ಕನ್ನಡಪ್ರಭ ವಾರ್ತೆ ಮಂಡ್ಯ
ರಾಷ್ಟ್ರವ್ಯಾಪಿ ಬೇಡಿಕೆಗಳ ದಿನದ ಅಂಗವಾಗಿ ಸಿಐಟಿಯು ಜಿಲ್ಲಾ ಸಮಿತಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಹಲವು ಹಕ್ಕೊತ್ತಾಯಗಳ ಮನವಿ ಸಲ್ಲಿಸಿದರು.ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್ನಲ್ಲಿ ಜಮಾಯಿಸಿದ ಸಿಐಟಿಯು ಜಿಲ್ಲಾ ಸಮಿತಿಯ ನೂರಾರು ಮಹಿಳಾ ಕಾರ್ಯಕರ್ತರು, ಹೆದ್ದಾರಿ ಮಾರ್ಗವಾಗಿ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಕೆಲ ಕಾಲ ತಮ್ಮ ಹಕ್ಕೊತ್ತಾಯಗಳ ಕುರಿತು ಘೋಷಣೆ ಕೂಗಿದ ಪ್ರತಿಭಟನಾಕಾರರು, ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಲೇಬೇಕೆಂದು ಆಗ್ರಹಿಸಿದರು.
ಸಿಐಟಿಯು ಅಧ್ಯಕ್ಷ ಎಂ.ಶಿವಕುಮಾರ್ ಮಾತನಾಡಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು. ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ ಬಡವರಿಗೆ ಬದುಕಲು ಅವಕಾಶ ಕಲ್ಪಿಸುವ ನೀತಿಗಳನ್ನು ಜಾರಿಗೊಳಿಸಬೇಕು. ರೈತ ವಿರೋಧಿ ಕೃಷಿ ಕಾನೂನುಗಳನ್ನು ವಾಪಸ್ಸು ಪಡೆಯುವುದು. ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಂಬಲ ಬೆಲೆ ಖಾತರಿಪಡಿಸಿ, ಎಪಿಎಂಸಿ ವ್ಯವಸ್ಥೆ ಬಲಗೊಳಿಸಬೇಕು. ಗೊಬ್ಬರ ಒಳಗೊಂಡಂತೆ ಇಡುವಳಿಗಳಿಗೆ ಸಬ್ಸಿಡಿ ಕಡಿತಗೊಳಿಸುವ ನೀತಿಗಳನ್ನು ಕೈಬಿಡದೆ ಸರ್ಕಾರ ರೈತರನ್ನು ವಂಚಿಸುತ್ತಿದೆ ಎಂದು ದೂರಿದರು.ಹಲವು ಭರವಸೆ ನೀಡುತ್ತಾ, ಪರಿಣಾಮಕಾರಿಯಾಗದ ಯಾವ ಭರವಸೆ ಈಡೇರಿಸದೆ ಶ್ರಮಿಕರು, ರೈತರು, ಕಾರ್ಮಿಕರನ್ನು ಸಮಸ್ಯೆಯಲ್ಲಿ ಮುಳುಗಿಸಿವೆ. ಕಾರ್ಮಿಕರಿಗೆ ಕನಿಷ್ಠ ವೇತನವನ್ನು ೩೧ ಸಾವಿರ ರು. ಹೆಚ್ಚಳ ಮಾಡಬೇಕು. ಸರ್ವೋಚ್ಛ ನ್ಯಾಯಾಲಯದ ತೀರ್ಪಿನಂತೆ ಕನಿಷ್ಟ ವೇತನವನ್ನು ನಿಗಧಿಪಡಿಸಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಸಿಐಟಿಯು ಪದಾಧಿಕಾರಿಗಳಾದ ಸಿ.ಕುಮಾರಿ, ಚಂದ್ರಶೇಖರ್, ಎಂ.ಬಿ. ಶಶಿಕಲಾ, ಎಸ್.ಗಾಯಿತ್ರಿ, ಆರ್.ಮಂಗಳಾ, ಜಯಶೀಲಮ್ಮ, ಬಿ.ಶಿವಕುಮಾರ್ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.ಶುಲ್ಕದ ವಿವರ ಪ್ರಕಟಿಸುವಂತೆ ಮನವಿಮಂಡ್ಯ:ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ನಿಗದಿಪಡಿಸಿರುವ ಶುಲ್ಕದ ವಿವರ ಪ್ರಕಟಿಸಲು ಶಿಕ್ಷಣ ಇಲಾಖೆಗೆ ಸೂಚನೆ ನೀಡುವಂತೆ ಒತ್ತಾಯಿಸಿ ನಗರಸಭಾ ಮಾಜಿ ಸದಸ್ಯ ಶಿವಕುಮಾರ್ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಈಗಾಗಲೇ ಶಾಲಾ ದಾಖಲಾತಿಗಳು ಆರಂಭವಾಗಿ ತರಗತಿಗಳು ಪ್ರಾರಂಭವಾಗಿವೆ. ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಪ್ರಸಕ್ತ ಸಾಲಿಗೆ ವಿದ್ಯಾರ್ಥಿಗಳ ದಾಖಲಾತಿ ಮತ್ತು ಶುಲ್ಕ ವಸೂಲಿ ಕಾಯ್ದೆ ೨೦೦೯ರನ್ವಯ ದರಪಟ್ಟಿ ಅಳವಡಿಸುವಂತೆ ಸೂಚಿಸಲಾಗಿಗೆದ. ಆದರೆ, ಈ ಕಾಯ್ದೆಯನ್ವಯ ಎಲ್ಲಾ ಅನುದಾನರಹಿತ ಶಾಲೆಗಳಲ್ಲಿ ದರ ಪಟ್ಟಿ ಪ್ರಕಟಿಸಬೇಕಿತ್ತು. ಆದರೆ, ಯಾವುದೇ ಶಾಲಾ ಆಡಳಿತ ಮಂಡಳಿ ಪ್ರಕಟಿಸಿಲ್ಲ. ಈ ಹಿನ್ನೆಲೆಯಲ್ಲಿ ದರಪಟ್ಟಿಯನ್ನು ಫಲಕದಲ್ಲಿ ಪ್ರಕಟಿಸುವಂತೆ ಸೂಚಿಸಬೇಕು ಎಂದು ಆಗ್ರಹಿಸಿದರು.