ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಕನಕಶ್ರೀ ಪ್ರಶಸ್ತಿ ಪ್ರದಾನ, ನಿವೃತ್ತ ನೌಕರರಿಗೆ ಸನ್ಮಾನ
ವಿದ್ಯಾರ್ಥಿಗಳು ತಮಗೆ ಯಾವ ಕ್ಷೇತ್ರದಲ್ಲಿ ಆಸಕ್ತಿ ಇದೆಯೋ ಆ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರಯತ್ನಿಸಬೇಕು. ಯಾವುದೇ ರಂಗದಲ್ಲಾದರೂ ಉತ್ತಮ ಸಾಧನೆ ಮಾಡಿದ ಪ್ರತಿಭೆಯಿದ್ದರೆ ಅಂತವರನ್ನು ಪ್ರೋತ್ಸಾಹಿಸಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ತರೀಕೆರೆ ತಾಲೂಕು ಕನಕ ನೌಕರರ ಸಂಘದಿಂದ ಪಟ್ಟಣದ ಟೌನ್ಕ್ಲಬ್ನಲ್ಲಿ ಆಯೋಜಿಸಿದ್ದ ತಾಲೂಕು ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಕನಕಶ್ರೀ ಪ್ರಶಸ್ತಿ ಪ್ರದಾನ, ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ನಿರ್ಧಿಷ್ಟ ಗುರಿ ಮತ್ತು ಅದಕ್ಕೆ ತಕ್ಕ ಪ್ರಯತ್ನವಿದ್ದರೆ ಅಂದುಕೊಂಡ ಗುರಿ ತಲುಪಲು ಸಾಧ್ಯವಿದೆ. ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಹತ್ತಾರು ಅಭಿವೃದ್ಧಿ ಯೋಜನೆಗಳು ಕಾರ್ಯಗತಗೊಂಡಿವೆ ಎಂದು ತಿಳಿಸಿದರು.
ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆ ಜಿಲ್ಲಾ ಸರ್ಜನ್ ಡಾ.ಟಿ.ಎಂ.ದೇವರಾಜ್ ಕನಕಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ವಿದ್ಯಾರ್ಥಿ ಹಂತದಲ್ಲಿಯೇ ಪಠ್ಯಪುಸ್ತಕ ಕಲಿಕೆ ಜೊತೆಗೆ ತಮಗೆ ಯಾವ ವಿಚಾರದಲ್ಲಿ ಮತ್ತು ಯಾವ ಕ್ಷೇತ್ರ ದಲ್ಲಿ ಆಸಕ್ತಿ ಇದೆಯೋ ಆ ವಿಚಾರಗಳ ಕುರಿತು ಗಮನಹರಿಸಬೇಕು. ಸಮಾಜದ ಶ್ರೇಯೋಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು ಎಂದು ತಿಳಿಸಿದರು.
ಪುರಸಭೆ ಮಾಜಿ ಅಧ್ಯಕ್ಷ ಎಂ.ನರೇಂದ್ರ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುತ್ತಿರುವುದು ವಿದ್ಯಾರ್ಥಿಗಳ ಮುಂದಿನ ಸಾಧನೆಗೆ ಸ್ಪೂರ್ತಿ ನೀಡಿದಂತಾಗುತ್ತಿದೆ ಎಂದು ತಿಳಿಸಿದರು.
ಶ್ರೀ ರೇವಣಸಿದೇಶ್ವರ ಕುರುಬರ ಸಮಾಜದ ಅಧ್ಯಕ್ಷ ಟಿ.ಎಸ್.ರಮೇಶ್, ತರೀಕೆರೆ ತಾಲೂಕು ಕಸಾಪ ಅಧ್ಯಕ್ಷ ರವಿ ದಳವಾಯಿ, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಂಜೇಗೌಡ ಮಾತನಾಡಿದರು.
-
ತರೀಕೆರೆಯಲ್ಲಿ ತರೀಕೆರೆ ತಾಲೂಕು ಕನಕ ನೌಕರರ ಸಂಘದಿಂದ ಆಯೋಜಿಸಿದ್ದ ತಾಲೂಕು ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಕನಕಶ್ರೀ ಪ್ರಶಸ್ತಿ ಪ್ರದಾನ, ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮವನ್ನು ಶಾಸಕ ಜಿ.ಹೆಚ್.ಶ್ರೀನಿವಾಸ್ ಉದ್ಘಾಟಿಸಿದರು. ಶ್ರೀ ರೇವಣಸಿದೇಶ್ವರ ಕುರುಬರ ಸಮಾಜದ ಅಧ್ಯಕ್ಷ ಟಿ.ಎಸ್.ರಮೇಶ್, ತರೀಕೆರೆ ತಾಲೂಕು ಕನಕ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಬಸವರಾಜಪ್ಪ, ಸರ್ಕಾರಿ ನೌಕರರ ಸಂಘದ ತರೀಕೆರೆ ತಾಲ್ಲೂಕು ಅಧ್ಯಕ್ಷ ಸಿ.ಆರ್.ಅನಂತಪ್ಪ ಮತ್ತಿತರರು ಭಾಗವಹಿಸಿದ್ದರು.