ಪೋಕ್ಸೊ, ಬಾಲ್ಯ ವಿವಾಹ, ಭ್ರೂಣ ಹತ್ಯೆ ತಡೆಯಿರಿ

KannadaprabhaNewsNetwork | Published : Sep 15, 2024 1:51 AM

ಆಧುನಿಕ ದಿನಗಳಲ್ಲಿಯೂ ಜನರಲ್ಲಿ ಮೌಢ್ಯತೆ ಹೆಚ್ಚಾಗಿದ್ದು, ಅದನ್ನು ಹೋಗಲಾಡಿಸುವಲ್ಲಿ ಹೆಚ್ಚು ಅರಿವು ಮತ್ತು ಜಾಗೃತಿ ಮೂಡಿಸಬೇಕು. ಹೆಣ್ಣು ಮತ್ತು ಗಂಡು ಮಕ್ಕಳಲ್ಲಿ ಇರುವ ಭೇದ-ಭಾವದ ಮನೋಭಾವನೆ ದೂರವಾಗಬೇಕು.

ಧಾರವಾಡ:

ರಾಜ್ಯದಲ್ಲಿ ನಡೆಯುತ್ತಿರುವ ಪೋಕ್ಸೊ, ಬಾಲ್ಯ ವಿವಾಹ, ಭ್ರೂಣ ಹತ್ಯೆ ಪ್ರಕರಣ ತಡೆಗೆ ಪ್ರತಿಯೊಬ್ಬರು ಮುಂದಾಗಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಹೇಳಿದರು.

ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಸಭಾಭವನದಲ್ಲಿ ಆಯೋಜಿಸಿದ್ದ ಜಿಲ್ಲೆಯಲ್ಲಿರುವ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಜಿಲ್ಲೆಯಲ್ಲಿರುವ ವಸತಿ ನಿಲಯದ ನಿಲಯ ಪಾಲಕರಿಗೆ ಮಕ್ಕಳ ರಕ್ಷಣೆಗಾಗಿ ಇರುವ ವಿವಿಧ ಕಾಯ್ದೆಗಳ ಕುರಿತು ನಡೆದ ತರಬೇತಿ ಉದ್ಘಾಟಿಸಿದ ಅವರು, ಇಂದಿನ ಸಮಾಜದಲ್ಲಿ ನೈತಿಕತೆ ಕಡಿಮೆಯಾಗುತ್ತಿದೆ. ಇದನ್ನು ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕು ಎಂದರು.

ಆಧುನಿಕ ದಿನಗಳಲ್ಲಿಯೂ ಜನರಲ್ಲಿ ಮೌಢ್ಯತೆ ಹೆಚ್ಚಾಗಿದ್ದು, ಅದನ್ನು ಹೋಗಲಾಡಿಸುವಲ್ಲಿ ಹೆಚ್ಚು ಅರಿವು ಮತ್ತು ಜಾಗೃತಿ ಮೂಡಿಸಬೇಕು. ಹೆಣ್ಣು ಮತ್ತು ಗಂಡು ಮಕ್ಕಳಲ್ಲಿ ಇರುವ ಭೇದ-ಭಾವದ ಮನೋಭಾವನೆ ದೂರವಾಗಬೇಕು. 18 ವರ್ಷದ ಒಳಗಿನ ಯಾವುದೇ ಮಗು ಕೆಲಸಕ್ಕೆ ಸೇರದೇ ಶಾಲೆಯಲ್ಲಿ ತನ್ನ ಬಾಲ್ಯ ಕಳೆಯಬೇಕು. ಈ ನಿಟ್ಟಿನಲ್ಲಿ ಸದರಿ ಕಾರ್ಯಕ್ರಮವು ತುಂಬಾ ಉಪಯುಕ್ತವಾಗಿದೆ. ಶಿಬಿರಾರ್ಥಿಗಳು ಇದರ ಮಾಹಿತಿ ಪಡೆದು ಮಕ್ಕಳ ಹಕ್ಕುಗಳ ರಕ್ಷಣೆಗೆ ಶ್ರಮಿಸಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಉಪನಿರ್ದೇಶಕಿ ಡಾ. ಎಚ್.ಎಚ್. ಕುಕನೂರ ಮಾತನಾಡಿ, ಮಕ್ಕಳು ಓದಿನಲ್ಲಿ ಹಿಂದಿರುವ ಅಥವಾ ಮನೆಯಲ್ಲಿ ತೊಂದರೆ ಇರುವಂತಹ ಮಕ್ಕಳ ಕಡೆಗೆ ಹೆಚ್ಚು ಗಮನಹರಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಅವರನ್ನು ಮರಳಿ ಶಾಲೆಗೆ ಸೇರಿಸುವುದು ಅತೀ ಅವಶ್ಯವಾಗಿದೆ. ಇತ್ತಿಚೀನ ದಿನಗಳಲ್ಲಿ ಬಾಲ್ಯ ವಿವಾಹಗಳು ಹೆಚ್ಚಾಗುತ್ತಿದ್ದು, ಇದರ ಕುರಿತು ಶಾಲೆ, ಹಾಸ್ಟೆಲ್‌ಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಪ್ರತಿಯೊಂದು ಮಗುವಿಗೂ ಒಳ್ಳೆಯ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶಗಳ ಬಗ್ಗೆ ತಿಳಿವಳಿಕೆಯನ್ನು ಎಲ್ಲ ಶಾಲೆ ಹಾಗೂ ಹಾಸ್ಟೆಲ್‌ಗಳಲ್ಲಿ ಕಡ್ಡಾಯವಾಗಿ ನೀಡಬೇಕು ಎಂದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ, ಕೊಪ್ಪಳ ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ರಾಘವೇಂದ್ರ ಭಟ್ ಮಾತನಾಡಿದರು. ಮಕ್ಕಳ ರಕ್ಷಣಾಧಿಕಾರಿ ನೀತಾ ವಾಡಕರ ಸ್ವಾಗತಿಸಿದರು. ಗೋಪಾಲ ಲಮಾಣಿ ಇದ್ದರು. ಮಹ್ಮದ್‌ ಅಲಿ ನಿರೂಪಿಸಿದರು. ಕರೆಪ್ಪ ಕೌಜಲಗಿ ವಂದಿಸಿದರು.