ಶಿರಹಟ್ಟಿ ತಾಲೂಕಿನ ಛಬ್ಬಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

KannadaprabhaNewsNetwork |  
Published : Oct 12, 2025, 01:01 AM IST
ಪೋಟೊ- ೧೧ ಎಸ್.ಎಚ್.ಟಿ. ೧ಕೆ- ಶಾಲಾ- ಕಾಲೇಜು ವೇಳೆ ಸಮಯಕ್ಕೆ ಸರಿಯಾಗಿ ಬಸ್ ಓಡಿಸುವಂತೆ ಆಗ್ರಹಿಸಿ ಛಬ್ಬಿ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಶಾಲಾ- ಕಾಲೇಜುಗಳು ಪ್ರಾರಂಭವಾದಾಗಿನಿಂದಲೂ ಪ್ರತಿವರ್ಷವೂ ಇದೇ ಸಮಸ್ಯೆ ಎದುರಿಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಓದಿಗೂ ಹಿನ್ನಡೆಯಾಗುತ್ತಿದೆ.

ಶಿರಹಟ್ಟಿ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಾಲಾ- ಕಾಲೇಜು ವೇಳೆ ಅನುಕೂಲಕ್ಕೆ ತಕ್ಕಂತೆ ಹೆಚ್ಚಿನ ಬಸ್ ಬಿಡುವಂತೆ ಆಗ್ರಹಿಸಿ ಶನಿವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿರಹಟ್ಟಿ ತಾಲೂಕು ಘಟಕದ ವತಿಯಿಂದ ಬಸ್ ತಡೆದು ಪ್ರತಿಭಟನೆ ನಡೆಸಲಾಯಿತು.ತಾಲೂಕಿನ ಛಬ್ಬಿ ಗ್ರಾಮದಲ್ಲಿ ನೂರಾರು ವಿದ್ಯಾರ್ಥಿಗಳು ಸೇರಿ ಸುಮಾರು ೩ ತಾಸು ಬಸ್ ತಡೆದು ರಸ್ತೆತಡೆ ನಡೆಸಿ ಪ್ರತಿಭಟಿಸಿದರು. ಈ ವೇಳೆ ಸಂಘಟನೆಯ ನಗರ ಘಟಕದ ಕಾರ್ಯದರ್ಶಿ ಪರಶುರಾಮ ಕಳ್ಳಿಮನಿ ಮಾತನಾಡಿ, ಪ್ರತಿ ನಿತ್ಯವೂ ಶಾಲಾ ಕಾಲೇಜಿಗೆ ತೆರಳುವ ಸಮಯಕ್ಕೆ ಬಸ್‌ಗಳು ಬರುವುದಿಲ್ಲ. ಸಮಯಕ್ಕೆ ಸರಿಯಾಗಿ ತರಗತಿಗಳಿಗೆ ತೆರಳಲು ಇದರಿಂದ ಸಾಧ್ಯವಾಗುತ್ತಿಲ್ಲ ಎಂದು ದೂರಿದರು.ಶಾಲಾ- ಕಾಲೇಜುಗಳು ಪ್ರಾರಂಭವಾದಾಗಿನಿಂದಲೂ ಪ್ರತಿವರ್ಷವೂ ಇದೇ ಸಮಸ್ಯೆ ಎದುರಿಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಓದಿಗೂ ಹಿನ್ನಡೆಯಾಗುತ್ತಿದೆ. ಅನೇಕ ಬಾರಿ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದ್ದು, ವಿದ್ಯಾರ್ಥಿಗಳ ಗೋಳು ಆಲಿಸದ ಸಾರಿಗೆ ಇಲಾಖೆ ಅಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಚೆಲ್ಲಾಟವಾಡುತಿದ್ದಾರೆ ಎಂದು ಆರೋಪಿಸಿದರು.ಇದೇ ಮೊದಲಲ್ಲ: ಈ ಹಿಂದೆಯೂ ವಿದ್ಯಾರ್ಥಿಗಳು ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ೩ಕ್ಕೂ ಹೆಚ್ಚು ಬಾರಿ ಪ್ರತಿಭಟನೆ ನಡೆಸಿ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದು, ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಇದುವರೆಗೂ ಸಮಯಕ್ಕೆ ಸರಿಯಾಗಿ ಬಸ್ ಬಾರದಿರುವುದಕ್ಕೆ ಈ ಬಾರಿ ಮತ್ತೆ ಗ್ರಾಮೀಣ ಭಾಗದಿಂದಲೇ ಪ್ರತಿಭಟನೆ ನಡೆಸಲಾಯಿತು ಎಂದರು.ವಿದ್ಯಾರ್ಥಿಗಳು ಬಸ್ ತಡೆದು ದಿಢೀರ್ ಪ್ರತಿಭಟನೆ ನಡೆಸಿದ ಕೆಲಹೊತ್ತಿಗೆ ಸಾರಿಗೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈಗಾಗಲೆ ಪದವಿ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ತರಗತಿಗಳು ಪ್ರಾರಂಭವಾಗಿವೆ. ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿದ್ದು, ನಿತ್ಯ ಬಸ್ ತೊಂದರೆಯಿಂದಾಗಿ ತರಗತಿಗಳಿಗೆ ಹಾಜರಾಗಲು ಆಗುತ್ತಿಲ್ಲ ಎಂದು ಅಳಲು ತೋಡಿಕೊಂಡರು.

ನಿತ್ಯ ಗ್ರಾಮೀಣ ಪ್ರದೇಶಗಳಿಂದ ಜಿಲ್ಲಾ ಕೇಂದ್ರ ಗದಗ, ಶಿರಹಟ್ಟಿ, ಮುಂಡರಗಿ, ಲಕ್ಷ್ಮೇಶ್ವರಗಳಿಗೆ ಹೈಸ್ಕೂಲ್, ಕಾಲೇಜು ಶಿಕ್ಷಣಕ್ಕೆ ಹೋಗುತ್ತಿದ್ದು, ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಗದಿತ ಸಮಯಕ್ಕೆ ಬಸ್ ಓಡಿಸಬೇಕು ಎಂದು ಆಗ್ರಹಿಸಿದರು. ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿ ಎರಡು ತಾಸು ಕಳೆದ ನಂತರ ಸಾರಿಗೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಸಮಯಕ್ಕೆ ಸರಿಯಾಗಿ ಶಾಲಾ ಕಾಲೇಜಿನ ಅವಧಿಯಲ್ಲಿ ಬಸ್ ಓಡಿಸುವುದಾಗಿ ಲಿಖಿತ ಭರವಸೆ ನೀಡಿದರೆ ಮಾತ್ರ ಪ್ರತಿಭಟನೆ ಕೈಬಿಡುವುದಾಗಿ ಬಿಗಿಪಟ್ಟು ಹಿಡಿದರು. ಮೂರು ತಾಸು ಸಾರ್ವಜನಿಕರೂ ಸಂಚಾರಕ್ಕೆ ಪರದಾಡುವಂತಾಯಿತು.ನಂತರ ಸಾರಿಗೆ ಇಲಾಖೆ ಅಧಿಕಾರಿಗಳು ಜಿಲ್ಲಾ ವಿಭಾಗೀಯ ಸಾರಿಗೆ ನಿಯಂತ್ರಣಾಧಿಕಾರಿಗಳ ಗಮನಕ್ಕೆ ತಂದು ಅವರ ಸೂಚನೆಯಂತೆ ಬಸ್ ಓಡಿಸುವುದಾಗಿ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟರು. ತುರ್ತು ಬಸ್ ವ್ಯವಸ್ಥೆ ಕಲ್ಪಿಸಿಕೊಡದಿದ್ದರೆ ಎಲ್ಲ ವಿದ್ಯಾರ್ಥಿಗಳ ಪರವಾಗಿ ಮತ್ತೆ ಬಸ್ ತಡೆದು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಸೋಮಶೇಖರ್, ಕಾವ್ಯ ಮಠಪತಿ, ರೂಪ ಆಡ್ರಕಟ್ಟಿ, ವಿಜಯಲಕ್ಷ್ಮಿ, ರಾಘವೇಂದ್ರ, ವಿನಯ, ನಿಂಗರಾಜ್, ಹನುಮಂತ ಮುಂತಾದವರು ಇದ್ದರು. ಪಿಎಸ್‌ಐ ಈರಪ್ಪ ರಿತ್ತಿ ಹಾಗೂ ಪೊಲೀಸ್ ಸಿಬ್ಬಂದಿ ಬಂದೋಬಸ್ತ್ ಕೈಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ : ಸಿಎಂ ಸಿದ್ದರಾಮಯ್ಯ
ಸಿಎಂ ರೇಸಲ್ಲಿ ಡಿಕೆ ಒಬ್ಬರೇ ಇಲ್ಲ : ರಾಜಣ್ಣ