ವಿದ್ಯಾರ್ಥಿಗಳಿಗೆ ಸಮಯಪ್ರಜ್ಞೆ, ಶಿಸ್ತು ಅಗತ್ಯ: ಜಯಪ್ರಕಾಶ್

KannadaprabhaNewsNetwork |  
Published : Jun 28, 2024, 12:49 AM IST
27ಕೆಪಿಎಲ್24 ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಒಳ ಆವರಣದಲ್ಲಿ ಬುಧವಾರ  ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿಶ್ವವಿದ್ಯಾಲಯ ಘಟಕ ಹಾಗೂ ಸ್ವ ಆರ್ಥಿಕ ಘಟಕಗಳು ಆಂತರಿಕ ಗುಣಮಟ್ಟ ಭರವಸಾ ಕೋಶದ ಅಡಿಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ | Kannada Prabha

ಸಾರಾಂಶ

ವಿದ್ಯಾರ್ಥಿಗಳು ದೇಶದ ಭವಿಷ್ಯ. ವಿದ್ಯಾರ್ಜನೆಯ ಸಮಯ ಅಮೂಲ್ಯವಾದದ್ದು. ಸಮಯಪ್ರಜ್ಞೆ ಮತ್ತು ಶಿಸ್ತನ್ನು ಪಾಲಿಸುವುದು ವಿದ್ಯಾರ್ಥಿಗಳಿಗೆ ಅತ್ಯಗತ್ಯ.

ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ-ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ

ಕನ್ನಡಪ್ರಭ ವಾರ್ತೆ ಕೊಪ್ಪಳ

ವಿದ್ಯಾರ್ಥಿಗಳು ದೇಶದ ಭವಿಷ್ಯ. ವಿದ್ಯಾರ್ಜನೆಯ ಸಮಯ ಅಮೂಲ್ಯವಾದದ್ದು. ಸಮಯಪ್ರಜ್ಞೆ ಮತ್ತು ಶಿಸ್ತನ್ನು ಪಾಲಿಸುವುದು ವಿದ್ಯಾರ್ಥಿಗಳಿಗೆ ಅತ್ಯಗತ್ಯ ಎಂದು ಕೊಪ್ಪಳ ನಗರ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಜಯಪ್ರಕಾಶ್ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಒಳ ಆವರಣದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯ ಅಂಗವಾಗಿ ನಡೆದ ವಿಶೇಷ ಅರಿವಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬಹುತೇಕರು ಮಾದಕ ವಸ್ತುಗಳ ಸೇವನೆಯಂತಹ ದುಶ್ಚಟಗಳಿಗೆ ಬಲಿಯಾಗುತ್ತಾರೆ. ಇದರಿಂದ ಅವರ ಭವಿಷ್ಯ ಅತಂತ್ರವಾಗಿ ಕಳ್ಳತನ ಮುಂತಾದ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಇದರೊಂದಿಗೆ ಕುಟುಂಬದ ಹಾಗೂ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಇಂಥ ಕೃತ್ಯಗಳ ಕಡಿವಾಣಕ್ಕೆ ಬಲಿಷ್ಠ ಕಾನೂನಿದೆ ಎಂದು ತಿಳಿವಳಿಕೆ ಮೂಡಿಸಿದರು.

ಇಂದಿನ ಯುವಕರು ಮಾದಕ ವಸ್ತುಗಳ ಸೇವನೆಯಂಥ ದುಶ್ಚಟಗಳಿಗೆ ಬಲಿಯಾಗದಿರಲು ಸಲಹೆ ನೀಡಿದ ಅವರು, ವಿದ್ಯಾರ್ಥಿಗಳು ದ್ವಿಚಕ್ರ ವಾಹನಗಳನ್ನು ಚಲಾಯಿಸುವಾಗ ವೇಗದ ಮಿತಿ ಕಾಯ್ದುಕೊಳ್ಳುವುದು ಅವಶ್ಯಕ ಎಂದು ತಿಳಿಸಿದರು.

ಕಾಲೇಜಿನ ಆಂತರಿಕ ದೂರುಗಳ ಸಮಿತಿಯ ಆಶಯದಂತೆ ವಿದ್ಯಾರ್ಥಿನಿಯರಿಗೆ ಅಪರಿಚಿತ ಸಂಖ್ಯೆಗಳಿಂದ ಕರೆಗಳನ್ನು ಅಥವಾ ಸಂದೇಶಗಳನ್ನು ಮಾಡಿದರೆ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ವಿದ್ಯಾರ್ಥಿನಿಯರು ಸಹ ಅಪರಿಚಿತ ಸಂಖ್ಯೆಗಳಿಂದ ಬರುವ ಸಂದೇಶ ಹಾಗೂ ಕರೆಗಳಿಗೆ ಪ್ರತಿಕ್ರಿಯಿಸದಂತೆ ಎಚ್ಚರಿಕೆಯಿಂದ ನಡೆದುಕೊಳ್ಳಲು ಜಯಪ್ರಕಾಶ್ ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ತಿಮ್ಮಾರೆಡ್ಡಿ ಮೇಟಿ ಮಾತನಾಡಿ, ಮಾದಕ ದ್ರವ್ಯಗಳ ಸೇವನೆಯಂತಹ ದುಶ್ಚಟಗಳು ಇಂದು ಜಾಗತಿಕ ಸಮಸ್ಯೆ ಆಗಿದೆ. ವಿದ್ಯಾರ್ಥಿಗಳು ಭವಿಷ್ಯದ ದಿನಗಳನ್ನು ಗಮನದಲ್ಲಿ ಇಟ್ಟುಕೊಂಡು ಇತರರಿಗೆ ಮಾದರಿಯಾಗುವಂಥ ಕಾರ್ಯಗಳಲ್ಲಿ ತೊಡಗಬೇಕು ಎಂದು ಕರೆ ನೀಡಿದರು.

ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಎರಡೂ ಘಟಕಗಳ ಸಂಚಾಲಕರಾದ ಡಾ. ಡಿ.ಎಚ್. ನಾಯ್ಕ ಹಾಗೂ ಗಾಯತ್ರಿ ಭಾವಿಕಟ್ಟಿ ಉಪಸ್ಥಿತರಿದ್ದರು. ಪಲ್ಲವಿ ಪ್ರಾರ್ಥಿಸಿದರು. ಪೊಲೀಸ್ ಕಾನ್ಸ್‌ಟೇಬಲ್ ಕರಬಸಪ್ಪ ನಿರೂಪಿಸಿದರು.

PREV

Recommended Stories

ಕಸದಿಂದ ಲಕ್ಷ ಮನೆಗೆ ವಿದ್ಯುತ್ ಪೂರೈಕೆ: ಕರಿಗೌಡ
‘ಶಕ್ತಿ’ಯಿಂದ ಮಹಿಳೆಯರ ಸಾರಿಗೆಯ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆ