ವಿದ್ಯಾರ್ಥಿಗಳು ಆಟ ಪಾಠಗಳ ಮೂಲಕ ಉತ್ತಮ ನಾಗರಿಕರಾಗಬೇಕು: ಕರ್ನಲ್ ಕೆ.ಸಿ ಸುಬ್ಬಯ್ಯ

KannadaprabhaNewsNetwork | Published : Jul 9, 2024 12:45 AM

ಸಾರಾಂಶ

ಅಮ್ಮತ್ತಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿರಾಜಪೇಟೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೆಜಿತ್‌ ಕುಮಾರ್‌ ಗುಹ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಸಿದ್ದಾಪುರ

ಪತ್ರಿಕಾ ದಿನಾಚರಣೆಯ ಅಂಗವಾಗಿ ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಮ್ಮತ್ತಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಕರ್ನಲ್ ಕೆ.ಸಿ ಸುಬ್ಬಯ್ಯ, ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಬೆಳವಣಿಗೆಗಾಗಿ ಸ್ಪರ್ಧೆ ನಡೆಸುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ಆಟ-ಪಾಠದೊಂದಿಗೆ ಉತ್ತಮ ನಾಗರೀಕರಾಗಬೇಕು ಎಂದು ಕರೆ ನೀಡಿದರು.

ಪ್ರಸ್ತಾವಿಕವಾಗಿ ಮಾತನಾಡಿದ ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಅಧ್ಯಕ್ಷ ರೆಜಿತ್ ಕುಮಾರ್ ಗುಹ್ಯ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸುವ ಮೂಲಕ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಸರ್ಕಾರಿ ಶಾಲಾ ಮಕ್ಕಳು, ಖಾಸಗಿ ಶಾಲಾ ಮಕ್ಕಳೊಂದಿಗೆ ಸ್ಪರ್ಧೆ ಮಾಡುವಂತಾಗಿದೆ. ಸರ್ಕಾರಿ ಶಾಲಾ ಮಕ್ಕಳಿಗೂ ಹೆಚ್ಚು ಪ್ರೋತ್ಸಾಹದ ಅಗತ್ಯವಿದೆ. ಸಂಘವು ಸಮಾಜಮುಖಿ ಕೆಲಸವನ್ನು ಮಾಡಿಕೊಂಡು ಬಂದಿದೆ ಎಂದರು.

ಶಾಲಾ ಮುಖ್ಯೋಪಾಧ್ಯಾಯರಾದ ದೊಡ್ಡತಮ್ಮಯ್ಯ ಮಾತನಾಡಿ, ವಿದ್ಯಾರ್ಥಿಗಳು ಪತ್ರಿಕೆಗಳನ್ನು ಹೆಚ್ಚು ಓದಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಇತ್ತೀಚೆಗಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿದ್ದು, ಮೊಬೈಲ್ ದೂರವಿಟ್ಟು ಪತ್ರಿಕೆಗಳನ್ನು ಓದಲು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಪುತ್ತಂ ಪ್ರದೀಪ್, ಪ್ರಧಾನ ಕಾರ್ಯದರ್ಶಿ ಎ.ಎಸ್ ಮುಸ್ತಫ, ಸದಸ್ಯರಾದ ಎಂ.ಎ ಕೃಷ್ಣ, ಆಂಟೋಣಿ, ಶಾಲಾ ಶಿಕ್ಷಕ ವೃಂದ ಇದ್ದರು.

ಸ್ಪರ್ಧೆಯ ವಿಜೇತರು: 8 ನೇ ತರಗತಿ ವಿಭಾಗದಲ್ಲಿ ತೇಜಸ್ ಪ್ರಥಮ, ಅಭಿ ದ್ವಿತೀಯ ಹಾಗೂ ಅಶ್ವದಿ ತೃತೀಯ ಬಹುಮಾನ ಪಡೆದುಕೊಂಡರು. 9 ನೇ ತರಗತಿ ವಿಭಾಗದಲ್ಲಿ ವೈ.ಎನ್. ಕಾವ್ಯ ಪ್ರಥಮ, ಮೋನಿಕ ದ್ವಿತೀಯ ಹಾಗೂ ವಿದ್ಯಾ ತೃತೀಯ ಬಹುಮಾನ ಪಡೆದುಕೊಂಡರು. 10 ನೇ ತರಗತಿ ವಿಭಾಗದಲ್ಲಿ ಸುಶ್ಮಿತ ಪ್ರಥಮ, ಮೊಹಮ್ಮದ್ ನಿಯಾಸ್ ದ್ವಿತೀಯ ಹಾಗೂ ಗೌರಿ ತೃತೀಯ ಬಹುಮಾನ ಪಡೆದುಕೊಂಡರು. ಪ್ರಬಂಧ ಸ್ಪರ್ಧೆಯಲ್ಲಿ 44 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Share this article