ಕನ್ನಡಪ್ರಭ ವಾರ್ತೆ ವಿಜಯಪುರ
ಘಟನೆಯ ವಿವರ: ಸೋಮವಾರ ಸಂಜೆ ೩:೫೦ರ ಸುಮಾರಿಗೆ (ಎವರ್ ಗ್ರೀನ್ ಸ್ಕೂಲ್)ಶಾಲೆ ಮುಗಿಸಿ ಅನೀಶ್ ಮನೆಗೆ ತೆರಳುತ್ತಿದ್ದನು. ಶಾಲೆಯಿಂದ ಸುಮಾರು ೨೦೦ ಮೀಟರ್ ದೂರದಲ್ಲಿ ಹೊಂಚು ಹಾಕಿದ್ದ ಎರಡು ಬೀದಿನಾಯಿಗಳು ಏಕಾಏಕಿ ವಿದ್ಯಾರ್ಥಿಯ ಮೇಲೆ ದಾಳಿ ನಡೆಸಿವೆ. ನಾಯಿಗಳು ಅತ್ಯಂತ ಕ್ರೂರವಾಗಿ ಕಚ್ಚಿದ್ದರಿಂದ ಅನೀಶ್ ದೇಹದ ಮೇಲೆ ಗಂಭೀರ ಗಾಯಗಳಾಗಿವೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಶಾಲಾ ಸಿಬ್ಬಂದಿ, ಬಾಲಕನನ್ನು ಶಾಲೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಕೂಡಲೇ ಪೋಷಕರಿಗೆ ಮಾಹಿತಿ ನೀಡಿ, ವಿದ್ಯಾರ್ಥಿಯನ್ನು ವಿಜಯಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು.ಗಾಯವು ತೀವ್ರವಾಗಿದ್ದರಿಂದ ಅದಕ್ಕೆ ಸಂಬಂಧಿಸಿದ ಅಗತ್ಯ ಔಷಧಗಳು ಲಭ್ಯವಿಲ್ಲವೆಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ತಿಳಿಸಿದರು. ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದರು.
ಬಳಿಕ ವಿದ್ಯಾರ್ಥಿಯನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ವೈದ್ಯರು ಗಾಯಗಳಿಗೆ ಹೊಲಿಗೆ ಹಾಕಿ, ಮೂರು ದಿನಗಳ ಕಾಲ ಕಡ್ಡಾಯವಾಗಿ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ.ಪುರಸಭೆಗೆ ಮನವಿ:
ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ. ಶಾಲಾ ವತಿಯಿಂದ ಪುರಸಭೆಗೆ ಅಧಿಕೃತ ಮನವಿ ಪತ್ರ ಸಲ್ಲಿಸಲಾಗಿದ್ದು, ಕೂಡಲೇ ನಾಯಿಗಳ ಹಾವಳಿಯನ್ನು ತಡೆಗಟ್ಟಿ ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.