿ ಸಾಧಿಸಬೇಕು. ಈ ಹಿನ್ನೆಲೆಯಲ್ಲಿ ಯೋಜನೆಗಳ ಅನುಷ್ಠಾನದಲ್ಲಿ ಇರುವ ಸಣ್ಣಪುಟ್ಟ ತಾಂತ್ರಿಕ ಸಮಸ್ಯೆ ಬಗೆಹರಿಸಲು ಗ್ರಾಪಂ ಮತ್ತು ಹೋಬಳಿ ಹಂತದಲ್ಲಿ ಫಲಾನುಭವಿಗಳ ಜತೆಗೆ ಸಮಾಲೋಚನೆ ಮಾಡಿ,ಅವರಿಗಾಗಿರುವ ಸಮಸ್ಯೆಗಳ ಕುರಿತು ಚರ್ಚಿಸಿ ಸ್ಥಳೀಯ ಸಮಸ್ಯೆ ಸ್ಥಳದಲ್ಲಿಯೇ ಪರಿಹಾರ ನೀಡಲಾಗುವುದು. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಡ್ಯಾಶ್ ಬೋರ್ಡ್ ಸಮಸ್ಯೆಯಿಂದಾಗಿ 5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಕುರಿತು ನಿಖರವಾದ ಮಾಹಿತಿ ದೊರೆಯುತ್ತಿಲ್ಲ. ಈ ಸಮಸ್ಯೆ ಆದಷ್ಟು ಬೇಗ ಬಗೆಹರಿಸಬೇಕು. ಗೃಹ ಲಕ್ಷ್ಮೀ ಯೋಜನೆಯ ಮೂಲಕ 2024ರ ಡಿಸೆಂಬರ್ ವರೆಗೆ 3 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಒಟ್ಟು 1030 ಕೋಟಿ 27 ಲಕ್ಷದ 78 ಸಾವಿರ ಮಹಿಳೆಯರಿಗೆ ಡಿಬಿಟಿ ಮೂಲಕ ನೇರವಾಗಿ ಪಾವತಿಸಲಾಗಿದೆ. ಈ ಯೋಜನೆಯಡಿ 2025ರ ಫೆಬ್ರವರಿಯಲ್ಲಿ 598 ಕ್ಕಿಂತ ಹೆಚ್ಚು ನೋಂದಣಿಯಾಗಿದೆ. ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮವಾಗಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು, ಹಾಗಾಗಿ ಅಕ್ರಮ ಅಕ್ಕಿ ಸಾಗಾಣಿಕೆಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಬೇಕು. ಅನ್ನಭಾಗ್ಯ ಯೋಜನೆಯ ಅಕ್ಕಿ ಮಾರಾಟ ಮಾಡಿದರೆ, ಅಂತಹ ಫಲಾನುಭವಿಗಳ ಪಡಿತರ ಚೀಟಿ ರದ್ದುಪಡಿಸಲು ಅವಕಾಶವಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಎಲ್ಲ ನ್ಯಾಯಬೆಲೆ ಅಂಗಡಿಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಲು ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ₹10 ಕೋಟಿ ಅನುದಾನ ನೀಡಿದ್ದಾರೆ. ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಗೆ ಕ್ರಮ ವಹಿಸಬೇಕು ಎಂದರು.

ಐದು ಗ್ಯಾರಂಟಿ ಯೋಜನೆಗಳ ಪ್ರಗತಿ: ಗೃಹಲಕ್ಷ್ಮೀ ಯೋಜನೆಯಡಿ ಕೊಪ್ಪಳ ಜಿಲ್ಲೆಯ 3,13,663 ಫಲಾನುಭವಿಗಳಿಗೆ ಡಿಸೆಂಬರ್-2024ರ ಅಂತ್ಯದವರೆಗೆ ಡಿಬಿಟಿ ಮೂಲಕ ₹1030.27 ಕೋಟಿ ಪಾವತಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ ಫೆಬ್ರವರಿ-2025ರ ಅಂತ್ಯದವರೆಗೆ 2,77,392 ಗ್ರಾಹಕರಿಗೆ ಉಚಿತ ವಿದ್ಯುತ್ ಸೌಲಭ್ಯ ದೊರೆತಿದ್ದು, ಇದಕ್ಕಾಗಿ ₹ 219.25 ಕೋಟಿ ಖರ್ಚು ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿಯ ಬದಲಿಗೆ ಡಿಸೆಂಬರ್-2024ರ ಅಂತ್ಯದವರೆಗೆ 2,99,213 ಕಾರ್ಡುದಾರರಿಗೆ ₹ 18,39,92,530 ವೆಚ್ಚ ಭರಿಸಲಾಗಿರುತ್ತದೆ. ಶಕ್ತಿ ಯೋಜನೆಯಡಿ ಫೆಬ್ರವರಿ-2025ರ ಅಂತ್ಯದವರೆಗೆ 6 ಕೋಟಿ 70 ಲಕ್ಷದ 2 ಸಾವಿರ 872 ಮಹಿಳೆಯರು ಕಲ್ಯಾಣ ಕರ್ನಾಟ ರಸ್ತೆ ಸಾರಿಗೆ ಸಂಸ್ಥೆಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ ₹ 2,35,51,247 ಗಳ ಖರ್ಚಾಗಿದೆ. ಯುವನಿಧಿ ಯೋಜನೆಯಡಿ ಇಲ್ಲಿಯವರೆಗೆ (ಮಾರ್ಚ್-2025) 8441 ನೋಂದಣಿಯಾಗಿದ್ದು, ಒಟ್ಟು ಮೊತ್ತ ₹10.05 ಕೋಟಿ ಪಾವತಿಸಲಾಗಿರುತ್ತದೆ ಎಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಗುರುತಿನ ಚೀಟಿ ವಿತರಣೆ: ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರುಗಳಿಗೆ ಸಿಇಓ ಗುರುತಿನ ಚೀಟಿ ವಿತರಣೆ ಮಾಡಿದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಬಿ ಖಾದ್ರಿ, ನಾಗರಾಜ್ ಅರಳಿ, ಅಮರೇಶ ಎಸ್ ಗಾಂಜಿ, ಮಂಜುನಾಥ ಗೋಂಡಬಾಳ, ಗ್ಯಾರಂಟಿ ಯೋಜನೆಗಳ ನೋಡಲ್ ಅಧಿಕಾರಿಗಳು ಹಾಗೂ ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಸೇರಿದಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು, ತಾಲೂಕು ಅಧ್ಯಕ್ಷರು ಹಾಗೂ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ