ನವಲಗುಂದ: ತಂದೆಯ ಸಾವಿನ ದುಃಖದ ನಡುವೆಯೂ ಶಾಲಾ ವಿದ್ಯಾರ್ಥಿನಿಯೋರ್ವಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.
ಘಟನೆ ವಿವರ:
ಗುರುವಾರ ರಾತ್ರಿ ವಿದ್ಯಾರ್ಥಿನಿ ಶಬನಾ ಅವರ ತಂದೆ ಮೃತಪಟ್ಟಿದ್ದರು. ಈ ಹಿನ್ನೆಲೆ ಶುಕ್ರವಾರ ನಡೆಯಬೇಕಿದ್ದ ಪರೀಕ್ಷೆಗೆ ವಿದ್ಯಾರ್ಥಿನಿ ಗೈರು ಹಾಜರಾಗುತ್ತಿರುವ ವಿಷಯ ತಿಳಿದ ಶಾಲಾ ಮುಖ್ಯೋಪಾಧ್ಯಾಯ ಆನಂದ ಭೋವಿ ಅವರು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಬಿ. ಮಲ್ಲಾಡ ಹಾಗೂ ಎಸ್ಡಿಎಂಸಿ ಅಧ್ಯಕ್ಷ ಖಾಜೇಸಾಬ ಹಂಚಿನಾಳ ಮುಲ್ಲಾ ಗಮನಕ್ಕೆ ತಂದಿದ್ದಾರೆ.ಈ ಸಂಬಂಧ ಶಿಕ್ಷಣಾಧಿಕಾರಿಗಳು ಮುಖ್ಯೋಪಾಧ್ಯಾಯರಿಗೆ ಮತ್ತು ಕೆಲ ಶಿಕ್ಷಕರಿಗೆ ವಿದ್ಯಾರ್ಥಿನಿಯ ಮನೆಗೆ ತೆರಳುವಂತೆ ಸೂಚಿಸಿದ್ದಾರೆ. ವಿದ್ಯಾರ್ಥಿನಿಯ ಮನೆಗೆ ತೆರಳಿದ ಶಿಕ್ಷಕರು, ವಿದ್ಯಾರ್ಥಿನಿಯ ಮನವೊಲಿಸಿ, ಆತ್ಮಸ್ಥೈರ್ಯ ತುಂಬಿ ಪರೀಕ್ಷೆ ಬರೆಯುವಂತೆ ಕೋರಿದ್ದಾರೆ. ಅಷ್ಟೇ ಅಲ್ಲದೆ ವಿದ್ಯಾರ್ಥಿನಿಗೆ ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರದ ವರೆಗೆ ವಾಹನದ ವ್ಯವಸ್ಥೆ ಮಾಡಿಕೊಟ್ಟಿದ್ದರು.
ತಂದೆ ಮೃತಪಟ್ಟಿರುವುದರಿಂದ ಬಾಲಕಿಯೋರ್ವಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಗೈರು ಹಾಜರಾಗುತ್ತಿರುವುದು ಗಮನಕ್ಕೆ ಬರುತ್ತಿದ್ದಂತೆ ಶಿಕ್ಷಕರು, ಎಸ್ಡಿಎಂಸಿ ಸದಸ್ಯರಿಗೆ ವಿದ್ಯಾರ್ಥಿನಿಯ ಮನೆಗೆ ಹೋಗಿ ಮನವೊಲಿಸಿ ಆತ್ಮಸ್ಥೈರ್ಯ ತುಂಬಿ ಪರೀಕ್ಷೆ ಬರೆಯುವಂತೆ ಮಾಡಲಾಗಿದೆ ಎಂದು ನವಲಗುಂದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಬಿ. ಮಲ್ಲಾಡ ತಿಳಿಸಿದ್ದಾರೆ.