ತೈಲ ಬೆಲೆ ಏರಿಕೆ ಹಿಂಪಡೆಯುವವರೆಗೂ ಹೋರಾಟ: ಪ್ರಭು ಚವ್ಹಾಣ್‌

KannadaprabhaNewsNetwork |  
Published : Jun 21, 2024, 01:07 AM IST
ಔರಾದ್‌ನಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯ ನೇತೃತ್ವವಹಿಸಿದ್ದ ಶಾಸಕ ಪ್ರಭು ಚವ್ಹಾಣ್‌ ಚಕ್ಕಡಿ ಮೇಲೆ ಬಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. | Kannada Prabha

ಸಾರಾಂಶ

ಆಮೀಶಗಳ ಮೂಲಕ ಜನತೆಗೆ ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ಮೋಸಕ್ಕೆ ದೂಡಿದೆ. ರಾಜ್ಯ ಸರ್ಕಾರ ಜನವಿರೋಧಿ ನೀತಿಯನ್ನು ಕೈಬಿಡುವವರೆಗೆ ತಮ್ಮ ಹೋರಾಟ ನಡೆಯುತ್ತಲೇ ಇರುತ್ತದೆ ಎಂದು ಶಾಸಕ ಪ್ರಭು ಚವ್ಹಾಣ್‌ ಎಚ್ಚರಿಸಿದರು. ಔರಾದ್‌ನಲ್ಲಿ ಶಾಸಕ ಚವ್ಹಾಣ್‌ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ಕನ್ನಡಪ್ರಭ ವಾರ್ತೆ ಔರಾದ್‌

ಚುನಾವಣೆ ಸಂದರ್ಭದಲ್ಲಿ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರ ಪಡೆದು ಮುಖ್ಯಮಂತ್ರಿಯವರು ಜನರನ್ನು ಮೋಸ ಮಾಡುತ್ತಿದ್ದಾರೆ. ಹಿಂದೆ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕೆ ಮಾಡಿದ ಮುಖ್ಯಮಂತ್ರಿಗಳು ತಾವೇ ತೈಲ ಬೆಲೆ ಏರಿಕೆ ಮಾಡಿರುವುದು ವಿಪರ್ಯಾಸ. ರಾಜ್ಯ ಸರ್ಕಾರ ಜನವಿರೋಧಿ ನೀತಿಯನ್ನು ಕೈಬಿಡುವವರೆಗೆ ತಮ್ಮ ಹೋರಾಟ ನಡೆಯುತ್ತಲೇ ಇರುತ್ತದೆ ಎಂದು ಶಾಸಕ ಪ್ರಭು ಚವ್ಹಾಣ್‌ ಎಚ್ಚರಿಸಿದರು.

ಔರಾದ್‌ನಲ್ಲಿ ರಾಜ್ಯ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ವಿರೋಧಿಸಿ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಚವ್ಹಾಣ್‌ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಶಾಸಕರು ಮಾತನಾಡಿ, ಸರ್ಕಾರ ಬಂದು ಒಂದು ವರ್ಷವಾಗಿದೆ. ಸರ್ಕಾರ ರೈತರು, ಬಡವರು, ಕೂಲಿ ಕಾರ್ಮಿಕರಿಗೆ ನೆರವಾಗುವ ಬದಲು ಸಂಕಷ್ಟಕ್ಕೆ ದೂಡುತ್ತಿದೆ. ಈಗಾಗಲೇ ಜನತೆ ಸಂಕಷ್ಟದಲ್ಲಿದ್ದಾರೆ. ಇಂಥಹದರಲ್ಲಿ ತೈಲ ಬೆಲೆ ಏರಿಕೆ ಮಾಡಿರುವುದು ಖಂಡನೀಯ. ಕಾಂಗ್ರೆಸ್‌ ಗ್ಯಾರಂಟಿ ಆಮೀಷಗಳನ್ನು ತೋರಿಸಿ ಜನರನ್ನು ಯಾಮಾರಿಸಿ ರಾಜ್ಯದಲ್ಲಿ ಅಧಿಕಾರ ಪಡೆದಿದೆ ಎಂದು ಆರೋಪಿಸಿದರು.

ಯಾವ ಅಭಿವೃದ್ಧಿಯೂ ಇಲ್ಲದೇ ಸರ್ಕಾರದ ಖಜಾನೆ ಖಾಲಿಯಾಗಿದೆ. ಅಭಿವೃದ್ಧಿ ಕೆಲಸಗಳಿಗೆ ಸರ್ಕಾರದ ಬಳಿ ಹಣವಿಲ್ಲ. ಶಾಸಕರಿಗೂ ಕೂಡ ಅನುದಾನ ಕೊಡುತ್ತಿಲ್ಲ. ಬಡವರ ಪರ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ರಾಜ್ಯದ ಮುಖ್ಯಮಂತ್ರಿ ಅಧಿಕಾರ ಬಂದ ಕೂಡಲೇ ಜನತೆಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಜನವಿರೋಧಿ, ಅಭಿವೃದ್ಧಿ ವಿರೋಧಿಯಾಗಿ ಕೆಲಸ ಮಾಡುತ್ತಿದೆ. ಪೆಟ್ರೋಲ್‌, ಡೀಸಲ್‌ ಬೆಲೆ ಏರಿಕೆ ಮಾಡಿರುವುದೆ ಇದಕ್ಕೆ ಸಾಕ್ಷಿಯಾಗಿದೆ. ಸರ್ಕಾರದ ನೀತಿಯಿಂದ ಜನತೆ ಕಂಗಾಲಾಗಿದ್ದಾರೆ. ಹಾಗಾಗಿ ಪಕ್ಷದ ರಾಜ್ಯಾಧ್ಯಕ್ಷರ ನಿರ್ದೇಶನದಂತೆ ರಾಜ್ಯದಾದ್ಯಂತ ಹೋರಾಟಗಳು ನಡೆಯುತ್ತಿದ್ದು, ಔರಾದ್‌ನಲ್ಲಿಯೂ ಬೃಹತ್‌ ಪ್ರತಿಭಟನೆ ಏರ್ಪಡಿಸಲಾಗಿದೆ. ಬಹಳಷ್ಟು ಸಂಖ್ಯೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ ಸರ್ಕಾರದ ನೀತಿ ಖಂಡಿಸಿದ್ದಾರೆ ಎಂದರು.

ಬಿಜೆಪಿ ಔರಾದ್‌ (ಬಿ) ಮಂಡಲ ಘಟಕದಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ, ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಖಂಡಿಸಿದರು. ಪಟ್ಟಣದ ಎಪಿಎಂಸಿ ಬಳಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ನಿರ್ಧಾರವನ್ನು ವಿರೋಧಿಸಲಾಯಿತು. ಶಾಸಕರು ಹಾಗೂ ಮುಖಂಡರು ಎತ್ತಿನ ಬಂಡಿ ಹತ್ತಿ ತೈಲ ಬೆಲೆ ಏರಿಕೆಯಿಂದ ರೈತರು ಮತ್ತು ಸಾರ್ವಜನಿಕರಿಗೆ ಸಮಸ್ಯೆಯಾಗಿದೆ. ಕೂಡಲೇ ತೈಲ ಬೆಲೆ ಏರಿಕೆ ನಿರ್ಧಾರ ಹಿಂಪಡೆಯಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಔರಾದ್‌ (ಬಿ) ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಮುಖಂಡರಾದ ವಸಂತ ಬಿರಾದಾರ, ಶಿವರಾಜ ಅಲ್ಮಾಜೆ, ಶಿವಾನಂದ ವಡ್ಡೆ, ನಾಗೇಶ ಪತ್ರೆ, ಬಸವರಾಜ ಪಾಟೀಲ್‌, ಶಿವಾಜಿರಾವ ಕಾಳೆ, ಅಶೋಕ ಅಲ್ಮಾಜೆ, ರಾಮರೆಡ್ಡಿ ಪಾಟೀಲ್‌, ಸಂತೋಷ ಪೋಕಲವಾರ, ಕೇರಬಾ ಪವಾರ್‌, ಸಂಜು ವಡೆಯರ್‌, ಬಸವರಾಜ ಹಳ್ಳೆ, ಖಂಡೋಬಾ ಕಂಗಟೆ, ರವೀಂದ್ರ ರೆಡ್ಡಿ, ಸಚಿನ್‌ ಬಿರಾದಾರ, ಸಚಿನ್‌ ರಾಠೋಡ, ಶ್ರೀನಿವಾಸ ಖೂಬಾ, ಸುಜಿತ ರಾಠೋಡ ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌