ಸಿದ್ದಾಪುರ: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪೋಡಿ ಮುಕ್ತ ಗ್ರಾಮ ಅಭಿಯಾನವನ್ನು ಜಿಲ್ಲೆಯಲ್ಲಿ ಸಿದ್ದಾಪುರ ತಾಲೂಕು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು, ಶಾಸಕ ಭೀಮಣ್ಣ ನಾಯ್ಕ ಮಂಗಳವಾರ ನಮೂನೆ 1ರಿಂದ ೫ರ ಪ್ರಕರಣದಲ್ಲಿ(ಭೂ ಮಂಜೂರಾತಿ) ಫಲಾನುಭವಿಗಳಿಗೆ ಪೋಡಿ ದುರಸ್ತಿಯಾದ ಪಹಣಿ ಹಾಗೂ ಸರ್ವೆ ನಕಾಶೆ ವಿತರಿಸಿದರು.ಗ್ರಾಮೀಣ ಭಾಗದಲ್ಲಿ ದಶಕದಿಂದ ನನೆಗುದಿಗೆ ಬಿದ್ದಿರುವ ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ವಿಶೇಷ ಮುತುವರ್ಜಿಯಿಂದ ಕಂದಾಯ ಇಲಾಖೆ ಪೋಡಿ ಮುಕ್ತ ಗ್ರಾಮ ಅಭಿಯಾನ ಆರಂಭಿಸಿದೆ. ಅರ್ಜಿ ಸಲ್ಲಿಸದಿದ್ದರೂ ಗ್ರಾಮಗಳ ಎಲ್ಲ ಆಸ್ತಿಗಳ ಭೂಮಾಪನ ಮಾಡಿ ಪೋಡಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಕಾರವಾರ: ನಗರದ ಸೆಂಟ್ ಮೈಕೆಲ್ ಶಾಲೆ ಎದುರಿನ ವೃತ್ತಕ್ಕೆ ನಿಜಶರಣ ಅಂಬಿಗರ ಚೌಡಯ್ಯ ವೃತ್ತ ಎಂದು ಹೆಸರಿಡಲು ಅವಕಾಶ ನೀಡುವಂತೆ ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ ಆಗ್ರಹಿಸಿದರು.ಬೆಂಗಳೂರಿನಲ್ಲಿ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಮಂಗಳವಾರ ಭೇಟಿ ಮಾಡಿ, ಈಗಾಗಲೇ ಕಾರವಾರ ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ವೃತ್ತ ಎಂಬ ಹೆಸರಿಡಲು ಠರಾವು ಮಾಡಲಾಗಿದೆ. ಠರಾವಿನ ಪ್ರತಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ.ಈ ಹಿನ್ನೆಲೆ ಕಾರವಾರ ಸೆಂಟ್ ಮೈಕೆಲ್ ಶಾಲೆಯ ಎದುರು ಇರುವ ವೃತ್ತಕ್ಕೆ ನಿಜಶರಣ ಅಂಬಿಗರ ಚೌಡಯ್ಯ ವೃತ್ತ ಎಂದು ನಾಮಕರಣ ಮಾಡಲು ಆದೇಶಿಸಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಸ್ಪಂದಿಸಿದ ನಿರ್ದೇಶಕ ಕವಳಟ್ಟಿ, ವೃತ್ತಕ್ಕೆ ಹೆಸರಿಡಲು ಯಾವುದೇ ಅಭ್ಯಂತರವಿಲ್ಲ. ಈ ಬಗ್ಗೆ ತುರ್ತು ಕ್ರಮ ಜರುಗಿಸಲಾಗುತ್ತದೆ. ಆದರೆ ಇಲ್ಲಿ ಯಾವುದೇ ಪ್ರತಿಮೆ ಸ್ಥಾಪನೆಗೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.