ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: ಬೈಕ್‌, 4 ಅಂಗಡಿಗಳಿಗೆ ಬೆಂಕಿ!

KannadaprabhaNewsNetwork |  
Published : Sep 12, 2024, 01:55 AM IST

ಸಾರಾಂಶ

ಗಣಪತಿ ವಿಸರ್ಜನೆಗೂ ಮುನ್ನ ಪಟ್ಟಣದಲ್ಲಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಬುಧವಾರ ರಾತ್ರಿ ನಡೆದಿದ್ದು, ಪೊಲೀಸ್‌ ಪೇದೆ ಸೇರಿ ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಗಲಾಟೆ ವೇಳೆ ಉದ್ರಿಕ್ತರು ನಾಲ್ಕು ಅಂಗಡಿಗಳು, ದ್ವಿಚಕ್ರವಾಹನಗಳಿಗೆ ಬೆಂಕಿ ಹಚ್ಚಿದ್ದು, ಹಲವು ವಾಹನಗಳಿಗೆ ಹಾನಿ ಮಾಡಿದ್ದಾರೆ. ಘಟನೆಯಿಂದಾಗಿ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೆಚ್ಚುವರಿ ಬಂದೋಬಸ್ತ್‌ ಕಲ್ಪಿಸಲಾಗಿದೆ.

- ನಾಗಮಂಗಲದ ದರ್ಗಾ ಬಳಿ ನಡೆದ ಘಟನೆ- ಮೆರವಣಿಗೆ ನಡೆಸುತ್ತಿದ್ದವರ ಮೇಲೆ ದಾಳಿ

ಕನ್ನಡಪ್ರಭ ವಾರ್ತೆ ನಾಗಮಂಗಲಗಣಪತಿ ವಿಸರ್ಜನೆಗೂ ಮುನ್ನ ಪಟ್ಟಣದಲ್ಲಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಬುಧವಾರ ರಾತ್ರಿ ನಡೆದಿದ್ದು, ಪೊಲೀಸ್‌ ಪೇದೆ ಸೇರಿ ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಗಲಾಟೆ ವೇಳೆ ಉದ್ರಿಕ್ತರು ನಾಲ್ಕು ಅಂಗಡಿಗಳು, ದ್ವಿಚಕ್ರವಾಹನಗಳಿಗೆ ಬೆಂಕಿ ಹಚ್ಚಿದ್ದು, ಹಲವು ವಾಹನಗಳಿಗೆ ಹಾನಿ ಮಾಡಿದ್ದಾರೆ. ಘಟನೆಯಿಂದಾಗಿ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೆಚ್ಚುವರಿ ಬಂದೋಬಸ್ತ್‌ ಕಲ್ಪಿಸಲಾಗಿದೆ.

ನಾಗಮಂಗಲ ಟಿ.ಬಿ.ಬಡಾವಣೆಯ ಬದರಿಕೊಪ್ಪಲು ಸರ್ಕಲ್ ಬಳಿ ಗಜಪಡೆ ಯುವಕರ ಸಂಘ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮ ಇತ್ತು. ಅದರಂತೆ ಬದರಿಕೊಪ್ಪಲು ಸರ್ಕಲ್‌ನಿಂದ ಮೆರವಣಿಗೆ ಹೊರಟು ತಾಲೂಕು ಕಚೇರಿ ಬಳಿಯ ಮಂಡ್ಯ ಸರ್ಕಲ್‌ಗೆ ಆಗಮಿಸಿದ ಮೆರವಣಿಗೆ ಅಲ್ಲಿಂದ 200 ಮೀಟರ್ ದೂರದವರೆಗೆ ಮೈಸೂರು ರಸ್ತೆಯಲ್ಲಿ ತೆರಳಿ ಯೂಟರ್ನ್ ಪಡೆದು ವಾಪಸಾಗುವ ವೇಳೆ ದರ್ಗಾ ಬಳಿ ಕಿಡಿಗೇಡಿಗಳು ಏಕಾಏಕಿ ಕಲ್ಲು-ಬಾಟಲಿಗಳನ್ನು ತೂರಿದ್ದಾರೆ. ಇದರಿಂದ ಉದ್ರಿಕ್ತಗೊಂಡ ಯುವಕರ ಗುಂಪು ಕಿಡಿಗೇಡಿಗಳ ಮೇಲೆ ಕಲ್ಲು ತೂರಾಟ ನಡೆಸಿತು. ಈ ವೇಳೆ ಮುಸ್ಲಿಂ ಗುಂಪಿನವರೆಲ್ಲರೂ ಒಂದಾಗಿ ಮೆರವಣಿಗೆ ನಡೆಸುತ್ತಿದ್ದವರ ಮೇಲೆ ಮತ್ತಷ್ಟು ತೀವ್ರವಾಗಿ ಕಲ್ಲು ತೂರಾಟ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರೂ ಸ್ಥಳಕ್ಕೆ ಧಾವಿಸಿ ಪ್ರತಿದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮಂಡ್ಯ-ನಾಗಮಂಗಲ ರಸ್ತೆಯಲ್ಲಿ ಮುಸ್ಲಿಮರ ಗುಂಪು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದರೆ, ಟಿ.ಮರಿಯಪ್ಪ ಸರ್ಕಲ್ ಬಳಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು. ಎರಡೂ ಕಡೆಯಿಂದ ಕಲ್ಲು-ಬಾಟಲಿಗಳ ತೂರಾಟ ತಡರಾತ್ರಿವರೆಗೂ ಮುಂದುವರೆದಿತ್ತು. ಪೊಲೀಸರು ಮೂರ್ನಾಲ್ಕು ಬಾರಿ ಲಾಠಿ ಪ್ರಹಾರ ನಡೆಸಿದರೂ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿರಲಿಲ್ಲ. ಘಟನೆಯಲ್ಲಿ 8 ಮಂದಿ ಹಿಂದೂ ಕಾರ್ಯಕರ್ತರು, ಒಬ್ಬ ಪೊಲೀಸ್ ಪೇದೆ ಗಾಯಗೊಂಡಿದ್ದಾರೆ. ಬಟ್ಟೆ ಅಂಗಡಿ, ದ್ವಿಚಕ್ರವಾಹನದ ಶೋರೂಂ, ಎರಡು ಗ್ಯಾರೇಜ್‌ಗಳು, ಕೆಲ ದ್ವಿಚಕ್ರವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಹಲವು ವಾಹನಗಳು, ಅಂಗಡಿಗಳಿಗೆ ಹಾನಿ ಮಾಡಲಾಗಿದೆ. ಗಲಾಟೆ ವೇಳೆ ಕೆಲ ಮುಸ್ಲಿಂ ಕಿಡಿಗೇಡಿಗಳಿಂದ ಲಾಂಗು, ಮಚ್ಚುಗಳನ್ನೂ ವಶಕ್ಕೆ ಪಡೆಯಲಾಗಿದೆ.ಪ್ರತಿಭಟನೆ: ನಂತರ ಮೆರವಣಿಗೆ ನಡೆಸುತ್ತಿದ್ದ ಯುವಕರ ಗುಂಪು ಪೊಲೀಸ್ ಠಾಣೆ ಬಳಿಗೆ ತೆರಳಿ ಅಲ್ಲೇ ಗಣೇಶ ಮೂರ್ತಿಯನ್ನಿಟ್ಟು ಪ್ರತಿಭಟನೆಗಿಳಿದರು. ಕಲ್ಲು ತೂರಾಟ ನಡೆಸಿ ಘರ್ಷಣೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ಕಳೆದ ವರ್ಷವೂ ದರ್ಗಾ ಬಳಿ ಗಣಪತಿ ಮೆರವಣಿಗೆ ನಡೆಯುವ ವೇಳೆ ಕಲ್ಲು ತೂರಾಟ ನಡೆಸಲಾಗಿತ್ತು. ಆಗಲೂ ಯಾರ ವಿರುದ್ಧವೂ ಕ್ರಮ ಕೈಗೊಂಡಿರಲಿಲ್ಲ. ಮುಂಜಾಗ್ರತಾ ಕ್ರಮವಾಗಿ ಪಟ್ಟಣಕ್ಕೆ ಹೆಚ್ಚುವರಿ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ