ಕನ್ನಡಪ್ರಭ ವಾರ್ತೆ ಬೆಂಗಳೂರು
ವಿಧಾನಸೌಧದ ಆವರಣದಲ್ಲಿ ಶನಿವಾರ ನಡೆದ ರಾಜ್ಯದ ಜಿಲ್ಲಾ ಘಟಕಗಳಿಗೆ 32 ಅತ್ಯಾಧುನಿಕ ಮೊಬೈಲ್ ಫೊರೆನ್ಸಿಕ್ ವ್ಯಾನ್ ಹಾಗೂ 75 ಬೊಲೆರೋ ವಾಹನಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಬೇಕಾದವರು. ಅಪರಾಧಗಳನ್ನು ತಡೆಯಬೇಕಾದವರು ಅಂಥವರೇ ಭಾಗಿಯಾದರೆ ನಿರ್ದಾಕ್ಷಿಣ್ಯ ಕ್ರಮ ಎದುರಿಸಬೇಕು. ನಮ್ಮ ಪೊಲೀಸ್ ಇಲಾಖೆ ದೇಶದಲ್ಲೇ ದಕ್ಷ ಇಲಾಖೆ ಎಂದು ಹೆಸರು ಪಡೆದಿದೆ. ಅದು ನಿಮ್ಮ ಸೇವೆ ಹಾಗೂ ಪರಿಶ್ರಮದಿಂದಲೇ ಆಗಿದೆ. ಇದನ್ನು ಉಳಿಸಿಕೊಂಡು ಹೋಗಬೇಕು ಎಂದರು.ಪೊಲೀಸ್ ನೇಮಕಾತಿಯಲ್ಲಿ ಪಾರದರ್ಶಕತೆ ಇರಬೇಕು, ಯಾರೊಬ್ಬರೂ ಲಂಚ ಕೊಟ್ಟು ಕೆಲಸಕ್ಕೆ ಸೇರಬಾರದು. ಸರ್ಕಾರ ನಿಮ್ಮ ಜೊತೆ ಇರುತ್ತದೆ. ನೀವು ನಿಮ್ಮ ಕರ್ತವ್ಯನ್ನು ಸರಿಯಾಗಿ ನಿಭಾಯಿಸಿ ಎಂದು ಡಿ.ಕೆ.ಶಿವಕುಮಾರ್ ಕಿವಿಮಾತು ಹೇಳಿದರು.
ಗಡಿಯಲ್ಲಿ ಸೈನಿಕ, ಗಡಿಯೊಳಗೆ ಆರಕ್ಷಕ. ಈ ಇಬ್ಬರಿಂದ ನಮ್ಮ ರಾಜ್ಯ ಹಾಗೂ ದೇಶ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುತ್ತಿದೆ. ನಮ್ಮ ಪೊಲೀಸರು ಒಂದು ವರ್ಷದಲ್ಲಿ 375 ಕೋಟಿ ರು. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಇಲಾಖೆ ಅಧಿಕಾರಿಗಳು 1500 ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಇದು ದೊಡ್ಡ ದಾಖಲೆ. ಡ್ರಗ್ಸ್ ಜಾಲವನ್ನು ಬೇಧಿಸಿದ ತಂಡಕ್ಕೆ ಸರ್ಕಾರ 10 ಲಕ್ಷದ ನಗದು ಬಹುಮಾನ ನೀಡಲು ತೀರ್ಮಾನಿಸಿದೆ ಎಂದು ಶಿವಕುಮಾರ್ ಹೇಳಿದರು.
ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ರಾಜ್ಯ ಡಿಜಿಪಿ ಎಂ.ಎ ಸಲೀಂ, ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹಾಜರಿದ್ದರು.
ನದಿ ಜೋಡಣೆ ರಿಯಲ್ ಎಸ್ಟೇಟ್ ವ್ಯವಹಾರವಲ್ಲ, ನೀರಿನ ಪ್ರಮಾಣ ನಿಗದಿಯಾಗಬೇಕು ಎಂಬ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಅವರು ಮೊದಲು ಪ್ರಧಾನಿ ಹಾಗೂ ಕೇಂದ್ರದ ಜಲಶಕ್ತಿ ಸಚಿವರನ್ನು ಭೇಟಿ ಮಾಡಲಿ. ಈ ಯೋಜನೆ ಬಗ್ಗೆ ಮಾಹಿತಿ ಪಡೆದು ನಂತರ ಮಾತನಾಡಲಿ ಎಂದು ತಿರುಗೇಟು ನೀಡಿದರು.