ಅಕ್ರಮ ವಲಸಿಗರ ಪತ್ತೆಗೆ ಸರ್ಕಾರ ಕೈಗೊಂಡ ಕ್ರಮದ ವರದಿ ಸಲ್ಲಿಸಿ

KannadaprabhaNewsNetwork |  
Published : Feb 05, 2026, 04:15 AM IST
Incident at Bangalore Club | Kannada Prabha

ಸಾರಾಂಶ

ಅಕ್ರಮ ವಲಸಿಗರಿಂದ ದೇಶದ ಭದ್ರತೆ ಅಪಾಯವಿದೆ ಎಂದು ಪುನರುಚ್ಚರಿಸಿರುವ ಹೈಕೋರ್ಟ್‌, ರಾಜ್ಯ ಸರ್ಕಾರದ ಅಂದಾಜಿನ ಪ್ರಕಾರ ಬೆಂಗಳೂರಿನಲ್ಲಿ ಸುಮಾರು 20 ಲಕ್ಷ ಅಕ್ರಮ ವಲಸಿಗರು ನೆಲೆಸಿದ್ದಾರೆ. ಈ ಅಕ್ರಮ ವಲಸಿಗರನ್ನು ಪತ್ತೆ ಮಾಡಲು ಮತ್ತು ದೇಶದಿಂದ ಹೊರಹಾಕಲು ಕೈಗೊಂಡಿರುವ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಸರ್ಕಾರ ನಿರ್ದೇಶಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಅಕ್ರಮ ವಲಸಿಗರಿಂದ ದೇಶದ ಭದ್ರತೆ ಅಪಾಯವಿದೆ ಎಂದು ಪುನರುಚ್ಚರಿಸಿರುವ ಹೈಕೋರ್ಟ್‌, ರಾಜ್ಯ ಸರ್ಕಾರದ ಅಂದಾಜಿನ ಪ್ರಕಾರ ಬೆಂಗಳೂರಿನಲ್ಲಿ ಸುಮಾರು 20 ಲಕ್ಷ ಅಕ್ರಮ ವಲಸಿಗರು ನೆಲೆಸಿದ್ದಾರೆ. ಈ ಅಕ್ರಮ ವಲಸಿಗರನ್ನು ಪತ್ತೆ ಮಾಡಲು ಮತ್ತು ದೇಶದಿಂದ ಹೊರಹಾಕಲು ಕೈಗೊಂಡಿರುವ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಸರ್ಕಾರ ನಿರ್ದೇಶಿಸಿದೆ.

ಬಾಂಗ್ಲಾ ಅಕ್ರಮ ವಲಸಿಗರಿಗೆ ಸಂಬಂಧಿಸಿ ಹೋರಾಟ ಮಾಡಿದ ಸಂಬಂಧ ಬೆಂಗಳೂರಿನ ಸೋಲದೇವನಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ಪುನೀತ್‌ ಕೆರೆಹಳ್ಳಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಸೂಚನೆ ನೀಡಿದೆ. ಅಲ್ಲದೆ, ಪುನೀತ್‌ ಕೆರೆಹಳ್ಳಿ ವಿರುದ್ಧದ ಎಫ್‌ಐಆರ್‌ಗಳಿಗೆ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿತು.

ಇದಕ್ಕೂ ಮುನ್ನ ವಿಚಾರಣೆ ವೇಳೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಎಫ್‌ಆರ್‌ಆರ್‌ಒನಲ್ಲಿ ನೋಂದಣಿ ಮಾಡಿಸದ ಜನರನ್ನು ಪತ್ತೆ ಮಾಡುವುದು ರಾಜ್ಯ ಸರ್ಕಾರದ ಕೆಲಸ. ಸರ್ಕಾರ ಕೆಲಸ ಮಾಡುತ್ತಿಲ್ಲ ಎಂದು ಪುನೀತ್‌ ತೋರಿಸಿದ್ದಾರೆ. ಅದಕ್ಕೆ ನೀವು ಅವರ ವಿರುದ್ಧ ಪ್ರಕರಣ ದಾಖಲಿಸಿದರೆ ಹೇಗೆ? ವಿದೇಶದಿಂದ ಬಂದಿರುವವರು ಬೆಂಗಳೂರಿನ ಎಲ್ಲ ಕಡೆ ನೆಲೆಸಿದ್ದಾರೆ. ಯಾರ ಬಳಿಯೂ ವೀಸಾ, ಪರ್ಮಿಟ್‌ ಇಲ್ಲ. ಅದಾಗ್ಯೂ ಅವರು ಇಲ್ಲಿ ನೆಲೆಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಪುನೀತ್‌ ಅದನ್ನು ತೋರಿಸಿದ್ದಕ್ಕೆ ನಿಮಗೆ ಸಮಸ್ಯೆಯೇ? ಎಂದು ಸರ್ಕಾರಕ್ಕೆ ಚಾಟಿ ಬೀಸಿತು.

ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್‌. ಜಗದೀಶ್‌ ಉತ್ತರಿಸಿ, ಪುನೀತ್‌ ದಾಖಲೆ ತೋರಿಸಲಿ. ಆದರೆ, ಅಕ್ರಮ ವಲಸಿಗರನ್ನು ಗುರುತಿಸಲು ವಿಧಾನವಿದೆ. ಪುನೀತ್‌ ನೇರವಾಗಿ ಅಲ್ಲಿಗೆ ಹೋಗಿ ಹಲ್ಲೆ ನಡೆಸಲಾಗದು. ಅಕ್ರಮ ವಲಸಿಗರನ್ನು ಬಂಧನದಲ್ಲಿಡಲಾಗಿದೆ. ದೇಶದಿಂದ ಹೊರಗೆ ಕಳುಹಿಸುವುದರ ಕುರಿತು ಎಫ್‌ಆರ್‌ಆರ್‌ಒ ಕ್ರಮಕೈಗೊಳ್ಳಬೇಕು. ಬಾಂಗ್ಲಾದೇಶದ ವಲಸಿಗರ ಕುರಿತು ಎಫ್‌ಆರ್‌ಆರ್‌ಒಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿತು.

ಅದಕ್ಕೆ ನ್ಯಾಯಪೀಠ, ಅಕ್ರಮ ವಲಸಿಗರನ್ನು ಪತ್ತೆ ಮಾಡುವುದು ಸರ್ಕಾರದ ಕೆಲಸ. ಪುನೀತ್‌ ಅದನ್ನು ಬಿಂಬಿಸಿದ್ದಾರೆ ಅಷ್ಟೆ. ತನಿಖೆ ನಡೆಸಿ, ಸರ್ಕಾರ ಪ್ರಕರಣ ದಾಖಲಿಸಬೇಕು. ಪುನೀತ್‌ ಅಲ್ಲಿ ಹಲ್ಲೆ ನಡೆಸಿಲ್ಲ, ಅದನ್ನು ಬಿಂಬಿಸಿದ್ದಾರೆ ಅಷ್ಟೆ. ಅಕ್ರಮ ವಲಸಿಗರು ಎಲ್ಲಾ ಕಡೆ ಇದ್ದಾರೆ. ಒಂದು ದೇಶ ಅಥವಾ ಇನ್ನೊಂದು ದೇಶದ ಬಗ್ಗೆ ಮಾತನಾಡುತ್ತಿಲ್ಲ. ಅಕ್ರಮವಾಗಿ ನೆಲೆಸಿರುವ ವಿದೇಶಿಯರ ವಿರುದ್ಧ ಸರ್ಕಾರ ಏನಾದರೂ ಕ್ರಮಕೈಗೊಂಡಿದೆಯೇ? ಅವರನ್ನು ಯಾವಾಗ ದೇಶದಿಂದ ಹೊರಗೆ ಕಳುಹಿಸಲಾಗಿದೆ? ಅವಧಿ ಮೀರಿ ಬೆಂಗಳೂರಿನಲ್ಲಿ ನೆಲೆಸಿರುವ ವಿದೇಶಿಗರ ವಿರುದ್ಧ ಸರ್ಕಾರ ಯಾವ ಕ್ರಮಕೈಗೊಂಡಿದೆ ಎಂದು ಪ್ರಶ್ನಿಸಿ, ಈ ಕುರಿತು ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ