- ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಬಾಲಕರ ಹಾಸ್ಟೆಲ್ ಕಟ್ಟಡ ಉದ್ಘಾಟನೆ - - - ಕನ್ನಡಪ್ರಭ ವಾರ್ತೆ, ದಾವಣಗೆರೆ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಹಾಗೂ ಶಿಕ್ಷಕರ ಶ್ರಮಕ್ಕೆ ತಕ್ಕ ಬೆಲೆಯನ್ನು ನೀಡಲು ಶ್ರದ್ಧೆಯಿಂದ ವಿದ್ಯಾಭ್ಯಾಸ ನಡೆಸಿ, ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಒಂದು ಉತ್ತಮವಾದ ಕಾಲಘಟ್ಟ. ಈ ಸಮಯವನ್ನು ಎಲ್ಲ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಬೆಳೆಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು. ಶಿಕ್ಷಣದ ಜೊತೆ ಎನ್ಸಿಸಿ ಮತ್ತು ಎನ್ಎಸ್ಎಸ್ ಚಟುವಟಿಕೆ, ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ, ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಬೇರೆಡೆಗೆ ಗಮನಹರಿಸದೇ ಉತ್ತಮ ಫಲಿತಾಂಶ ಗಳಿಸಬೇಕು. ಟಿವಿ. ಮೊಬೈಲ್ ಮೇಲಿನ ಆಸಕ್ತಿ, ಸಮಯವನ್ನು ಜ್ಞಾನಾರ್ಜನೆಗಾಗಿ ಉಪಯೋಗಿಸಬೇಕು. ಉತ್ತಮ ಅಂಕಗಳನ್ನು ಪಡೆದರೆ ಮುಂದಿನ ಜೀವನವನ್ನು ಸುಭದ್ರವಾಗಿ ಮಾಡಿಕೊಳ್ಳಬಹುದು ಎಂದರು.ಮಹಾಪೌರರಾದ ಬಿ.ಎಚ್. ವಿನಾಯಕ, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೆ.ನಾಗರಾಜ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬೇಬಿ ಸುನೀತಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಕೆ.ಎಚ್.ಗಾಯಿತ್ರಿ ಇನ್ನಿತರರು ಉಪಸ್ಥಿತರಿದ್ದರು.
ದಾವಣಗೆರೆಯಲ್ಲಿ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಉದ್ಘಾಟಿಸಿದರು.