ಕನ್ನಡಪ್ರಭ ವಾರ್ತೆ ಮಂಡ್ಯ ಕೆರಗೋಡು ಧ್ವಜ ಸ್ತಂಭದಲ್ಲಿದ್ದ ಹನುಮಧ್ವಜ ತೆರವು ವಿರೋಧಿಸಿ ನಡೆದ ಪಾದಯಾತ್ರೆ ವೇಳೆ ಕುರುಬರ ವಿದ್ಯಾರ್ಥಿ ನಿಲಯದ ಮೇಲೆ ಕಲ್ಲು ತೂರಾಟ ನಡೆಸಿ ಭಕ್ತ ಕನಕದಾಸ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಫ್ಲೆಕ್ಸ್ ಹರಿದು ಅವಮಾನ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಜಿಲ್ಲಾ ಕುರುಬರ ಸಂಘ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿತು.
ಬೆಂಗಳೂರು– ಮೈಸೂರು ಹೆದ್ದಾರಿ ಬದಿಯಲ್ಲಿರುವ ಜಿಲ್ಲಾ ಕುರುಬರ ಸಂಘದ ವಿದ್ಯಾರ್ಥಿ ನಿಲಯದ ಕಿಟಕಿ ಗಾಜುಗಳನ್ನು ಕಲ್ಲು ಮತ್ತು ದೊಣ್ಣೆಯಿಂದ ಹೊಡೆದು ಕಿಡಿಗೇಡಿಗಳು ದೌರ್ಜನ್ಯ ಮಾಡಿದ್ದಾರೆ, ಅದೇ ರೀತಿ ದಾಸ ಶ್ರೇಷ್ಠ ಭಕ್ತ ಕನಕದಾಸರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರ ಫ್ಲೆಕ್ಸ್ ಗಳಿಗೂ ಸಹ ಅವಮಾನ ಮಾಡುವ ಮೂಲಕ ಹಿಂದುಳಿದ ಸಮುದಾಯದ ವಿರುದ್ಧ ದ್ವೇಷ ಸಾಧಿಸಿದ್ದಾರೆ. ದೌರ್ಜನ್ಯ ದಬ್ಬಾಳಿಕೆ ಮಾಡಿದ ಕಿಡಿಗೇಡಿಗಳನ್ನು ಬಂಧಿಸಬೇಕು. ಕುಮ್ಮಕ್ಕು ನೀಡಿದವರ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಮುಖಂಡ ದಡದಪುರ ಶಿವಣ್ಣ ಮಾತನಾಡಿ, ಜಿಲ್ಲೆಯಲ್ಲಿ ಜನರ ನೆಮ್ಮದಿ ಹಾಳು ಮಾಡಲು ಮುಂದಾಗಿರುವ ಬಿಜೆಪಿ ಜೆಡಿಎಸ್ ಶಾಂತಿ ಕದಡಿ ಕೋಮು ದಳ್ಳುರಿಗೆ ಹುನ್ನಾರ ಮಾಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯರ ಜನಪರ ಯೋಜನೆ ಸಹಿಸದೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಷಡ್ಯಂತ್ರ ಮಾಡುತ್ತಿವೆ ಎಂದು ಆರೋಪಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಗುರಿಯಾಗಿಸಿ ದಾಂಧಲೆ ಮಾಡಿದ್ದಾರೆ. ಕಿಡಿಗೇಡಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ವಹಿಸಬೇಕು, ಜಿಲ್ಲೆಯ ಜನತೆ ಕೋಮು ದ್ವೇಷಕ್ಕೆ ಅವಕಾಶ ಮಾಡಿಕೊಡಬಾರದು, ಕೋಮುವಾದಿಗಳು ಸೃಷ್ಟಿಸುವ ಕೋಮು ದಳ್ಳುರಿಯಿಂದ ಜನರ ಬದುಕು ನಾಶವಾಗಲಿದೆ, ಈಗಾಗಲೇ ರಾಜ್ಯದ ಕರಾವಳಿ ಪ್ರದೇಶದಲ್ಲಿ ಕೋಮು ದಳ್ಳುರಿಗೆ ಜನರ ಬದುಕು ಸರ್ವನಾಶವಾಗಿ ಅಭಿವೃದ್ಧಿ ಸಂಪೂರ್ಣವಾಗಿ ಕುಂಠಿತವಾಗಿರುವುದನ್ನು ನೋಡಿದ್ದೇವೆ, ಜಿಲ್ಲೆಯ ಜನತೆ ಇದಕ್ಕೆ ಅವಕಾಶ ಮಾಡಿಕೊಡದೆ ನೆಮ್ಮದಿಯಿಂದ ಬಾಳ್ವೆ ನಡೆಸಲು ಮುಂದಾಗಬೇಕು ಎಂದು ಮನವಿ ಮಾಡಿದರು.