ರಾಮನಗರ: ಜೀವನದಲ್ಲಿನ ಯಶಸ್ಸಿಗೆ ಸ್ಪಷ್ಟ ಗುರಿ ನಿಗದಿ ಪಡಿಸಿಕೊಳ್ಳಿ ಮತ್ತು ಅದನ್ನು ಸಾಧಿಸಲು ನಿರಂತರ ಶ್ರಮಿಸಬೇಕು ಎಂದು ಬೆಂಗಳೂರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಎಮೆರಿಟಸ್ ಪ್ರಾಧ್ಯಾಪಕರು ಹಾಗೂ ವಿಶೇಷ ಅಧಿಕಾರಿಗಳಾದ ಡಾ.ಕೆ.ಎಸ್.ನಾಗೇಂದ್ರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಜಿಐಇಟಿ ಅಧ್ಯಕ್ಷ ನವಾಜ್ ಎ.ಷರೀಫ್ ಮಾತನಾಡಿ, ವಿದ್ಯಾರ್ಥಿಗಳು ಜವಾಬ್ದಾರಿಯುತ ವೃತ್ತಿಪರರು ಮತ್ತು ನಾಗರಿಕರಾಗಿ ರೂಪುಗೊಳ್ಳಬೇಕಿದೆ. ಇದಕ್ಕಾಗಿ ಶಿಸ್ತು, ಕಠಿಣ ಪರಿಶ್ರಮ ಹಾಗೂ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಐಇಟಿ ಗೌರವ ಕಾರ್ಯದರ್ಶಿ ಉಮರ್ ಇಸ್ಮಾಯಿಲ್ ಖಾನ್ ಮಾತನಾಡಿ, ಸಂಸ್ಥೆ ಗುಣಮಟ್ಟದ ಶಿಕ್ಷಣ ಒದಗಿಸಲು ಹಾಗೂ ಪೂರಕ ಕಲಿಕಾ ವಾತಾವರಣ ನಿರ್ಮಿಸಲು ಬದ್ಧವಾಗಿದೆ. ವಿದ್ಯಾರ್ಥಿಗಳು ನಿಯಮಿತವಾಗಿ ತರಗತಿಗಳಿಗೆ ಹಾಜರಾಗಬೇಕು, ಶಿಸ್ತನ್ನು ಪಾಲಿಸಬೇಕು, ಶಿಕ್ಷಕರು ಹಾಗೂ ಸಹಪಾಠಿಗಳನ್ನು ಗೌರವಿಸಬೇಕು. ಲಭ್ಯವಿರುವ ಸೌಲಭ್ಯಗಳನ್ನು ಅತ್ಯುತ್ತಮವಾಗಿ ಬಳಸಿಕೊಳ್ಳಬೇಕು ಎಂದರು.ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಎಸ್.ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ನಿಯಮಿತ ಹಾಜರಾತಿ, ಶಿಸ್ತು, ಸಮಯ ನಿರ್ವಹಣೆ, ಸಂವಹನ ಕೌಶಲಗಳು, ತಾಂತ್ರಿಕ ಜ್ಞಾನ, ಸಹ-ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಬೋಧಕರು ಮತ್ತು ಮಾರ್ಗದರ್ಶಕರಿಂದ ಸೂಕ್ತ ಸಲಹೆ-ಸೂಚನೆಗಳನ್ನು ಪಡೆಯಬೇಕು ಎಂದು ತಿಳಿಸಿದರು.
ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ಸೈಫುಲ್ಲಾ ಖಾನ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಮಹಮ್ಮದ್ ಝಮ್ಮರ್ ಪಾಷಾ, ಗಣಿತ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಎಚ್.ಆರ್.ಜ್ಯೋತಿ ಉಪಸ್ಥಿತರಿದ್ದರು.
ರಾಮನಗರದ ಗೌಸಿಯಾ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಬಿಇ/ಬಿಬಿಎ/ಬಿಸಿಎ ಕೋಸ್ಗಳಿಗೆ ಸೇರಿರುವ ಹೊಸ ವಿದ್ಯಾರ್ಥಿಗಳ ಸ್ವಾಗತ ಮತ್ತು ಪರಿಚಯ ಸಮಾರಂಭದಲ್ಲಿ ಡಾ.ಕೆ.ಎಸ್.ನಾಗೇಂದ್ರ ಅವರನ್ನು ಸನ್ಮಾನಿಸಲಾಯಿತು.