- ತೈಲ, ಅನಿಲ ಬೆಲೆ ಗಗನಕ್ಕೆ, ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಒಳ್ಳೆಯ ದಿನಗಳಾ? । ಪ್ರಧಾನಿ ರಾಜೀನಾಮೆ ಕಾಂಗ್ರೆಸ್ ಆಗ್ರಹ
ಕನ್ನಡಪ್ರಭ ವಾರ್ತೆ ದಾವಣಗೆರೆ
ಪೆಟ್ರೋಲ್, ಡೀಸೆಲ್, ಎಲ್ಪಿಜಿ, ವಾಣಿಜ್ಯ ಸಿಲಿಂಡರ್ ಬೆಲೆ ಏರಿಸಿದ್ದನ್ನು ಖಂಡಿಸಿ, ನೀಟ್-2026 ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ನೇತೃತ್ವದಲ್ಲಿ ನಗರದ ಶ್ರೀ ಜಯದೇವ ವೃತ್ತದಲ್ಲಿ ಸೋಮವಾರ ಜಿಲ್ಲಾ ಕಾಂಗ್ರೆಸ್ನಿಂದ ಕೇಂದ್ರದ ವಿರುದ್ಧ ಸಿಲಿಂಡರ್ ಪೋಸ್ಟರ್ ಹಿಡಿದು ಪ್ರತಿಭಟನಾ ಧರಣಿ ನಡೆಸಲಾಯಿತು. ಮುಖಂಡರು, ಕಾರ್ಯಕರ್ತರು ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರಹಾಕಿದರು.ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ವಾಣಿಜ್ಯ ಸಿಲಿಂಡರ್ ಹಾಗೂ ಎಲ್ಪಿಜಿ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ನೀಟ್ ಪರೀಕ್ಷೆ ಅಕ್ರಮ ಮತ್ತು ಪತ್ರಿಕೆ ಸೋರಿಕೆ ತಡೆಯಲು ಸಾಧ್ಯವಾಗಿಲ್ಲ. ಇದೇ ನರೇಂದ್ರ ಮೋದಿಯವರ ಒಳ್ಳೆಯ ದಿನಗಳಾ ಎಂದು ಪ್ರಶ್ನಿಸಿದರು.
ನೀಟ್ ಪರೀಕ್ಷೆ ತೆಗೆದುಕೊಂಡು ಹಗಲಿರುಳು ಕಷ್ಟಪಟ್ಟು ಮಧ್ಯಮ ವರ್ಗದ, ಬಡವರ ಮಕ್ಕಳು ಓದಿರುತ್ತಾರೆ. ಕೆಲವರು ಜಮೀನು ಮಾರಾಟ ಮಾಡಿ ಮಕ್ಕಳನ್ನು ಓದಿಸಿದರೆ, ಮತ್ತೆ ಕೆಲವರು ತಾಳಿ, ಬಂಗಾರ ಅಡವಿಟ್ಟು ಉನ್ನತ ವಿದ್ಯಾಭ್ಯಾಸಕ್ಕೆ ಮಕ್ಕಳನ್ನು ಪಾಲಕರು ಕಳಿಸುತ್ತಾರೆ. ನೀಟ್ ಪರೀಕ್ಷೆ ರದ್ದು ಮಾಡಿದ್ದರಿಂದ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಯಾರು ಹೊಣೆ? ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಾವು ಇಲಾಖೆ ಅಧಿಕಾರ ವಹಿಸಿಕೊಂಡು ಕೆಲ ತಿಂಗಳಾಗಿವೆಯೆಂಬ ಉಡಾಫೆ ಮಾತನಾಡಿದ್ದಾರೆ. ನೀಟ್ ಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಅವರು ಆಗ್ರಹಿಸಿದರು.
ಸಿಎನ್ಜಿ ದರ ಏರಿಕೆ ಆಗಿದ್ದರಿಂದ ಆಟೋ ಚಾಲಕರ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ. ಫೆಬ್ರವರಿಯಲ್ಲಿ ಮಧ್ಯಪ್ರಾಚ್ಯದ ಯುದ್ಧ ಶುರುವಾಗಿದೆ. ಆದರೆ, ಎರಡೂವರೆ ತಿಂಗಳ ಬಳಿಕ ಬೆಲೆ ಏರಿಕೆಯಾಗಿದೆ. ಪಂಚ ರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆ ತೈಲ ದರ, ಗ್ಯಾಸ್ ದರ ಹೆಚ್ಚಿಸಲಾಗಿದೆ. ಇದೇನಾ ಮೋದಿ ಆಡಳಿತ ವೈಖರಿ? ಬಡವರು, ದೀನ ದಲಿತರು, ಶೋಷಿತರ ಪರ ಯೋಜನೆ ನೀಡುವುದು ಕಾಂಗ್ರೆಸ್ ಸರ್ಕಾರ. ಹಣದುಬ್ಬರವೂ ಜಾಸ್ತಿಯಾಗಿದೆ. ಪ್ರತಿಯೊಂದು ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಗೆ ದೇಶದ ಜನತೆ ತಕ್ಕ ಪಾಠ ಕಲಿಸಬೇಕು ಎಂದು ತಿಳಿಸಿದರು.
ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ, ಬ್ಲಾಕ್ ಅಧ್ಯಕ್ಷರಾದ ಕೆ.ಜಿ.ಶಿವಕುಮಾರ, ಅಯೂಬ್ ಪೈಲ್ವಾನ್, ಶ್ರೀಕಾಂತ ಬಗರೆ, ಎಸ್.ಕೆ.ಪ್ರವೀಣ ಯಾದವ್, ಮುಜಾಹಿದ್ ಪಾಷಾ, ಕವಿತಾ ಚಂದ್ರಶೇಖರ, ಸುಧಾ ಇಟ್ಟಿಗುಡಿ, ಸರ್ವಮಂಗಳ, ಕಾವ್ಯ, ವರುಣ್ ಬೆಣ್ಣೆಹಳ್ಳಿ ಇತರರು ಇದ್ದರು.
-18ಕೆಡಿವಿಜಿ5: ದಾವಣಗೆರೆಯಲ್ಲಿ ಸೋಮವಾರ ಕೇಂದ್ರದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮಾತನಾಡಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ, ದಿನೇಶ ಶೆಟ್ಟಿ ಮತ್ತಿತರ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.