ಮೋದಿಯವರನ್ನು ಪ್ರಧಾನ ಮಂತ್ರಿ ಮಾಡುವುದಕ್ಕೆ ಎಲ್ಲರೂ ಸೇರಿ ಪ್ರಯತ್ನಿಸುತ್ತೇವೆ. ಯಾವುದೇ ನಿರ್ಲಕ್ಷ್ಯ ಮಾಡದೇ ಕಾರ್ಯಕರ್ತರು ಕಮಲದ ಹೂವಿನ ಗೆಲುವಿಗೆ ಪ್ರಯತ್ನಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದರು.
ಸಿದ್ದಾಪುರ: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ರಾಷ್ಟ್ರದ ಉಳಿವಿಗೆ ಅಗತ್ಯವಾಗಿದೆ. ಪುನಃ ದೇಶದ ಪ್ರಧಾನಿ ಆಗಬೇಕು ಎಂದು ಭಾರತದ ಪ್ರಜೆಗಳು ಮಾತ್ರ ಅಲ್ಲ, ಇಡೀ ವಿಶ್ವದ ನಾಯಕರು ಹೇಳುತ್ತಿದ್ದಾರೆ. ವಿಕಸಿತ ಭಾರತಕ್ಕಾಗಿ ಅವರ ಕೈಬಲಪಡಿಸಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಲೋಕಸಭಾ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಪಟ್ಟಣದ ಹೊಸೂರಿನಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ, ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕಾದರೆ ಪಕ್ಷದ ಕಾರ್ಯಕರ್ತರು ಹಗಲಿರುಳು ಶ್ರಮಿಸಬೇಕಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಪ್ರತಿಯೊಬ್ಬರಿಗೂ ಅರಿವು ಮೂಡಬೇಕಿದೆ. ಕಾಂಗ್ರೆಸ್ ಅಭಿವೃದ್ಧಿ ಶೂನ್ಯ. ಯಾವುದೇ ಅಭಿವೃದ್ಧಿ ಇಲ್ಲ. ಗ್ಯಾರಂಟಿ ಯೋಜನೆ ಸಮರ್ಪಕವಾಗಿ ಜನತೆಗೆ ತಲುಪುತಿಲ್ಲ. ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯನ್ನು ಬಿಟ್ಟು ಜಾತಿ, ಪ್ರಾಂತ ಎಂದು ಹೇಳುತ್ತ ಒಡೆದು ಆಳುವ ಕೆಲಸ ಮಾಡುವುದರ ಜತೆಗೆ ಜನರ ದಿಕ್ಕನ್ನು ತಪ್ಪಿಸುತ್ತಿದೆ. ನಮ್ಮ ಪಕ್ಷದಲ್ಲಿ ಅಭಿಪ್ರಾಯ ಭೇದಗಳಿಂದ ಕೆಲವು ವ್ಯತ್ಯಾಸಗಳಾಗಿವೆ. ಈ ಹಿಂದಿನ ಕಹಿ ಘಟನೆ ಮರೆತು ನಾವೆಲ್ಲರೂ ಒಂದಾಗಿ ಬಿಜೆಪಿಯನ್ನು ಗೆಲ್ಲಿಸಬೇಕು. ಮೋದಿಯವರನ್ನು ಪ್ರಧಾನ ಮಂತ್ರಿ ಮಾಡುವುದಕ್ಕೆ ಎಲ್ಲರೂ ಸೇರಿ ಪ್ರಯತ್ನಿಸುತ್ತೇವೆ. ಯಾವುದೇ ನಿರ್ಲಕ್ಷ್ಯ ಮಾಡದೇ ಕಾರ್ಯಕರ್ತರು ಕಮಲದ ಹೂವಿನ ಗೆಲುವಿಗೆ ಪ್ರಯತ್ನಿಸಬೇಕು ಎಂದರು.
ಸಮಾವೇಶ ಉದ್ಘಾಟಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಅವರು, ಕಾರ್ಯಕರ್ತರು ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೇ ವ್ಯಕ್ತಿಗಿಂತ ಪಕ್ಷ ಮುಖ್ಯ. ಪಕ್ಷಕ್ಕಿಂತ ದೇಶ ಮುಖ್ಯ ಎನ್ನುವುದನ್ನು ಮನವರಿಕೆ ಮಾಡಿಕೊಂಡು ಬಿಜೆಪಿಯನ್ನು ಗೆಲ್ಲಿಸುವುದಕ್ಕೆ ಪ್ರಯತ್ನಿಸಬೇಕು ಎಂದರು.
ಜೆಡಿಎಸ್ ಮುಖಂಡ ಉಪೇಂದ್ರ ಪೈ ಮಾತನಾಡಿ, ಜೆಡಿಎಸ್ನ ಹಿರಿಯರಾದ ಹಾಗೂ ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಸೂಚನೆಯ ಮೇರೆಗೆ ಬಿಜೆಪಿಯೊಂದಿಗೆ ಸಕ್ರಿಯವಾಗಿ ಪಾಲ್ಗೊಂಡು ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.