ಯಾದಗಿರಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಅಧ್ಯಾದೇಶ 2025ಅನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ಅದನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳ್ಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಮೈಕ್ರೋ ಫೈನಾನ್ಸ್ ಮತ್ತು ಲೇವಾದೇವಿಗಾರರಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ವ್ಯವಹರಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಕಡ್ಡಾಯವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ಸದರಿ ಸಂಸ್ಥೆಗಳು ತಾವು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ, ಸುಸ್ಥಿ ಸಾಲಗಳ ವಿವರ ಮುಂತಾದವುಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕಾಗಿರುತ್ತದೆ ಎಂದು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದರು.
ಸಾಲ ವಸೂಲಾತಿ ಹಾಗೂ ಸಾಲ ನೀಡಿಕೆಗೆ ಇರುವ ಮಾನದಂಡಗಳ ಕುರಿತು ವಿವರಿಸಿ, ಗ್ರಾಮ ಅಥವಾ ಪಟ್ಟಣಗಳಲ್ಲಿ ಸಾಲ ವಸೂಲಾತಿಗೆ ನಿರ್ವಹಿಸಿರುವ ಅಧಿಕಾರಿಗಳ ಪಟ್ಟಿ ಹಾಗೂ ಸಾಲಗಾರರ ಹೆಸರು ಮತ್ತು ವಿಳಾಸದೊಂದಿಗೆ ಲಿಖಿತ ಮುಚ್ಚಳಿಕೆಯೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೋಂದಣಿಯನ್ನು ಕಡ್ಡಾಯವಾಗಿ ಮಾಡಕೊಳ್ಳಬೇಕು. ಅಲ್ಲದೆ, ಜಿಲ್ಲೆಯಲ್ಲಿರುವ ಮೈಕ್ರೋ ಫೈನಾನ್ಸ್ ಹಾಗೂ ನೀಡಿಕೆ ಏಜೆನ್ಸಿ ಮತ್ತು ಲೇವಾದೇವಿಗಾರರು ಬಡ್ಡಿದರದಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವಂತೆ ತಿಳಿಸಿದ ಅವರು, ಬಡ್ಡಿಯ ದರಗಳನ್ನು ತಮ್ಮ ಕಚೇರಿಯ ಸೂಚನಾ ಫಲಕದಲ್ಲಿ ಅಳವಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪೃಥ್ವಿ ಕ್ ಶಂಕರ ಮಾತನಾಡಿ, ಸಾಲ ವಸೂಲಾತಿ ವೇಳೆ ಆರ್ಬಿಐ ನಿಯಮದಂತೆ ನಡೆದುಕೊಳ್ಳಬೇಕು. ಕಾನೂನುಬಾಹಿರವಾಗಿ ಸಾಲ ವಸೂಲಾತಿಗೆ ಮುಂದಾದರೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸಾಲ ವಸೂಲಿ ಮಾಡುವಾಗ ಜನರನ್ನು ಹಿಂಸಿಸಬಾರದು ಮತ್ತು ಕಿರುಕುಳ ನೀಡಬಾರದು. ಮೈಕ್ರೋ ಫೈನಾನ್ಸ್ ಮತ್ತು ಲೇವಾದೇವಿಗಾರರಿಂದ ಆಧ್ಯಾದೇಶದ ಉಲ್ಲಂಘನೆಯಾದಲ್ಲಿ ಸಂಬಂಧ ಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳುಲಾಗುತ್ತದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ ಮಾತನಾಡಿ, ಮೈಕ್ರೋ ಫೈನಾನ್ಸ್ ಮತ್ತು ಲೇವಾದೇವಿಗಾರರು ಕಡ್ಡಾಯವಾಗಿ ಆರ್.ಬಿ.ಐ ಮಾರ್ಗಸೂಚಿಗಳನ್ನು ಹಾಗೂ ಈ ಅಧ್ಯಾದೇಶದ ಕ್ರಮಗಳನ್ನು ಚಾಚು ತಪ್ಪದೆ ಪಾಲಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಸಹಕಾರ ಸಂಘಗಳ ಉಪ ನಿಬಂಧಕರು ಪವನ್ ಕುಮಾರ್, ಲೀಡ್ ಬ್ಯಾಂಕಿನ ಅಧಿಕಾರಿಗಳು ಸೇರಿದಂತೆ ಸುರಪುರ ಮತ್ತು ಯಾದಗಿರಿಯ 23 ಮೈಕ್ರೋ ಫೈನಾನ್ಸ್ ಹಾಗೂ 10 ಶಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು. ಮೈಕ್ರೋ ಫೈನಾನ್ಸ್ : ಸಹಾಯವಾಣಿಯಾದಗಿರಿ : ಜಿಲ್ಲೆಯ ಮೈಕ್ರೋ ಫೈನಾನ್ಸ್ ಮತ್ತು ಲೇವಾದೇವಿಗಾರರುಗಳ ವಿರುದ್ಧ ದೂರು ದಾಖಲಿಸಲು ಸಹಾಯವಾಣಿ ಆರಂಭಿಸಲಾಗಿದ್ದು, ಮೈಕ್ರೋ ಫೈನಾನ್ಸ್ ಮತ್ತು ಲೇವಾದೇವಿಗಾರರುಗಳ ಕಿರುಕುಳಕ್ಕೆ ಒಳಗಾದವರು ಸಹಾಯವಾಣಿ ಸಂಖ್ಯೆಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲಾಧಿಕಾರಿ ಡಾ.ಸುಶೀಲಾ ತಿಳಿಸಿದ್ದಾರೆ.
ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಯಾದಗಿರ ದೂರವಾಣಿ ಸಂಖ್ಯೆ: 08473-252379, ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ ಯಾದಗಿರಿ ದೂರವಾಣಿ ಸಂಖ್ಯೆ: 08473-200424, ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯವಾಣಿ ಸಂಖ್ಯೆ:08473-253950, ಪೋಲಿಸ್ ಅಧಿಕ್ಷಕರು ಯಾದಗಿರಿ ಕಂಟ್ರೋಲ್ ರೂಮ್ ನಂ: 9480803600 ಅಥವಾ 112 ಸಂಖ್ಯೆಗೆ ಕರೆಮಾಡಿ ತಮ್ಮ ದೂರನ್ನು ದಾಖಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.