ಹೊಸಪೇಟೆ: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುವ ಮೂಲಕ ಉತ್ತಮ ನಾಯಕತ್ವದ ಗುಣಗಳನ್ನು ಹಾಗೂ ವ್ಯಕ್ತಿತ್ವ ವಿಕಸನ ಹಾಗೂ ಸಾಮಾಜಿಕ ಜವಾಬ್ದಾರಿಗಳನ್ನು ರೂಡಿಸಿಕೊಳ್ಳಬೇಕು ಎಂದು ವಿಜಯನಗರ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಮಲ್ಲಿಕಾರ್ಜುನ ಎನ್. ಮೆಟ್ರಿ ಹೇಳಿದರು.
ವಿಜಯನಗರ ಮಹಾವಿದ್ಯಾಲಯದ ಪ್ರಾಚಾರ್ಯ ಮಹಾಂತೇಶ ಎನ್. ಆರಾಧ್ಯಮಠ ಸಮಾರಂಭದ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿ, 2025-26ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜು ಸಾಧಿಸಿದ ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಹಾಗೂ ವಿಸ್ತರಣಾ ಚಟುವಟಿಕೆಗಳ ಪ್ರಮುಖ ಸಾಧನೆಗಳನ್ನು ಮೆರೆದಿದ್ದು, ವಿವಿಧ ಸಂಘಗಳಾದ ವಾಣಿಜ್ಯ ಮತ್ತು ನಿರ್ವಹಣಾ ಸಂಘ, ವಿಜ್ಞಾನ ಸಂಘ, ಕರ್ನಾಟಕ ಸಂಘ, ಯುಟೋಪಿಯನ್ ಕ್ಲಬ್, ಕ್ರೀಡಾ ಕ್ಲಬ್, ಎನ್ಎಸ್ಎಸ್, ಎನ್ಸಿಸಿ ಸೇರಿದಂತೆ ವಿವಿಧ ಘಟಕಗಳು ಕಾಲೇಜಿನಲ್ಲಿ ಉತ್ತಮರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಅವರು ಮೆಚ್ಚಿಗೆ ವ್ಯಕ್ತಪಡಿಸಿದರು.
ಕಾಲೇಜಿನ ವಾರ್ಷಿಕ ಸ್ಮರಣ ಸಂಚಿಕೆ 2026ನ್ನು ಗಣ್ಯರು ಬಿಡುಗಡೆಗೊಳಿಸಿದ ಸ್ಮರಣ ಸಂಚಿಕೆಯಲ್ಲಿ ಕಾಲೇಜಿನ ವಾರ್ಷಿಕ ಚಟುವಟಿಕೆಗಳು, ವಿದ್ಯಾರ್ಥಿಗಳ ಸಾಹಿತ್ಯಿಕ ಬರಹಗಳು, ಸಾಧನೆಗಳು ಹಾಗೂ ವಿವಿಧ ವಿಭಾಗಗಳ ವರದಿಗಳನ್ನು ಒಳಗೊಂಡಿದೆ ಎಂದು ಅವರು ವಿವರಿಸಿದರು.ಸದಸ್ಯ ಪ್ರಭಾಕರ ಅವರು ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದರು. ಐಕ್ಯೂಎಸಿ ಸಂಯೋಜಕ ಡಾ. ರವಿ ಕಿರಣ್ ಡಿ. ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.