ಹಿರೇಕೆರೂರು: ತಾಲೂಕಿನ ಶಿಕ್ಷಣ ಗುಣಮಟ್ಟ ಹಾಗೂ ಎಸ್ಎಸ್ಎಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಿ ಶ್ರಮಿಸಬೇಕು. ಮಕ್ಕಳ ಶೈಕ್ಷಣಿಕ ಅಭಿವೃದ್ದಿಯ ಬಗ್ಗೆ ಚಿಂತನೆ ನಡೆಸಬೇಕು ಎಂದು ಶಾಸಕ ಯು.ಬಿ. ಬಣಕಾರ ಸೂಚಿಸಿದರು.ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕಿನ ಎಸ್ಎಸ್ಎಲ್ಸಿ ಫಲಿತಾಂಶ ಕುರಿತು ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಅತ್ಯಂತ ಕಳಪೆ ಮಟ್ಟದಲ್ಲಿ ಬಂದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. 8ನೇ ತರಗತಿಯಿಂದ 10 ತರಗತಿಯವರೆಗೂ ಒಂದೇ ತರನಾಗಿ ಹೋಲುವಂತಹ ವಿಷಯಾಧಾರಿತ ಪಠ್ಯ ಪುಸ್ತಕಗಳಿರುತ್ತವೆ. ಮಕ್ಕಳಿಗೆ ಶಿಕ್ಷಕರು ಪ್ರತಿನಿತ್ಯ ಅವರ ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನ ಹರಿಸಬೇಕು. ಭಯಮುಕ್ತ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಬೇಕು ಎಂದರು.
ನಿರಂತರವಾಗಿ ಪುನರಾವರ್ತನೆ ಹಾಗೂ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸಿ, ಶಿಕ್ಷಣ ಗುಣಮಟ್ಟ ಸುಧಾರಣೆಗೆ ಹೆಚ್ಚು ಗಮನ ನೀಡಬೇಕು. ಫಲಿತಾಂಶ ವೃದ್ಧಿಗಾಗಿ ಶಿಕ್ಷಕರ ಪಾತ್ರ ಬಹಳ ಮಹತ್ವದಾಗಿದ್ದು, ಈ ನಿಟ್ಟಿನಲ್ಲಿ ಶಿಕ್ಷಕರು ಆದ್ಯತೆ ಮೇಲೆ ಗಮನ ಹರಿಸಬೇಕು. ತಾಲೂಕಿನ ಸಾಧನೆ ಕಡಿಮೆಯಾಗಿದ್ದು, ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡಬೇಕು ಎಂದರು.ಮಹಾತ್ಮ ಗಾಂಧಿ ಪ್ರೌಢಶಾಲೆಯ ಫಲಿತಾಂಶ ಶೂನ್ಯ ಬಂದ ಹಿನ್ನೆಲೆಯಲ್ಲಿ ಶಿಕ್ಷಕರ ವೇತನ ತಡೆಹಿಡಿಯಲಾಗಿದೆ. ತಾಲೂಕಿನಲ್ಲಿ 73 ಪ್ರೌಢಶಾಲೆಗಳ ಪೈಕಿ ಕೇವಲ 3 ಶಾಲೆಯಲ್ಲಿ ಮಾತ್ರ ಶೇ. 100ರಷ್ಟು ಫಲಿತಾಂಶ ಬಂದಿದ್ದು, ತಾಲೂಕಿನ ಒಟ್ಟಾರೆ ಫಲಿತಾಂಶ ಶೇ. 59.12 ಆಗಿದೆ. ಫಲಿತಾಂಶ ಕಡಿಮೆ ಆದ ಶಾಲೆಗಳ ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಶ್ರೀಧರ ಮಾತನಾಡಿ, ಪ್ರತಿ ಶಾಲೆಯಲ್ಲಿಯೂ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ, ಗುಂಪು ಅಧ್ಯಯನ, ಘಟಕ ಪರೀಕ್ಷೆ ಸೇರಿದಂತೆ ಶಿಕ್ಷಕರಿಗೆ ಪುನಶ್ಚೇತನ ತರಬೇತಿ ಕಾರ್ಯಾಗಾರಗಳ ನಡೆಸುವ ಮೂಲಕ ಗುಣಮಟ್ಟ ಹೆಚ್ಚಿಸಬೇಕು. ಆ ಮೂಲಕ ಉತ್ತಮ ಫಲಿತಾಂಶ ತರಬೇಕು ಎಂದರು.ಸಭೆಯಲ್ಲಿ ಕ್ಷೇತ್ರ ಸಮನ್ವಯಧಿಕಾರಿ ಎನ್. ಸುರೇಶಕುಮಾರ, ಅಕ್ಷರ ದಾಸೋಹ ಸಮನ್ವಯ ಅಧಿಕಾರಿ ಎಚ್.ಎಫ್. ಜಾಡರ ಹಾಗೂ ತಾಲೂಕಿನ ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಇದ್ದರು.ಪ್ರತಿಭಾ ಪುರಸ್ಕಾರ: ಸರ್ಕಾರಿ ನೌಕರರ ಮಕ್ಕಳಿಂದ ಅರ್ಜಿ ಆಹ್ವಾನಹಾವೇರಿ: ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ. 90ಕ್ಕಿಂತ ಅಧಿಕ ಅಂಕ ಗಳಿಸಿದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ಮೊದಲ ಪ್ರಯತ್ನದಲ್ಲೇ 2025ರ ಎಸ್ಸೆಸ್ಸೆಲ್ಸಿ ಅಥವಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಯ ತಂದೆ ಅಥವಾ ತಾಯಿ ರಾಜ್ಯ ಸರ್ಕಾರದ ಯಾವುದೇ ಇಲಾಖೆಯಲ್ಲಿ ಶಾಶ್ವತ ಸರ್ಕಾರಿ ಉದ್ಯೋಗಿಯಾಗಿರಬೇಕು. ನಿಗಮಗಳು, ಮಂಡಳಿಗಳು, ಪ್ರಾಧಿಕಾರಗಳು, ವಿಶ್ವವಿದ್ಯಾಲಯಗಳು, ಖಾಸಗಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಲ್ಲ.
ವಿದ್ಯಾರ್ಥಿಯ ಪಾಸ್ಪೋರ್ಟ್ ಛಾಯಾಚಿತ್ರ ಮತ್ತು ಪ್ರಮಾಣಿಕೃತ ಅಂಕಪಟ್ಟಿ, ಇಲಾಖೆಯ ಸೇವಾ ದೃಢೀಕರಣ ಪತ್ರ, ಜಿಲ್ಲಾ, ತಾಲೂಕು, ಯೋಜನಾ ಶಾಖೆಯ ಅಧ್ಯಕ್ಷರು, ಸಂಘದ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ದೃಢೀಕರಣ ಪತ್ರದೊಂದಿಗೆ ಮೇ 31ರೊಳಗಾಗಿ https Asgeanews.blogspot.comನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹಾವೇರಿ ಶಾಖೆ ಜಿಲ್ಲಾಧ್ಯಕ್ಷ ಮಲ್ಲೇಶ ಕರಿಗಾರ ತಿಳಿಸಿದ್ದಾರೆ.