ಸಾರ್ವಜನಿಕರಿಂದ ಬಿ.ಎಚ್.ಕೈಮರದಲ್ಲಿ ಕೆಎಸ್ಆರ್ಟಿಸಿ ಬಸ್ ತಡೆ । ವಿಭಾಗೀಯ ನಿಯಂತ್ರಣಾಧಿಕಾರಿಗೆ ಮನವಿ
ಶೃಂಗೇರಿಯಿಂದ ಶಿವಮೊಗ್ಗಕ್ಕೆ 4 ಬಸ್ಸುಗಳು ಓಡಾಡುತ್ತಿದ್ದರೂ ಕೆಲವು ಬಸ್ಸು ನಿಲ್ದಾಣಗಳಲ್ಲಿ ಸ್ಟಾಪ್ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಸ್ಥಳೀಯರು ಬಿ.ಎಚ್.ಕೈಮರದಲ್ಲಿ ಶುಕ್ರವಾರ ಬೆಳಿಗ್ಗೆ ಎರಡು ಕೆಎಸ್ಆರ್ಟಿಸಿ ಬಸ್ಸುಗಳನ್ನು ಕೆಲವು ಸಮಯ ತಡೆದು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾ ನಿರತ ಕಾಲೇಜು ವಿದ್ಯಾರ್ಥಿಗಳು ಮಾತನಾಡಿ, ಶೃಂಗೇರಿಯಿಂದ ಶಿವಮೊಗ್ಗಕ್ಕೆ ಹೋಗುವ ಸರ್ಕಾರಿ ಬಸ್ಸುಗಳು ಕೊಪ್ಪ ಬಿಟ್ಟರೆ ಕುದುರೆಗುಂಡಿ, ಕೈಮರ, ನರಸಿಂಹರಾಜಪುರ, ಶೆಟ್ಟಿಕೊಪ್ಪ, ಮುತ್ತಿನಕೊಪ್ಪದಲ್ಲಿ ಸ್ಟಾಪ್ ನೀಡುತ್ತಾರೆ. ಆದರೆ, ತಲಮಕ್ಕಿ, ಗುಡ್ಡೇಹಳ್ಳ, ಚಿಟ್ಟಿಕೊಡಿಗೆ, ವಗಡೆ ಕಲ್ಲು, ಸಿಂಸೆ, ಮೆಣಸೂರು ಕಾಲೇಜು ಸ್ಛಾಪ್, ಸೌತಿಕೆರೆ ಮುಂತಾದ ಕಡೆಗಳಲ್ಲಿ ಕೈ ಅಡ್ಡ ಹಾಕಿದರೂ ಸ್ಟಾಪ್ ನೀಡುತ್ತಿಲ್ಲ. ಇದರಿಂದ ಶಾಲಾ, ಕಾಲೇಜು ಮಕ್ಕಳಿಗೆ ತೀವ್ರ ತೊಂದರೆ ಯಾಗುತ್ತಿದೆ. ಗ್ರಾಮೀಣ ಭಾಗದ ಬಸ್ಸು ನಿಲ್ದಾಣದಲ್ಲೂ ಸ್ಟಾಪ್ ನೀಡಬೇಕು ಎಂದು ಆಗ್ರಹಿಸಿದರು.ಹೆಚ್ಚಿನ ಬಸ್ ಕಲ್ಪಿಸಿ:
ಸ್ವಲ್ಪ ಸಮಯದ ನಂತರ ಸ್ಥಳಕ್ಕೆ ಪೊಲೀಸರ ಆಗಮನವೂ ಆಯಿತು. ಕೆಲವು ಸಮಯ ಸಾರ್ವಜನಿಕರಿಗೆ, ಬಸ್ಸು ನಿರ್ವಾಹಕರೊಂದಿಗೆ ಮಾತಿನ ಚಕಮುಖಿ ಸಹ ನಡೆಯಿತು. ಶೃಂಗೇರಿ ಕೆಎಸ್ಆರ್ಟಿಸಿ ಡಿಪೋದ ವಿಭಾಗೀಯ ನಿಯಂತ್ರಣಾಧಿಕಾರಿ ಸ್ಥಳಕ್ಕೆ ಆಗಮಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
-- ಬಾಕ್ಸ್--
ಪ್ರಸ್ತುತ ಶಿವಮೊಗ್ಗದಿಂದ ಶೃಂಗೇರಿಗೆ ಕೇವಲ 4 ಸರ್ಕಾರಿ ಬಸ್ಸುಗಳು ಮಾತ್ರ ಓಡಾಡುತ್ತಿದೆ. ಇನ್ನೂ 4 ಬಸ್ಸುಗಳು ಓಡಾಡಬೇಕು.ಈ ಬಗ್ಗೆ ಈ ಹಿಂದೆ ಚಿಕ್ಕಮಗಳೂರು ಡಿಪೋದಲ್ಲಿ ವಿಚಾರಿಸಿದರೆ ಶಿವಮೊಗ್ಗದಲ್ಲಿ ಕೇಳಿ ಎನ್ನುತ್ತಿದ್ದಾರೆ. ಶಿವಮೊಗ್ಗ ಡಿಪೋದಲ್ಲಿ ಕೇಳಿದರೆ ಶಿಕಾರಿಪುರ ಡಿಪೋದಲ್ಲಿ ಕೇಳಿ ಎನ್ನುತ್ತಾರೆ ಎಂದು ಕಾಲೇಜು ವಿದ್ಯಾರ್ಥಿ ಗೌತಮ್ ಸುದ್ದಿಗಾರರಿಗೆ ತಿಳಿಸಿದರು.ಇಂದು ಶಿವಮೊಗ್ಗಕ್ಕೆ ಕಾಲೇಜು ವಿದ್ಯಾರ್ಥಿಗಳ ತಂಡ ತೆರಳಿ ಅಲ್ಲಿನ ಕೆಎಸ್ಆರ್ಟಿಸಿ ಡಿಪೋದ ಡಿಸಿ ಅವರಿಗೆ ಮನವಿ ಸಲ್ಲಿಸಿದ್ದು ಅವರು ಇಂದಿನಿಂದಲೇ ಗ್ರಾಮೀಣ ಭಾಗದ ಬಸ್ಸು ಸ್ಟಾಪಿನಲ್ಲಿ ಬಸ್ಸು ನಿಲ್ಲಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದರು.