ಕನ್ನಡಪ್ರಭ ವಾರ್ತೆ ಕಲಬುರಗಿ
ನಗರದ ರಾಮ ಮಂದಿರ ಹತ್ತಿರವಿರುವ ವಿವೇಕಾನಂದ ವಿದ್ಯಾ ನಿಕೇತನ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಲಿಕೆ, ನೆನಪು ಹಾಗೂ ಏಕಾಗ್ರತೆ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಮೊದಲು ನಿಖರವಾದ ಗುರಿ ಇಟ್ಟುಕೊಳ್ಳಬೇಕು. ಸಮಯ ನಿರ್ವಹಣೆಯ ಕೌಶಲ ಗೊತ್ತಿದ್ದಾಗ ಆತ್ಮವಿಶ್ವಾಸ ಹೆಚ್ಚುತ್ತದೆಎಂದರು.
ಅಂಕಗಳಿಕೆಗಿಂತ ಜ್ಞಾನಾರ್ಜನೆ ಮುಖ್ಯ:ವಿದ್ಯಾರ್ಥಿಗಳು ಅಂಕಗಳಿಗೆ ಹೆಚ್ಚು ಆದ್ಯತೆ ನೀಡದೆ ಮುಖ್ಯವಾಗಿ ಪಠ್ಯವನ್ನುಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬೇಕು. ತರಗತಿಯಲ್ಲಿ ಪಠ್ಯವನ್ನು ಏಕಾಗ್ರತೆಯಿಂದ ಆಲಿಸುವುದರಿಂದ ನಮ್ಮ ಮೆದುಳು ಸಮರ್ಥವಾಗಿ ವಿಷಯ ಸಂಗ್ರಹ ಮಾಡಿಕೊಳ್ಳುತ್ತದೆ. ವಿಷಯ ಗ್ರಹಿಕೆ ಹಾಗೂ ಮೇಲಿಂದ ಮೇಲೆ ಸ್ಮರಿಸಿಕೊಳ್ಳುವುದರಿಂದ ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ. ಅದಕ್ಕಾಗಿ ಓದಿದ್ದನ್ನು ಬರೆಯುವುದರಿಂದ ವಿಷಯವು ನಮ್ಮ ಮೆದುಳಿನಲ್ಲಿ ದಾಖಲಾಗುತ್ತದೆ ಎಂದು ಡಾ. ಸಿ.ಆರ್. ಚಂದ್ರಶೇಖರ ಹೇಳಿದರು.
ಶಾಲೆಯ ಪರವಾಗಿ ವಿಶೇಷ ಗೌರವ ಸನ್ಮಾನ ಸ್ವೀಕರಿಸಿ ತಾವು ಪಡೆದ ಪದ್ಮಶ್ರೀ ಪದಕವನ್ನು ಮಕ್ಕಳು ಮುಟ್ಟಿ ನೋಡಲಿ ಎಂದು ಮಕ್ಕಳ ಕೈಗೆ ಕೊಟ್ಟರು. ಪ್ರತಿ ವಿದ್ಯಾರ್ಥಿ ಅದನ್ನು ಮುಟ್ಟಿ ಪುಳಕಿತಗೊಂಡ ಸನ್ನಿವೇಶ ವಿಶೇಷವಾಗಿತ್ತು. ನಂತರ ಮಕ್ಕಳ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಸರಿ ಉತ್ತರಗಳನ್ನು ನೀಡಿದ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಬಹುಮಾನವಾಗಿ ನೀಡಿ ಹುರಿದುಂಬಿಸಿದರು. ತಾವೂ ಜೀವನದಲ್ಲಿ ಮಹತ್ತರವಾದದ್ದನ್ನು ಸಾಧಿಸಿ ಇಂತಹ ಪುರಸ್ಕಾರಕ್ಕೆ ಭಾಜನರಾಗಬೇಕೆಂದು ಕಿವಿ ಮಾತು ಹೇಳಿದರು.