ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದೊಂದಿಗೆ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆ ಶುಕ್ರವಾರ ನಗರದ ಪ್ರತಿಮೆ ಬಳಿ ನಡೆಯಿತು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದೊಂದಿಗೆ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆ ಶುಕ್ರವಾರ ನಗರದ ಪ್ರತಿಮೆ ಬಳಿ ನಡೆಯಿತು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ವಿಶ್ರಾಂತ ಪ್ರಾಂಶುಪಾಲ, ಇತಿಹಾಸ ಪ್ರಾಧ್ಯಾಪಕ ನಂಗಾರು ನಿಂಗರಾಜು, ಶಾಸಕರಾದ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಜಿ.ಮೋಹನ್ ದಾಸ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಕೊಡಗು ಗೌಡ ಸಮಾಜಗಳ ಒಕ್ಕೂಟಗಳ ಅಧ್ಯಕ್ಷ ಆನಂದ ಕರಂದ್ಲಾಜೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್, ಲಕ್ಷ್ಮೀ ನಾರಾಯಣ ಕಜೆಗದ್ದೆ, ಪ್ರಮುಖರಾದ ಸೂರ್ತಲೆ ಸೋಮಣ್ಣ, ಅಕಾಡೆಮಿ ಸದಸ್ಯರು ಇತರರು ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಪ್ರತಿಮೆಗೆ ಪುಷ್ಪಗುಚ್ಛ ಅರ್ಪಿಸಿ ಗೌರವ ನಮನ ಸಲ್ಲಿಸಿದರು. ಬಳಿಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಮೆರವಣಿಗೆ ಹೊರಟು ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತದ ಮೂಲಕ ಕೋಟೆಗೆ ಆಗಮಿಸಿ ಗುಡ್ಡೆಮನೆ ಅಪ್ಪಯ್ಯ ಗೌಡರನ್ನು ಗಲ್ಲಿಗೇರಿಸಿದ ಸ್ಥಳದಲ್ಲಿ ಪುಷ್ಪಗುಚ್ಚ ಸಮರ್ಪಿಸಿ ಗೌರವ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಗುಡ್ಡೆಮನೆ ಅಪ್ಪಯ್ಯ ಗೌಡರು ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ್ದು, ಇವರನ್ನು ಸದಾ ಸ್ಮರಿಸುವಂತಾಗಬೇಕು ಎಂದರು.ಗುಡ್ಡಗಾಡು ಪ್ರದೇಶ ಹೊಂದಿರುವ ಕೊಡಗು ಜಿಲ್ಲೆ, ಸ್ವಾತಂತ್ರ್ಯ ಪೂರ್ವದಲ್ಲಿ ಹೇಗಿತ್ತು, ಸ್ವಾತಂತ್ರ್ಯ ನಂತರ ಯಾವ ರೀತಿ ಬೆಳವಣಿಗೆ ಹೊಂದಿದೆ ಎಂಬುದನ್ನು ಊಹಿಸಿಕೊಳ್ಳುವುದು ಕಷ್ಟ ಸಾಧ್ಯವಾಗಿದೆ. ಅಂತಹ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು, ಗುಡ್ಡೆಮನೆ ಅಪ್ಪಯ್ಯ ಗೌಡರ ಸ್ವಾತಂತ್ರ್ಯ ಹೋರಾಟ ಮತ್ತು ಸಾಧನೆ ಸಾರ್ವಕಾಲಿಕ ದಾಖಲೆ ಎಂದು ಸ್ಮರಿಸಿದರು. ಕಳೆದ 15 ವರ್ಷಗಳಿಂದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಭಾರತ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಪ್ರತಿನಿತ್ಯ ಸ್ಮರಿಸವಂತಾಗಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಗುಡ್ಡೆಮನೆ ಅಪ್ಪಯ್ಯ ಗೌಡರು ಸೇರಿದಂತೆ ಹಲವರು ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ಆದರೆ ಇಂದು ನಾವುಗಳೇ ಕಚ್ಚಾಡುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.
ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿ ಉದ್ಯಾನವನ ಸಮರ್ಪಕವಾಗಿ ಆಗಲಿ ಎಂದು ಶಾಸಕರು ಆಶಿಸಿದರು. ವಿಶ್ರಾಂತ ಪ್ರಾಂಶುಪಾಲ, ಇತಿಹಾಸ ಪ್ರಾಧ್ಯಾಪಕ ನಂಗಾರು ನಿಂಗರಾಜು ಮಾತನಾಡಿದರು. ಗುಡ್ಡೆಮನೆ ಅಪ್ಪಯ್ಯ ಗೌಡರ ಕುರಿತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು. ಬಹುಮಾನ ಪಡೆದವರ ವಿವರ:
ಸಂತ ಮೈಕಲರ ಶಾಲೆಯ ಸ್ನೇಹ ಕೆ.ಎಫ್(ಪ್ರಥಮ), ಸಂತ ಜೋಸೆಫರ ಶಾಲೆಯ ಲ್ಯಾನ್ಸಿ ಪೊನ್ನಮ್ಮ ಟಿ.ಟಿ.(ದ್ವಿತೀಯ), ಸಂತ ಜೋಸೆಫರ ಶಾಲೆಯ ರಿಧಿ ಎಸ್. ನಾಯಕ್(ತೃತೀಯ). ಪ್ರಮುಖರಾದ ಸೂರ್ತಲೆ ಸೋಮಣ್ಣ, ಅಂಬೆಕಲ್ಲು ವಿನೋದ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ಪಿ.ಎಂ.ಸಂದೀಪ್, ಮೋಹನ್ ಪೊನ್ನಚನ, ಚಂದ್ರಶೇಖರ್ ಪೇರಾಲು, ತೇಜಕುಮಾರ್ ಕುಡೆಕಲ್ಲು, ಚಂದ್ರಾವತಿ ಬಡ್ಡಡ್ಕ, ಲತಾ ಪ್ರಸಾದ್ ಕುದ್ಪಾಜೆ, ಪಿ.ಎಸ್.ಕಾರ್ಯಪ್ಪ, ಡಾ.ಎನ್.ಎ.ಜ್ಞಾನೇಶ್, ಸೂದನ ಎಸ್.ಈರಪ್ಪ, ವಿನೋದ್ ಮೂಡಗದ್ದೆ, ಗೋಪಾಲಕೃಷ್ಣ ಕೆ.ಸಿ., ಕುದುಪಜೆ ಕೆ.ಪ್ರಕಾಶ್, ರಿಜಿಸ್ಟ್ರಾರ್ ಚಿನ್ನಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ, ವಿವಿಧ ಗೌಡ ಸಮಾಜಗಳ ಪ್ರಮುಖರು ಇತರರು ಇದ್ದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಸ್ವಾಗತಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.