ಕನ್ನಡಪ್ರಭವಾರ್ತೆ ನಾಗಮಂಗಲ
ತಾಲೂಕಿನ ಬಿ.ಜಿ.ನಗರದ ಬಿಜಿಎಸ್ ಸಭಾಂಗಣದಲ್ಲಿ ಆದಿಚುಂಚನಗಿರಿ ವಿಶ್ವ ವಿದ್ಯಾಲಯ ಮತ್ತು ಬೆಂಗಳೂರಿನ ರಾಯಲ್ ಸೊಸೈಟಿ ಆಫ್ ಕೆಮಿಸ್ಟ್ರಿ ಸಹಯೋಗದಲ್ಲಿ ಆಯೋಜಿಸಿದ್ದ ರಾಸಾಯನಿಕ ವಿಜ್ಞಾನ ಮತ್ತು ತಂತ್ರಜ್ಞಾನ ಅಭಿವೃದ್ಧಿ ಕುರಿತ ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಸುಸ್ಥಿರ ರಾಸಾಯನಿಕ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಅಭಿವೃದ್ಧಿ ಸಾಧಿಸಲು ಸ್ಪಷ್ಟ ಹಾಗೂ ಪ್ರಬುದ್ಧ ಚಿಂತನೆಗಳ ಪರಿಶ್ರಮದಿಂದ ಮಾತ್ರ ಸಾಧ್ಯ. ವಿಶಿಷ್ಟ ಆಲೋಚನೆಗಳಿಂದ ಕಾರ್ಯಪ್ರವೃತ್ತರಾದರೆ ಸಾರ್ಥಕ ಯಶಸ್ಸನ್ನು ಕಾಣಬಹುದು. ವೈಜ್ಞಾನಿಕ ಹಾಗೂ ಸಾಮಾಜಿಕವಾಗಿ ಅನೇಕ ಜಟಿಲ ಸಮಸ್ಯೆ ಎದುರಿಸುತ್ತಿರುವ ಇಂದಿನ ಕಾಲಘಟ್ಟದಲ್ಲಿ ತಾಂತ್ರಿಕ ಕೌಶಲ್ಯಕ್ಕೆ ಹೆಚ್ಚು ಮಹತ್ವ ನೀಡುವುದು ಅಗತ್ಯವಾಗಿದೆ ಎಂದು ಸಲಹೆ ನೀಡಿದರು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಸಂಶೋಧನಾ ವಿಭಾಗದ ಡೀನ್ ಪ್ರೊ. ಪ್ರಶಾಂತ್ ಕಾಳಪ್ಪ ಮಾತನಾಡಿ, ಸಂಶೋಧನಾ ವಿದ್ಯಾರ್ಥಿಗಳಲ್ಲಿ ಕಲಿಕಾ ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತಿದ್ದರೆ ವೈಜ್ಞಾನಿಕ ಸಂಶೋಧನೆಗಳು ಪರಿಪೂರ್ಣವಾಗಿ ಸಾಕಾರಗೊಳ್ಳುತ್ತವೆ. ಇದರೊಂದಿಗೆ ವಿದ್ಯಾರ್ಥಿಗಳ ಚಿಂತನಾ ಸಾಮರ್ಥ್ಯವೂ ಅಭಿವೃದ್ಧಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹೆಚ್ಚು ಪ್ರಯೋಗಾತ್ಮಕವಾಗಿ ತೊಡಗಿಸಿಕೊಳ್ಳಬೇಕು ಎಂದರು.ಹಿರಿಯ ವಿಜ್ಞಾನಿ ಪ್ರೊ.ಸಿ.ವಿ.ಯೆಳಮಗದ್ ಮಾತನಾಡಿ, ಜಾಗತಿಕ ಮಟ್ಟದಲ್ಲಿ ರಾಸಾಯನಿಕ ವಿಜ್ಞಾನಿಗಳ ಬೆಳವಣಿಗೆಗೆ ರಾಯಲ್ ಸೊಸೈಟಿ ಆಫ್ ಕೆಮಿಸ್ಟ್ರಿಯು ನೀಡುತ್ತಿರುವ ಕೊಡುಗೆ ಅಪಾರವಾದದ್ದು. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ರಾಸಾಯನಿಕ ವಿಜ್ಞಾನ ವಿಭಾಗದ ಸಾಧಕರಾಗಿ ಹೊರಹೊಮ್ಮಬೇಕು ಎಂದರು.
ಕಾರ್ಯಕ್ರಮದಲ್ಲಿ ನೈಸರ್ಗಿಕ ವಿಜ್ಞಾನ ವಿಭಾಗದ ಪ್ರಾಂಶುಪಾಲೆ ಡಾ. ಎಚ್.ಎಸ್.ಶ್ವೇತ, ಸಹಪ್ರಾಧ್ಯಾಪಕರು ಸೇರಿದಂತೆ ಹಲವರು ಇದ್ದರು.