ಗದಗ: ಬೆಟಗೇರಿ ಹೊರವಲಯದಲ್ಲಿರುವ ದಂಡಿನ ದುರ್ಗಮ್ಮ ದೇವಸ್ಥಾನದ ಪಕ್ಕದಲ್ಲಿಯೇ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಪೈಪ್ಲೈನ್ ಕಾಮಗಾರಿ ನಡೆಸುವುದನ್ನು ತಕ್ಷಣವೇ ನಿಲ್ಲಿಸಬೇಕು ಇದರಿಂದ ದೇವಸ್ಥಾನಕ್ಕೆ ತೊಂದರೆಯಾಗಲಿದೆ ಎಂದು ಆಗ್ರಹಿಸಿ ಬುಧವಾರ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಭಕ್ತರು ಗದುಗಿನಲ್ಲಿ ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ದೇವಾಲಯವು ವಿಶೇಷವಾಗಿ ಹರಣಶಿಕಾರಿ ಸಮುದಾಯದ ಆರಾಧ್ಯ ದೈವವಾಗಿ ಪ್ರಸಿದ್ಧಿ ಪಡೆದಿದೆ. ದಂಡಿನ ದುರ್ಗಮ್ಮ ದೇವಾಲಯವನ್ನು ಯಾವುದೇ ಕಾರಣಕ್ಕೂ ಎತ್ತಂಗಡಿ ಮಾಡಬಾರದು. ಪೈಪ್ಲೈನ್ ಮಾರ್ಗವನ್ನು ಮರು ಪರಿಶೀಲಿಸಬೇಕೆಂದು ಆಗ್ರಹಿಸಿದರು. ಸಿಂಗಟಾಲೂರು ಏತ ನೀರಾವರಿ ಯೋಜನೆಯಡಿ ರೈತರ ಜಮೀನುಗಳಿಗೆ ನೀರಾವರಿ ಪೈಪ್ ಅಳವಡಿಸಲು ಯಾವದೇ ರೀತಿಯ ವಿರೋಧವಿಲ್ಲ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ದೇವಾಲಯದ ಕೆಳಭಾಗದಿಂದ ಪೈಪ್ಲೈನ್ ಅಳವಡಿಸುತ್ತಿರುವುದು ದೇವಾಲಯದ ಅಸ್ತಿತ್ವಕ್ಕೆ ಧಕ್ಕೆ ಬರಲಿದೆ.
ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಸಮಾಲೋಚನೆ ನಡೆಸಿದ ನಂತರವೇ ಅಂತಿಮ ನಿರ್ಧಾರ ಕೈಗೊಳ್ಳಬೇಕು. ಲಕ್ಷಾಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ಗೌರವ ನೀಡಿ ದಂಡಿನ ದುರ್ಗಮ್ಮ ದೇವಾಲಯವನ್ನು ಸಂರಕ್ಷಿಸಲು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ಮನವಿಯಲ್ಲಿ ದೇವಾಲಯವನ್ನು ಸ್ಥಳಾಂತರಿಸದಂತೆ ಆದೇಶ ನೀಡುವುದು, ಪೈಪ್ಲೈನ್ಗೆ ಪರ್ಯಾಯ ಮಾರ್ಗವನ್ನು ಪರಿಶೀಲಿಸುವುದು, ಪುರಾತತ್ವ ಇಲಾಖೆ, ಭೂವಿಜ್ಞಾನ ಹಾಗೂ ದೇವಾಲಯ ಸಂರಕ್ಷಣಾ ತಜ್ಞರಿಂದ ತಾಂತ್ರಿಕ ಪರಿಶೀಲನೆ ನಡೆಸುವುದು, ವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ಕೈಗೊಳ್ಳುವುದು, ಜಿಲ್ಲಾಡಳಿತ, ನೀರಾವರಿ ನಿಗಮ, ತಜ್ಞರು ಹಾಗೂ ಭಕ್ತರ ಪ್ರತಿನಿಧಿಗಳನ್ನು ಒಳಗೊಂಡ ಮೇಲ್ವಿಚಾರಣಾ ಸಮಿತಿ ರಚಿಸುವುದು ಮತ್ತು ದೇವಾಲಯದ ಸಂರಕ್ಷಣೆಗೆ ಲಿಖಿತ ಭರವಸೆ ನೀಡುವಂತೆ ಒತ್ತಾಯಿಸಲಾಗಿದೆ.