ಕದ್ದ ಮೇಲೆ ತಪ್ಪಾಯ್ತು ಎಂದಂತೆ: ಎಚ್ಡಿಕೆ ವ್ಯಂಗ್ಯ

KannadaprabhaNewsNetwork |  
Published : Oct 02, 2024, 01:01 AM IST
ಎಚ್‌ಡಿಕೆ | Kannada Prabha

ಸಾರಾಂಶ

ಮೈಸೂರಿನ ವಿವಾದಿತ 14 ನಿವೇಶನ ಮುಡಾಗೆ ವಾಪಸ್‌ ಕೊಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಕ್ರಮ ಹೇಗಿದೆಯೆಂದರೆ ''ಕಳ್ಳತನ ಮಾಡಿ ಆಮೇಲೆ ತಪ್ಪಾಯಿತು'' ಎಂಬಂತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆಗಳ ಸಚಿವ ಎಚ್‌.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಜತೆಗೆ, ಕಳ್ಳತನ ಮಾಡಿ ಆಮೇಲೆ ತಪ್ಪಾಯ್ತು ಅಂದರೆ ಬಿಡಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಕನ್ನಡಪ್ರಭ ವಾರ್ತೆ ನವದೆಹಲಿ

ಮೈಸೂರಿನ ವಿವಾದಿತ 14 ನಿವೇಶನ ಮುಡಾಗೆ ವಾಪಸ್‌ ಕೊಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಕ್ರಮ ಹೇಗಿದೆಯೆಂದರೆ ''''''''ಕಳ್ಳತನ ಮಾಡಿ ಆಮೇಲೆ ತಪ್ಪಾಯಿತು'''''''' ಎಂಬಂತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆಗಳ ಸಚಿವ ಎಚ್‌.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಜತೆಗೆ, ಕಳ್ಳತನ ಮಾಡಿ ಆಮೇಲೆ ತಪ್ಪಾಯ್ತು ಅಂದರೆ ಬಿಡಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರ ಜತೆಗೆ ಮಾತನಾಡಿ, ಸಿದ್ದರಾಮಯ್ಯ ಅವರ ಪತ್ನಿ ನನಗೆ ಸಹೋದರಿ ಸಮಾನ. ಅವರ ಬಗ್ಗೆ ಗೌರವ ಇಟ್ಟುಕೊಂಡೇ ಈ ಮಾತು ಹೇಳುತ್ತಿದ್ದೇನೆ ಎಂದರು.

ಸೋಮವಾರ ರಾತ್ರಿ ಏಕಾಏಕಿ ಪತ್ರ ಬರೆದು ನಮಗೆ ನಿವೇಶನಗಳು ಬೇಡ, ಅದನ್ನು ವಾಪಸ್ ಮಾಡುತ್ತಿದ್ದೇನೆ. ಮನೆ, ಚಿನ್ನ, ಒಡವೆ ಯಾವುದರ ಮೇಲೂ ಮಮತೆ ಇಲ್ಲ. ನನ್ನ ಪತಿಯ ಮುಂದೆ ಅದೆಲ್ಲ ತೃಣಕ್ಕೆ ಸಮಾನ ಎಂದು ಪಾರ್ವತಿ ಅವರು ಹೇಳಿಕೊಂಡಿದ್ದಾರೆ. ನಾನು ಆ ಹೆಣ್ಣು ಮಗಳ ಬಗ್ಗೆ ಮಾತನಾಡಲ್ಲ. ಆದರೆ ಅದೇನೋ‌ ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯ ಮಾಡಿರುವ ಸಿದ್ದರಾಮಯ್ಯನವರ ಗಮನಕ್ಕೆ ತಾರದೇ ಆ ನಿವೇಶನಗಳನ್ನು ವಾಪಸ್ ಕೊಟ್ಟಿದ್ದಾರೆಯೇ? ವಿನಾಕಾರಣ ಸಿದ್ದರಾಮಯ್ಯ ನನ್ನನ್ನು ಸುಳ್ಳುಗಾರ ಎಂದು ಹೇಳುತ್ತಾರೆ. ಆದರೆ ಇವರ ಮಾತು ಕೇಳಿಸಿಕೊಂಡರೆ ಸುಳ್ಳು ಎಲ್ಲಿ ಹುಟ್ಟಿದೆ ಎನ್ನುವುದು ಗೊತ್ತಾಗುತ್ತದೆ ಎಂದು ವ್ಯಂಗ್ಯವಾಡಿದರು.

ನಿವೇಶನ ವಾಪಸ್ ಕೊಡುವ ತರಾತುರಿಯ ತೀರ್ಮಾನ ತೆಗೆದುಕೊಳ್ಳುವಂತೆ ಹೇಳಿಕೊಟ್ಟಿದ್ದು ಯಾರು? ಕಳ್ಳತನ ಮಾಡಿ ಆಮೇಲೆ ತಪ್ಪಾಯ್ತು ಅಂದರೆ ಬಿಡಲು ಸಾಧ್ಯವೇ? ಎಂದು ಕುಮಾರಸ್ವಾಮಿ ಅವರು ಟೀಕಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನನ್ನು ಯಾವಾಗಲೂ ಹಿಟ್ ಆ್ಯಂಡ್ ರನ್‌ ಎಂದು ಹೇಳುತ್ತಾರೆ. ಹಾಗಾದರೆ ಇವರೇನು? ಯೂಟರ್ನಾ ಎಂದು ಖಾರವಾಗಿ ಪ್ರಶ್ನಿಸಿದರು.-ಬಾಕ್ಸ್‌-

ಮುಡಾಗಿಂತಲೂ ದೊಡ್ಡ ಹಗರಣ ಇನ್ನೊಂದಿದೆ

ಮುಡಾದಲ್ಲಷ್ಟೇ ಅಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನೂ ಹಲವು ಅಕ್ರಮಗಳನ್ನು ಎಸಗಿದ್ದಾರೆ. ಒಂದು ಪ್ರಕರಣ ಕುತ್ತಿಗೆಗೆ ಬಂದಾಗ ಒಂದು ಕೋಟಿ ರುಪಾಯಿಗೆ ಭೂಮಿ ಮಾರಾಟ ಮಾಡಿಕೊಂಡರು. ಚುನಾವಣಾ ಸಾಲಕ್ಕಾಗಿ ಆ ಭೂಮಿ ಮಾರಾಟ ಮಾಡಬೇಕಾಯಿತು ಎಂದು ಕಥೆ ಕಟ್ಟಿದರು. ಆ ನಿವೇಶನ ಎಲ್ಲಿಂದ ಬಂತು ಎಂದು ಅವರು ಹೇಳ್ತಾರಾ? ಇದು ಮುಡಾಗಿಂತಲೂ ಹಳೆಯ ಕೇಸ್‌ ಎಂದು ಕುಮಾರಸ್ವಾಮಿ ಆರೋಪಿಸಿದರು.

ಬಡವರ ಮಕ್ಕಳ ವಸತಿ ಶಾಲೆ ನಿರ್ಮಾಣಕ್ಕಾಗಿ ಭೂಮಿ ಡಿನೋಟಿಫಿಕೇಷನ್ ಮಾಡಿಸಿಕೊಂಡು, ಅದನ್ನು ಸಿದ್ದರಾಮಯ್ಯ ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲೂ ಸಿದ್ದರಾಮಯ್ಯ ಮೊದಲ ಆರೋಪಿ. ಪ್ರಕರಣದಲ್ಲಿ ಒಟ್ಟು 18 ಆರೋಪಿಗಳಿದ್ದಾರೆ. ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದಿದೆ. ಅದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿ ರಿಲೀಫ್ ಪಡೆದುಕೊಂಡರು. ಇದು 14 ಸೈಟ್ ಗಿಂತ ದೊಡ್ಡ ಹಗರಣ. ಊರಿಗೆ ಬುದ್ದಿ ಹೇಳೋರು ಅಲ್ಲಿ ಏನೇನು ಮಾಡಿದ್ದೀರಿ, ಸತ್ಯ ಹೇಳಿ. ಈಗ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗಿ ಕುಂಕುಮ ಇಟ್ಟುಕೊಂಡು ರಕ್ಷಣೆ ಪಡೆಯುತ್ತಿದ್ದಾರೆ. ಇದರ ಜೊತೆಗೆ ಇನ್ನೂ ಎರಡು ಪ್ರಕರಣಗಳಿವೆ ಎಂದು ಕುಮಾರಸ್ವಾಮಿ ಹೇಳಿದರು.

ಇದೇ ವೇಳೆ ಕಂದಾಯ ಸಚಿವ ಕೃಷ್ಣಬೈರೇಗೌಡರೇ ನೀವು ಮೇಧಾವಿಯಲ್ಲವೇ? ಇವನ್ನೆಲ್ಲ ಒಮ್ಮೆ ಪರಿಶೀಲನೆ ಮಾಡಿ ಎಂದ ಕುಮಾರಸ್ವಾಮಿ, ನಾನಂತು ಇಂಥ ಕೆಲಸ ಮಾಡಿಲ್ಲ. ತಾನೊಂದು ಬಗೆದರೆ ದೈವ ಮತ್ತೊಂದು ಬಗೆಯುವುದು ಅಂದರೆ ಇದೇ. ಅಧಿಕಾರ ದುರ್ಬಳಕೆ ಮಾಡಿಕೊಂಡು ನಮ್ಮನ್ನು ಮುಗಿಸಲು ಹೊರಟರು ಎಂದು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ-ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯ