ಬಳ್ಳಾರಿ: ವೈದ್ಯಕೀಯ ಪದವಿ ಪಡೆದ ನಂತರ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ ಕಾಯ್ದೆಯಡಿ ನೋಂದಣಿ ಮಾಡಿಕೊಳ್ಳದೇ ಕ್ಲಿನಿಕ್ ಅಥವಾ ಆಸ್ಪತ್ರೆಗಳನ್ನು ಆರಂಭಿಸುವ ವೈದ್ಯರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಎಚ್ಚರಿಸಿದ್ದಾರೆ. ನಗರದ ನೂತನ ಜಿಲ್ಲಾಡಳಿತ ಭವನದ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ "ಜಿಲ್ಲಾ ನೋಂದಣಿ ಮತ್ತು ಕುಂದುಕೊರತೆಗಳ ಸಭೆ''''ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಅಧಿಕೃತ ವೈದ್ಯಕೀಯ ಪದವಿ ಇಲ್ಲದೆ ಸಾರ್ವಜನಿಕರ ಆರೋಗ್ಯದೊಂದಿಗೆ ಚೆಲ್ಲಾಟವಾಡುವ ನಕಲಿ ವೈದ್ಯರ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಅಂತಹವರ ವಿರುದ್ಧ ನೇರವಾಗಿ ಎಫ್.ಐ.ಆರ್ ದಾಖಲಿಸಬೇಕು ಎಂದು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಮ್ಮ ಮನೆ ಅಥವಾ ಮಳಿಗೆಗಳನ್ನು ಆಸ್ಪತ್ರೆ, ಕ್ಲಿನಿಕ್ ಅಥವಾ ಲ್ಯಾಬ್ಗಳಿಗೆ ಬಾಡಿಗೆ ನೀಡುವ ಮುನ್ನ ಮಾಲೀಕರು ಎಚ್ಚರಿಕೆ ವಹಿಸಬೇಕು. ಬಾಡಿಗೆದಾರರ ಅಧಿಕೃತ ವೈದ್ಯಕೀಯ ಪ್ರಮಾಣಪತ್ರಗಳನ್ನು ಪರಿಶೀಲಿಸಿದ ನಂತರವೇ ಬಾಡಿಗೆ ಒಪ್ಪಂದ ಮಾಡಿಕೊಳ್ಳಬೇಕು.ಜಿಲ್ಲೆಯ ಆರೋಗ್ಯ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಮತ್ತು ಸಾರ್ವಜನಿಕರಿಗೆ ಗುಣಮಟ್ಟದ ಚಿಕಿತ್ಸೆ ಖಾತ್ರಿಪಡಿಸಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.