ಕನ್ನಡಪ್ರಭ ವಾರ್ತೆ ಶಿರಾ
ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದಲ್ಲಿ ದೇಶದ ಅಭಿವೃದ್ಧಿಗೆ ದುಡಿದವರ ಬಗ್ಗೆ ತಿಳಿಯುವುದರಿಂದ, ವಿದ್ಯಾರ್ಥಿಗಳು ಐಎಎಸ್, ಕೆಎಎಸ್, ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಲು, ಸಂದರ್ಶನಗಳಲ್ಲಿ ಹೆಚ್ಚು ಆತ್ಮಸ್ಥೈರ್ಯದಿಂದ ಉತ್ತರ ನೀಡಲು ಸಹಕಾರಿಯಾಗಲಿದೆ. ಇದನ್ನು ಮನಗಂಡು ಹಾಲಪ್ಪ ಪ್ರತಿಷ್ಠಾನದಿಂದ ತಾಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ಹೇಳಿದರು.ಬುಧವಾರ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ ೩೫ನೇ ಪುಣ್ಯಸ್ಮರಣೆ ಅಂಗವಾಗಿ ತಾಲೂಕಿನ ಬುಕ್ಕಾಪಟ್ಟಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ರಾಜೀವ್ ಗಾಂಧಿಯವರ ಜೀವನ ಮತ್ತು ಸಾಧನೆ ಕುರಿತು ಪ್ರಬಂಧ ಮತ್ತು ಭಾಷಣ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದರು. ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿಯವರು ದೇಶದ ಕಿರಿಯ ವಯಸ್ಸಿನ ಪ್ರಧಾನಿಯಾಗಿ ಅತ್ಯಂತ ಜವಾಬ್ದಾರಿಯಿಂದ ಆಡಳಿತ ನಡೆಸಿದ್ದರು. ಆಧುನಿಕ ತಂತ್ರಜ್ಞಾನವನ್ನು ಆಡಳಿತದಲ್ಲಿ ಅಳವಡಿಸಿಕೊಳ್ಳುವ ಮೂಲಕ ಡಿಜಿಟಲ್ ಯುಗಕ್ಕೆ ನಾಂದಿ ಹಾಡಿದ ಕೀರ್ತಿ ರಾಜೀವ್ ಗಾಂಧಿ ಅವರಿಗೆ ಸಲ್ಲುತ್ತದೆ. ರಾಜೀವ್ ಗಾಂಧಿ ಅವರು ಯುವಜನರು ರಾಜಕಾರಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂಬ ಕಾರಣಕ್ಕೆ ಮತದಾನಕ್ಕಿದ್ದ ವಯಸ್ಸಿನ ಮಿತಿಯನ್ನು ೨೧ ರಿಂದ ೧೮ಕ್ಕೆ ಇಳಿಸಿದ್ದರು. ಇಂತಹ ಪ್ರಧಾನಿಯ ಬಗ್ಗೆ ತಿಳಿದುಕೊಳ್ಳುವುದು ಯುವಜನರ ಕರ್ತವ್ಯ ಎಂದ ಅವರು, ವಿದ್ಯಾರ್ಥಿಗಳಿಗೆ ಬರವಣಿಗೆ ಕೌಶಲ್ಯ ಮತ್ತು ಸಂವಹನ ಕೌಶಲ್ಯ ಹೆಚ್ಚಿಸುವ ಉದ್ದೇಶದಿಂದ ಗ್ರಾಮೀಣ ಭಾಗದ ಎಲ್ಲಾ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಗಣ್ಯರ ಜನ್ಮ ದಿನಾಚರಣೆ, ಪುಣ್ಯ ಸ್ಮರಣೆಯಂತಹ ಕಾರ್ಯಕ್ರಮಗಳ ವೇಳೆ ಪ್ರಬಂಧ, ಆಶುಭಾಷಣ ಸ್ಪರ್ಧೆಗಳನ್ನು ಏರ್ಪಡಿಸುವ ಕೆಲಸವನ್ನು ಹಾಲಪ್ಪ ಪ್ರತಿಷ್ಠಾನದಿಂದ ಆಯೋಜಿಸಲಾಗುತ್ತಿದೆ. ದೇಶಕ್ಕಾಗಿ ಹೋರಾಡಿದವರನ್ನು ಯುವಜನರಿಗೆ ಪರಿಚಯಿಸುವುದರ ಜೊತೆಗೆ, ಮಕ್ಕಳಲ್ಲಿ ಬರವಣಿಗೆ, ಮಾಹಿತಿ ಸಂಗ್ರಹದಂತಹ ಕೌಶಲ್ಯವನ್ನು ವೃದ್ಧಿಸುವುದೇ ಇದರ ಹಿಂದಿನ ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತ್ಯನಾರಾಯಣ ವಹಿಸಿದ್ದರು. ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಚಂದ್ರಶೇಖರ್, ಸದಸ್ಯರಾದ ಚಿಕ್ಕಣ್ಣ ಸೇರಿದಂತೆ ಹಲವರು ಹಾಜರಿದ್ದರು.-