ಗ್ರಾಮೀಣ ಮತ್ತು ನಗರ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಸಲುವಾಗಿ ಈ ಸಂಸ್ಥೆಯು ಪ್ರಸ್ತುತ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬೇಕಾಗಿರುವ ಅಗತ್ಯ ಶಿಕ್ಷಣವನ್ನು ನೀಡುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಈ ವಿದ್ಯಾಸಂಸ್ಥೆಯು ಹೆಮ್ಮರವಾಗಿ ಬೆಳೆದು ನಿಂತು ಸಾವಿರಾರು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಲಿ.
ಕನ್ನಡಪ್ರಭ ವಾರ್ತೆ ಚನ್ನಪಟ್ಟಣ
ಪ್ರಸ್ತುತ ಸಮಾಜದಲ್ಲಿ ಉತ್ತಮ ಜ್ಞಾನ ಮತ್ತು ನೈಪುಣ್ಯತೆ ಹೊಂದಲು ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕನ್ನು ನಡೆಸಲು ಶಿಕ್ಷಣ ತುಂಬಾ ಮುಖ್ಯ. ಬದಲಾಗುತ್ತಿರುವ ಸನ್ನಿವೇಶದಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಾಧಕರಾಗಬೇಕು ಎಂದು ಶಾಸಕ ಸಿ.ಪಿ. ಯೋಗೇಶ್ವರ್ ತಿಳಿಸಿದರು.
ನಗರದ ಕೋಟೆಯಲ್ಲಿರುವ ಜ್ಞಾನ ಸರೋವರ ಪದವಿ ಪೂರ್ವ ಕಾಲೇಜು ಮತ್ತು ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡಿದ್ದ ಜ್ಞಾನೋತ್ಸವ -೨೦೨೪ರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಗ್ರಾಮೀಣ ಮತ್ತು ನಗರ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಸಲುವಾಗಿ ಈ ಸಂಸ್ಥೆಯು ಪ್ರಸ್ತುತ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬೇಕಾಗಿರುವ ಅಗತ್ಯ ಶಿಕ್ಷಣವನ್ನು ನೀಡುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಈ ವಿದ್ಯಾಸಂಸ್ಥೆಯು ಹೆಮ್ಮರವಾಗಿ ಬೆಳೆದು ನಿಂತು ಸಾವಿರಾರು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ವಹಿಸಿದ್ದ ಚನ್ನಪಟ್ಟಣದ ಕುಡಿಯುವ ನೀರಿನ ಕಟ್ಟೆಯ ಮಠದ ಶ್ರೀ ಶಿವರುದ್ರ ಮಹಾಸ್ವಾಮೀಜಿ, ವಿದ್ಯಾರ್ಥಿಗಳು ನಮ್ಮ ಭಾರತೀಯ ಸಂಸ್ಕೃತಿಯನ್ನು ಕೊಂಡೊಯ್ಯುವ ಸಾರಥಿಗಳಾಗಬೇಕು, ನಮ್ಮ ಪರಂಪರೆ, ನಮ್ಮ ಸಂಸ್ಕಾರ ಉಳಿಸಿ, ಬೆಳೆಸಬೇಕು. ವಿದ್ಯಾರ್ಥಿಗಳು ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಅನುಸರಿಸದೇ ದೇಶಿ ಸಂಸ್ಕೃತಿಯನ್ನು ಅನುಸರಿಸಬೇಕು ಎಂದು ಆಶೀರ್ವಚನ ನೀಡಿದರು.
ಕಸ್ತೂರಿ ಕನ್ನಡ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ಮಾತನಾಡಿ, ಸಂಸ್ಥೆ ವಿದ್ಯಾರ್ಥಿಗಳನ್ನು ಕೇವಲ ಪಠ್ಯಗಳಿಗೆ ಮೀಸಲಾಗಿರಿಸದೇ ಪಠ್ಯದ ಜೊತೆಗೆ ವ್ಯಕ್ತಿತ್ವ ವಿಕಸನ, ನಾಯಕತ್ವ, ಕನ್ನಡ ಸಾಹಿತ್ಯ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ತುಂಬುತ್ತಾ ಸಾಮಾಜಿಕ ಜವಾಬ್ದಾರಿಯನ್ನು ಸಹ ತಮ್ಮ ಶಿಕ್ಷಣದಲ್ಲಿ ತುಂಬುತ್ತಾ ಬರಬೇಕು ಎಂದರು.
ಮಹದೇಶ್ವರ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಎಂ.ಬಿ.ರಾಹುಲ್ ರಾಜೇ ಅರಸ್ ಮಾತನಾಡಿ, ಸಣ್ಣ ಪ್ರಮಾಣದಲ್ಲಿ ಪ್ರಾರಂಭಗೊಂಡ ಸಂಸ್ಥೆ ಇಂದು ದೊಡ್ಡ ಮಟ್ಟದಲ್ಲಿ ಬೆಳೆದಿದೆ. ಅನೇಕ ವಿದ್ಯಾರ್ಥಿಗಳು ಶಿಕ್ಷಣ ಪಡೆದು ಉತ್ತಮ ಜೀವನವನ್ನು ಕಟ್ಟಿಕೊಂಡಿದ್ದಾರೆ. ನಮ್ಮ ಶಿಕ್ಷಣ ಸಂಸ್ಥೆಯ ಪ್ರಗತಿಗೆ ಕೈ ಜೋಡಿಸಿದ ಎಲ್ಲರಿಗೂ ಸಂಸ್ಥೆ ಚಿರ ಋಣಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಮನಗರ ಜಿಲ್ಲಾ ಶಾಲಾಶಿಕ್ಷಣ ( ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕರಾದ ಎಂ.ಪಿ ನಾಗಮ್ಮ, ಕೆಯುಡಬ್ಲ್ಯೂಜೆ ರಾಜ್ಯ ಕಾರ್ಯದರ್ಶಿ ಮತ್ತಿಗೆರೆ ಜಯರಾಮ್, ಚನ್ನಪಟ್ಟಣ ಗ್ರಾಮಾಂತರ ವೃತ್ತ ನಿರೀಕ್ಷಕ ಟಿ.ಟಿ ಕೃಷ್ಣ, ಪಿಎಸ್ಐ ಹರೀಶ್, ರಾಮನಗರ ಜಿಲ್ಲಾ ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ಕೊತ್ತಿಪುರ ಶಿವಣ್ಣ, ನಿವೃತ್ತ ಪ್ರಾಂಶುಪಾಲ ನಿಂಗೇಗೌಡ. ಶಿಕ್ಷಣ ಸಂಯೋಜಕರಾದ ಗಂಗಾಧರ್, ಶ್ರೀ ಮಹದೇಶ್ವರ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಆರ್, ಆದರ್ಶ ಕುಮಾರ್, ಖಜಾಂಚಿ ಬಿ.ಎಸ್ ಹೇಮಲತಾ, ಕಸಾಪ ಜಿಲ್ಲಾಧ್ಯಕ್ಷ ಬಿ.ಟಿ ನಾಗೇಶ್, ತಾಪಂ ಮಾಜಿ ಅಧ್ಯಕ್ಷ ಪಿ.ಕಾಂತರಾಜು ಇತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.