ಎಲ್ಲ ಗ್ರಾಮ ಪಂಚಾಯಿತಿಗಳನ್ನು ಕ್ಷಯರೋಗ ಮುಕ್ತಗೊಳಿಸಲು ಶ್ರಮಿಸಿ: ಜಿಪಂ ಸಿಇಒ ಮೋನಾ ರೋತ್

KannadaprabhaNewsNetwork |  
Published : Mar 25, 2026, 01:45 AM IST
24ಸಿಎಚ್‌ಎನ್53ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕ್ಷಯರೋಗ ದಿನಾಚರಣೆ ಹಾಗೂ ಕ್ಷಯಮುಕ್ತ ಗ್ರಾಮ ಪಂಚಾಯಿತಿಗಳಿಗೆ ಘೋಷಣಾ ಪತ್ರ ವಿತರಣೆ  ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಉದ್ಘಾಟಿಸಿದರು. | Kannada Prabha

ಸಾರಾಂಶ

ಕಾರ್ಯಕ್ರಮದಲ್ಲಿ ಕ್ಷಯಮುಕ್ತ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳಿಗೆ ಘೋಷಣಾ ಪತ್ರವನ್ನು ಗಣ್ಯರು ವಿತರಿಸಿದರು. ಇದೇ ಸಂದರ್ಭದಲ್ಲಿ ಎಚ್.ಐ.ವಿ ಸ್ಥಿತಿಯನ್ನು ತಿಳಿದುಕೊಳ್ಳುವ ಮಿಷನ್ ಏಡ್ಸ್ ಸುರಕ್ಷತಾ ಅಭಿಯಾನದ ಪೋಸ್ಟರ್ ಅನ್ನು ಬಿಡುಗಡೆಗೊಳಿಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕ್ಷಯರೋಗ ತಡೆಗೆ ಮತ್ತಷ್ಟು ಪರಿಣಾಮಕಾರಿಯಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಎಲ್ಲ ಗ್ರಾಮ ಪಂಚಾಯಿತಿಗಳನ್ನು ಕ್ಷಯರೋಗ ಮುಕ್ತಗೊಳಿಸಬೇಕೆಂದು ಜಿಪಂ ಸಿಇಒ ಮೋನಾ ರೋತ್ ಅವರು ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕ್ಷಯರೋಗ ದಿನಾಚರಣೆ ಹಾಗೂ ಕ್ಷಯಮುಕ್ತ ಗ್ರಾಮ ಪಂಚಾಯಿತಿಗಳಿಗೆ ಘೋಷಣಾ ಪತ್ರ ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ವರ್ಷ ಪ್ರಪಂಚದಲ್ಲಿ ಪತ್ತೆಯಾಗುವ ಕ್ಷಯರೋಗ ಪೈಕಿ ಶೇ. 27ರಷ್ಟು ನಮ್ಮ ದೇಶದಲ್ಲೇ ಕಂಡು ಬರುತ್ತಿದೆ. ಜಿಲ್ಲೆಯಲ್ಲೂ ಕ್ಷಯರೋಗದ ಪ್ರಕರಣಗಳು ಇಳಿಮುಖವಾಗಬೇಕಿದೆ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರವೂ ಅತ್ಯಂತ ಮುಖ್ಯವಾಗಿದ್ದು, ಮತ್ತಷ್ಟು ಪರಿಣಾಮಕಾರಿಯಾಗಿ ಕ್ಷಯರೋಗ ಪ್ರಕರಣಗಳು ಕಡಿಮೆಯಾಗಲು ಕಾರ್ಯನಿರ್ವಹಿಸಬೇಕು ಎಂದರು.

ಕ್ಷಯಮುಕ್ತ ಗ್ರಾಮ ಪಂಚಾಯಿತಿ ಘೋಷಣೆಗೆ 35 ಗ್ರಾಮ ಪಂಚಾಯಿತಿಗಳು ಮೊದಲನೆ ಬಾರಿಗೆ, 15 ಗ್ರಾಮ ಪಂಚಾಯಿತಿಗಳು ಎರಡನೇ ಬಾರಿಗೆ ಹಾಗೂ 5 ಗ್ರಾಮ ಪಂಚಾಯಿತಿಗಳು ಮೂರನೇ ಬಾರಿಗೆ ಆಯ್ಕೆಯಾಗಿವೆ. ಈ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಲಿ. ಕ್ಷಯರೋಗ ನಿರ್ಮೂಲನೆಗೆ ನಿರಂತರ ಪ್ರಯತ್ನ ನಡೆಯಲಿ. ಕ್ಷಯಮುಕ್ತ ಗ್ರಾಮ ಪಂಚಾಯಿತಿ ಅರ್ಹತೆ ಹೊಂದಲು ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ ಅವರು ಮಾತನಾಡಿ, ಕ್ಷಯರೋಗ ತಡೆಯುವಲ್ಲಿ ಇಡೀ ತಂಡವಾಗಿ ಕರ್ತವ್ಯ ನಿರ್ವಹಿಸಬೇಕಿದೆ. ಈಗಾಗಲೇ ಕ್ಷಯಮುಕ್ತ ಗ್ರಾಮ ಪಂಚಾಯಿತಿಗಳಾಗಲು ಮಾಡಿದ ಸಾಧನೆ ನಿರಂತರವಾಗಿರಲು ಪ್ರಯತ್ನಗಳು ಮುಂದುವರಿಯಬೇಕು. ಪಂಚಾಯಿತಿ ವ್ಯಾಪ್ತಿಯಲ್ಲಿ ಕ್ಷಯರೋಗದಂತಹ ಲಕ್ಷಣಗಳು ಕಂಡುಬಂದರೆ ಕೂಡಲೇ ತಪಾಸಣೆಗೆ ಒಳಗಾಗಲು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ಎಂ.ಎಸ್. ರವಿಕುಮಾರ್ ಅವರು ಮಾತನಾಡಿ, ದೇಶದಲ್ಲಿ ಪ್ರತಿವರ್ಷ 27 ಲಕ್ಷಕ್ಕೂ ಹೆಚ್ಚು ಕ್ಷಯರೋಗ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 2024ರಲ್ಲಿ 35 ಗ್ರಾಮ ಪಂಚಾಯಿತಿಗಳನ್ನು ಕ್ಷಯಮುಕ್ತ ಎಂದು ಘೋಷಿಸಲಾಗಿತ್ತು. 2025ರಲ್ಲಿ 55 ಗ್ರಾಮ ಪಂಚಾಯಿತಿಗಳು ಕ್ಷಯಮುಕ್ತವೆಂದು ಘೋಷಿಸಿ ಪ್ರಮಾಣ ಪತ್ರ ಪಡೆಯುತ್ತಿವೆ ಎಂದರು.

ಕಾರ್ಯಕ್ರಮದಲ್ಲಿ ಕ್ಷಯಮುಕ್ತ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳಿಗೆ ಘೋಷಣಾ ಪತ್ರವನ್ನು ಗಣ್ಯರು ವಿತರಿಸಿದರು. ಇದೇ ಸಂದರ್ಭದಲ್ಲಿ ಎಚ್.ಐ.ವಿ ಸ್ಥಿತಿಯನ್ನು ತಿಳಿದುಕೊಳ್ಳುವ ಮಿಷನ್ ಏಡ್ಸ್ ಸುರಕ್ಷತಾ ಅಭಿಯಾನದ ಪೋಸ್ಟರ್ ಅನ್ನು ಬಿಡುಗಡೆಗೊಳಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಸುಂದರೇಶ್, ಡಾ. ರಾಜೇಶ್, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ರಾಜೀವ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇವರ ಅಪಹಾಸ್ಯಕ್ಕೆ ಕ್ಷಮೆ ಕೇಳುವೆ: ರಣವೀರ್‌
ಕ್ಷಯರೋಗ ಮುಕ್ತ ಭಾರತವಾಗಲು ಜಾಗೃತಿ ಅಗತ್ಯ; ಟಿಎಚ್‌ ಒ ಡಾ.ಅಲೀಂ ಪಾಷ