ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಧರಣಿ ನಡೆಸಿದ ಪ್ರಮುಖರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ಹಿರಿಯ ಆರ್ಥಿಕ ತಜ್ಞ, ಕೇಂದ್ರದ ಮಾಜಿ ಕಾನೂನು ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಪ್ರತಿಪಾದಿಸಿರುವಂತೆ 2ನೇ ರಾಜ್ಯಗಳ ಮರು-ಸಂಘಟನೆಯ ಆಯೋಗ ರಚನೆಗೆ ಕ್ರಮ ಕೈಗೊಳ್ಳಬೇಕು. ಕೊಡವರ ಹಿತಾಸಕ್ತಿ ರಕ್ಷಿಸಲು ಸಂವಿಧಾನದ 7ನೇ ತಿದ್ದುಪಡಿಯಲ್ಲಿ ಪ್ರತಿಪಾದಿಸಲಾದ ರಾಜ್ಯಗಳ ಮರು-ಸಂಘಟನೆ ಕಾಯಿದೆ 1956ರ ಅಂಡರ್ ಟೇಕಿಂಗ್ಗಳಿಗೆ ರಾಜ್ಯವು ಬದ್ಧವಾಗಿಲ್ಲ. ಅವಿಭಾಜ್ಯ ಮತ್ತು ಸಾಂಪ್ರದಾಯಿಕ ತಾಯ್ನಾಡು ಭಾಗ ‘ಸಿ’ ಕೂರ್ಗ್ ರಾಜ್ಯವು 1956 ರ ನವೆಂಬರ್ 1 ರಂದು ಈಗ ಕರ್ನಾಟಕ ರಾಜ್ಯವಾಗಿರುವ ಅಂದಿನ ವಿಶಾಲ ಮೈಸೂರಿನಲ್ಲಿ ವಿಲೀನವಾದಾಗಿನಿಂದಲೂ ಕೊಡವರನ್ನು 2ನೇ ದರ್ಜೆಯ ನಾಗರೀಕರಂತೆ ಪರಿಗಣಿಸಲಾಗಿದೆ. ಇದು ಗಂಭೀರವಾದ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಎನ್.ಯು.ನಾಚಪ್ಪ ಆರೋಪಿಸಿದರು.ಸಿಎನ್ಸಿಯ ನ್ಯಾಯಸಮ್ಮತ ಬೇಡಿಕೆಗಳ ಪರವಾಗಿ ಧರಣಿಯಲ್ಲಿ ಪಾಲ್ಗೊಂಡವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು, ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.