‘ಮಾನವ ಕಳ್ಳ ಸಾಗಾಣಿಕೆಯ ಹೊಸ ಆಯಾಮಗಳು’ ವಿಚಾರವಾಗಿ ನಡೆದ ಕಾರ್ಯಾಗಾರ । ಮಕ್ಕಳ ಬದುಕು, ಭವಿಷ್ಯ ರಕ್ಷಣೆ ಸಮಾಜದ ಹೊಣೆ: ಪ್ರಭು
ಮಾನವೀಯ ಸಮಾಜ, ದೇಶದ ಅಭಿವೃದ್ಧಿಗೆ ಮುಳ್ಳಾಗಿರುವ ಮಾನವ ಕಳ್ಳ ಸಾಗಾಣಿಕೆಯನ್ನು ಸಂಪೂರ್ಣ ನಿರ್ಮೂಲನೆ ಮಾಡಬೇಕು. ಇದಕ್ಕಾಗಿ ಪ್ರತಿಯೊಬ್ಬರು ತಮ್ಮ ಪಾಲಿನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮನವಿ ಮಾಡಿದರು.
ಗುರುವಾರ ನಗರದ ಬಾಲಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮೈಸೂರಿನ ಒಡನಾಡಿ ಸೇವಾ ಸಂಸ್ಥೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ತಿಪಟೂರಿನ ಬದುಕು ಸಂಸ್ಥೆ ಸಹಯೋಗದಲ್ಲಿ ‘ಮಾನವ ಕಳ್ಳ ಸಾಗಾಣಿಕೆಯ ಹೊಸ ಆಯಾಮಗಳು’ ಎಂಬ ವಿಚಾರವಾಗಿ ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.14 ವರ್ಷದೊಳಗಿನ ಸುಮಾರು 36 ಕೋಟಿ ಮಕ್ಕಳು ನಮ್ಮ ದೇಶದಲ್ಲಿದ್ದಾರೆ. ಅವರ ಬದುಕು, ಭವಿಷ್ಯ ರೂಪಿಸಲು ಎಲ್ಲರೂ ಕಾಳಜಿವಹಿಸಬೇಕು. ಮಕ್ಕಳು ಹುಟ್ಟಿದಾಗಿನಿಂದ ಕೊನೆಯವರೆಗೆ ಅವರು ಜವಾಬ್ದಾರಿಯುವ ಪ್ರಜೆಗಳನ್ನಾಗಿ ರೂಪಿಸಿಲು ವಿವಿಧ ಹಂತದಲ್ಲಿ ಅವರ ಬದುಕಿನಲ್ಲಿ ಬರುವ ಪ್ರತಿಯೊಬ್ಬರೂ ಹೊಣೆಗಾರರಾಗಿರುತ್ತಾರೆ. ಅವರು ತಮ್ಮ ಜವಾಬ್ದಾರಿ ಕಡೆಗಣಿಸಿದರೆ ಮಕ್ಕಳ ಭವಿಷ್ಯದ ಜೊತೆಗೆ ದೇಶದ ಅಭಿವೃದ್ಧಿ ಹಾಗೂ ಭವಿಷ್ಯಕ್ಕೂ ಮಾರಕವಾಗುತ್ತದೆ ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಮಾತನಾಡಿ, ಮಾನವ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಮಾನವ ಕಳ್ಳ ಸಾಗಾಣಿಕೆ ಡ್ರಗ್ಸ್ಗಿಂತಲೂ ಅಪಾಯಕಾರಿ. ಮಕ್ಕಳು ಹಾಗೂ ಮಹಿಳೆಯರು ಒಂದಲ್ಲೊಂದು ರೀತಿಯಲ್ಲಿ ಶೋಷಣೆಗೆ ಒಳಗಾಗುತ್ತಿದ್ದಾರೆ. ಹೆಣ್ಣುಮಕ್ಕಳನ್ನು ಮಾರಾಟ ಮಾಡುವ ದುಷ್ಟಕೂಟಗಳ ಬಗ್ಗೆ ಜನ ಜಾಗೃತರಾಗಿರಬೇಕು, ಅಂತಹ ಕೂಟಗಳಿಗೆ ಕಡಿವಾಣ ಹಾಕಲು ಸಂಬಂಧಿಸಿದ ಇಲಾಖೆಗಳ ಗಮನಕ್ಕೆ ತಂದು ಸಹಕರಿಸಬೇಕು. ಮಾನವ ಸಂಪನ್ಮೂಲ ಯಾವಕಡೆ ಸಾಗುತ್ತಿದೆ ಎಂಬ ಎಚ್ಚರಿಕೆ ಎಲ್ಲರಲ್ಲೂ ಇರಬೇಕು, ತಪ್ಪುಗಳನ್ನು ಸರಿಪಡಿಸಿ ಸರಿದಾರಿಗೆ ತರುವ ಪ್ರಯತ್ನದಲ್ಲಿ ಎಲ್ಲರೂ ಕೈ ಜೋಡಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಮಾತನಾಡಿ, ಹಣ ಸಂಪಾದನೆ ಹಾಗೂ ಲೈಂಗಿಕ ಬಳಕೆಗಾಗಿ ಹೆಣ್ಣುಮಕ್ಕಳನ್ನು ಮಾರಾಟ ಮಾಡುವುದು ದಂದೆಯಾಗಿ ಕಂಡುಬಂದಿದೆ. ಅಂತಹ ಜಾಲವನ್ನು ಬುಡಮಟ್ಟದಿಂದಲೇ ಮಟ್ಟಹಾಕಬೇಕು. ಮಾನವ ಕಳ್ಳ ಸಾಗಾಣಿಕೆ, ಮಕ್ಕಳ ಶೋಷಣೆ ಪ್ರಕರಣಗಳು ಗಮನಕ್ಕೆ ಬಂದರೆ ತಕ್ಷಣ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೆ ಆರಂಭದಲ್ಲೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಕಾಲ ಬದಲಾದಂತೆ ಅಪರಾಧಗಳ ಸ್ವರೂಪವೂ ಬದಲಾಗುತ್ತಿದೆ. ತಕ್ಕನಾದ ಕಾನೂನು ಬದಲಾವಣೆ ಹಾಗೂ ಅಪರಾಧಿಗಳ ಪತ್ತೆಗೆ ಇಲಾಖೆಗಳು ತಂತ್ರಜ್ಞಾನದ ತಿಳುವಳಿಕೆ ಬೆಳೆಸಿಕೊಂಡು ಇಂತಹ ಅಪರಾಧ ಕೃತ್ಯ ತಡೆಯಬೇಕು. ಅಪ್ರಾಪ್ತ ಮಕ್ಕಳನ್ನು ಕಾಪಾಡುವ ವಿಚಾರದಲ್ಲಿ ಜಾತಿ, ಧರ್ಮ, ಆರೋಪಿಯ ಸ್ಥಾನಮಾನಕ್ಕಿಂಥಾ ಸಂವಿಧಾನವೇ ಪೂಜ್ಯ ಎಂದು ಭಾವಿಸಿ, ಎಲ್ಲರಿಗೂ ಒಂದೇ ರೀತಿಯ ಕಾನೂನು ಬಳಕೆ ಮಾಡಬೇಕು ಎಂದು ಹೇಳಿದರು.
ಕೋಟ್............
ನೂರುನ್ನೀಸ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ