ಹಾವೇರಿ: ಬಾಲ್ಯವಿವಾಹ ನಿಷೇಧ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಗಳ ಪರಿಣಾಮಕಾರಿ ಮತ್ತು ಪ್ರಯೋಜನಕಾರಿ ಅನುಷ್ಠಾನಕ್ಕೆ ಎಲ್ಲರೂ ಶ್ರಮಿಸಬೇಕು. ಮಹಿಳೆ ಮತ್ತು ಮಕ್ಕಳ ಸಂರಕ್ಷಣೆ ನಮ್ಮ-ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್.ಎಂ.ರಮೇಶ ಅವರು ಹೇಳಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಆಯೋಜಿಸಲಾದ ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಹಾಗೂ ಪೋಕ್ಸೋ ಕಾಯ್ದೆ-2012ರ ಕುರಿತು ಎಲ್ಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಮತ್ತು ಅಂತರಾಷ್ಟ್ರೀಯ ದತ್ತು ಮಾಸಾಚರಣೆ ನವೆಂಬರ್-2025ರ ಅಂಗವಾಗಿ ಕಾನೂನು ಬದ್ಧ ದತ್ತು ಪ್ರಕ್ರಿಯೆ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ, ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಬಾಲ್ಯವಿವಾಹ, ಪೊಕ್ಸೋ ಮತ್ತು ಬಾಲ ಗರ್ಭಿಣಿಯರ ಸಂಖ್ಯೆ ಅಧಿಕವಾಗಿರುವುದು ವಿಷಾದಕರ ಸಂಗತಿಯಾಗಿದೆ. ಮಹಿಳೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಎಲ್ಲರೂ ಕೈಜೋಡಿಸಬೇಕು ಹಾಗೂ ಮನಸ್ಸಿನಿಂದ ಕೆಲಸಮಾಡಬೇಕು. ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು.ಜಗತ್ತಿನಲ್ಲೇ ಬೃಹತ್ ಸಂವಿಧಾನ ಭಾರತ ಸಂವಿಧಾನ ಎನ್ನುವುದು ಹೆಮ್ಮೆಯ ಸಂಗತಿ. ಈ ಸಂವಿಧಾನದಲ್ಲಿ ಅತೀ ಹೆಚ್ಚು ಅನುಚ್ಛೇದಗಳು, ಆರ್ಟಿಕಲ್ ಹಾಗೂ ಸೆಡ್ಯೂಲ್ಗಳಿವೆ. ಆರ್ಟಿಕಲ್ 15 ಮತ್ತು 39 ಬಹಳ ಪ್ರಮುಖವಾಗಿವೆ. ಮಹಿಳಾ ಮತ್ತು ಮಕ್ಕಳ ಸಂರಕ್ಷಣೆಗೆ ಅನೇಕ ಕಾನೂನುಗಳನ್ನು ಜಾರಿಗೆ ತರಲಾಗಿದೆ. ಈ ಎಲ್ಲ ಕಾನೂನುಗಳ ಬಗ್ಗೆ ವಿವಿಧ ಕಾಯ್ದೆಗಳಡಿ ಬರುವ ಶಿಕ್ಷೆ ಹಾಗೂ ದಂಡ ಕುರಿತು ಕೆಳಹಂತದಲ್ಲೇ ಅರಿವು ಹೊಂದಬೇಕು ಎಂದು ಹೇಳಿದರು. ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ್ ಎಲ್., ಮಾತನಾಡಿ, ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಪೋಕ್ಸೋ ಹಾಗೂ ಬಾಲ ಗರ್ಭಿಣಿ ಪ್ರಕರಣ ವರದಿಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಕಳೆದ ಏಪ್ರಿಲ್ ತಿಂಗಳಿಂದ ಸೆಪ್ಟೆಂಬರ್ವರೆಗೆ 84 ಪೋಕ್ಸೋ, 26 ಬಾಲ್ಯ ವಿವಾಹ ಹಾಗೂ 19 ಬಾಲಗರ್ಭಿಣಿಯ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಈ ಪ್ರಕರಣಗಳು ಶೂನ್ಯವಾಗಲು ವಿವಿಧ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಈ ಕಾಯ್ದೆಗಳ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು. ಸಾರ್ವಜನಿಕರ ಮನಮುಟ್ಟುವಂತೆ ಮನವರಿಕೆ ಮಾಡಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ.ಪುನಿತ್ ಅವರು ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆ ಬೋಧಿಸಿದರು.ಕೊಪ್ಪಳ ಯುನಿಶೇಪ್ ಕಾರ್ಯಕ್ರಮ ಯೋಜನಾ ವ್ಯವಸ್ಥಾಪಕ ಹರೀಶ್ ಜೋಗಿ ಅವರು ಬಾಲ್ಯವಿವಾಹ ನಿಷೇಧ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆ ಕುರಿತು ಉಪನ್ಯಾಸ ನೀಡಿದರು.ಪ್ರಚಾರ ಸಾಮಗ್ರಿ ಬಿಡುಗಡೆ: ಇದೇ ಸಂದರ್ಭದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆ ಮತ್ತು ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ ಕುರಿತ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶ್ರೀಶೈಲಜಾ ಎಚ್.ವಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರೇವತಿ ಹೊಸಮಠ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್. ಜಯಾನಂದ, ಜಿ.ಪಂ.ಮುಖ್ಯ ಯೋಜನಾಧಿಕಾರಿ ಎಚ್.ವೈ.ಮೀಸೆ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಗೀತಾ ಪಾಟೀಲ್ ಇದ್ದರು.ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ವಿನಯ ಗುಡದೂರ ನಿರೂಪಿಸಿದರು. ಮಂಗಳಾ ಅಳಗುಂಡಿ ವಂದಿಸಿದರು.