ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಗ್ಯಾಸ್ ಏಜೆನ್ಸಿಗಳ ಮುಖ್ಯಸ್ಥರ ಸಭೆ । ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್ ಏಜೆನ್ಸಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್.ಅನುರಾಧ ಹೇಳಿದರು.
ಶುಕ್ರವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಗ್ಯಾಸ್ ಏಜೆನ್ಸಿ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದ ಅವರು, ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ ಕಾಯ್ದೆಯಡಿ ನಿಗದಿತ ಬೆಲೆಗೆ ಮಾರಾಟ ಮಾಡಬೇಕು, ಸಿಲಿಂಡರ್ ಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಅಥವಾ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹ ಏಜೆನ್ಸಿಗಳ ಪರವಾನಗಿ ರದ್ದುಪಡಿಸಲಾಗುವುದು ಎಂದರು.ಜಿಲ್ಲೆಯಲ್ಲಿ ಐ.ಓ.ಸಿ.ಎಲ್, ಎಚ್.ಪಿ.ಸಿ.ಎಲ್ ಮತ್ತು ಬಿಪಿಸಿಎಲ್ ಕಂಪನಿಗಳ ಅಡಿಯಲ್ಲಿ 24 ಗ್ಯಾಸ್ ಏಜೆನ್ಸಿ ಕಾರ್ಯ ನಿರ್ವಹಿಸುತ್ತಿದೆ. ಗೃಹ ಉಪಯೋಗಿ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ. ಗೃಹ ಉಪಯೋಗಿ ಅನಿಲ ಸಿಲಿಂಡರ್ ಬುಕ್ ಮಾಡಲು 25 ದಿನ ಆಗಿರಬೇಕು. ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ, ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದು ತಿಳಿಸಿದರು.
ಗೃಹ ಬಳಕೆಯ ಸಿಲಿಂಡರ್ಗಳನ್ನು ಹೋಟೆಲ್, ರೆಸ್ಟೋರೆಂಟ್ ಅಥವಾ ಇತರ ವಾಣಿಜ್ಯ ಉದ್ದೇಶಗಳಿಗೆ ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಗತ್ಯ ಸೇವೆಗಳಾದ ಶಾಲೆಗಳು ಮತ್ತು ಸರ್ಕಾರಿ ಹಾಗೂ ಖಾಸಗಿ ವಸತಿ ನಿಲಯಗಳಲ್ಲಿ ಅಡುಗೆ ಅನಿಲದ ಕೊರತೆಯಾಗದಂತೆ ವಿತರಕರು ಸರಬರಾಜು ಮಾಡಲು ಕ್ರಮ ವಹಿಸಬೇಕು. ಪ್ರಸ್ತುತ ಪದವಿ ಪೂರ್ವ ಪರೀಕ್ಷೆಗಳು ನಡೆಯುತ್ತಿದ್ದು, ನಂತರ ಎಸ್.ಎಸ್.ಎಲ್.ಸಿ ಮತ್ತು ಪದವಿ ಪರೀಕ್ಷೆಗಳು ನಡೆಯುವುದರಿಂದ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಊಟದಲ್ಲಿ ತೊಂದರೆಯಾಗದಂತೆ ನಿರಂತರ ಅನಿಲ ಪೂರೈಕೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.
ಬೇಸಿಗೆ ಕುಡಿಯುವ ನೀರಿನ ಸಮಸ್ಯೆಗೆ ಆಸ್ಪದ ಬೇಡ:ಬೇಸಿಗೆ ಆರಂಭವಾದ ಹಿನ್ನೆಲೆಯಲ್ಲಿ ಜಿಲ್ಲೆಯ ನಾಲ್ಕು ತಾಲೂಕು ವ್ಯಾಪ್ತಿಯ ಗ್ರಾಮಗಳು ಹಾಗೂ ನಗರಗಳಲ್ಲಿ ಯಾವುದೇ ಕುಡಿಯುವ ನೀರಿನ ಅಭಾವ ಎದುರಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಬೇಕು. ನೀರಿನ ಸಮಸ್ಯೆ ಉಂಟಾಗುವ ಪ್ರದೇಶಗಳಲ್ಲಿ ಬತ್ತಿದ ಬೋರ್ವೆಲ್ ಗಳ ಮರು ಭರ್ತಿ ಮಾಡಿ ಹಾಗೂ ಅಗತ್ಯವಿದ್ದಲ್ಲಿ ಹೊಸ ಬೋರ್ವೆಲ್ ಕೊರೆಯಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಾ ಶ್ರೀ, ಜಿ.ಪಂ ಯೋಜನಾಧಿಕಾರಿ ರಾಮಕೃಷ್ಣ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಪ್ರಕಾಶ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಪ್ರೇಮ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಗ್ಯಾಸ್ ಏಜೆನ್ಸಿಗಳ ಮುಖ್ಯಸ್ಥರು ಉಪಸ್ಥಿತರಿದ್ದರು.