ಕನ್ನಡಪ್ರಭ ವಾರ್ತೆ ಅರಸೀಕೆರೆ
ಮನುಷ್ಯ ತನ್ನ ವಿದ್ಯಾರ್ಜನೆ ಜೊತೆಗೆ ಪಠ್ಯೇತರ ಚಟುವಟಿಕೆ ರೂಢಿಸಿಕೊಂಡಿದ್ದರೆ ಮಾತ್ರ ಅವನು ಸಾರ್ವಜನಿಕ ಬದುಕಿನಲ್ಲಿ ಯಶಸ್ಸು ಕಾಣುತ್ತಾನೆ ಎಂದು ಹೊಯ್ಸಳೇಶ್ವರ ಪದವಿ ಪೂರ್ವ ಕಾಲೇಜಿನ ಸಲಹಾ ಸಮಿತಿ ಅಧ್ಯಕ್ಷ ಜಿ.ಬಿ.ಶಶಿಧರ್ ಅಭಿಪ್ರಾಯಪಟ್ಟರು.ಹೊಯ್ಸಳೇಶ್ವರ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಚಟುವಟಿಕೆಗಳ ಎನ್ಸಿಸಿ ಮತ್ತು ಎನ್ಎಸ್ಎಸ್ ಸ್ಕೌಟ್ಸ್ ಅಂಡ್ ಗೈಡ್ಸ್ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತಿ ಅಧ್ಯಕ್ಷ ಹಿರಿಯೂರು ರೇವಣ್ಣ ಮಾತನಾಡಿ, ನಮ್ಮ ಹೊಯ್ಸಳೇಶ್ವರ ಕಾಲೇಜು ಒಂದಲ್ಲ ಒಂದು ರೀತಿಯಲ್ಲಿ ವಿದ್ಯಾರ್ಥಿಗಳು ತಾಲೂಕು ಜಿಲ್ಲಾ ಮಟ್ಟದಲ್ಲಿ ಗಣನೀಯ ಸಾಧನೆ ಮಾಡಿರುವುದು ನಮ್ಮ ತಾಲೂಕಿಗೆ ಹೆಮ್ಮೆ ತರುವ ವಿಷಯವಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಪ್ರಮುಖ ಭಾಷಣಕಾರರಾಗಿ ಆಗಮಿಸಿದ ಅಜ್ಜಂಪುರ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ಆನಂದ್ ಮಾತನಾಡಿ, ಇಂದಿನ ಮಕ್ಕಳು ಮೊಬೈಲ್ ಹಾಗೂ ಟಿವಿ ಹವ್ಯಾಸಗಳಿಂದ ದೂರ ಇದ್ದರೆ, ತಮ್ಮ ಅಮೂಲ್ಯವಾದ ಸಮಯವನ್ನು ಹಾಳು ಮಾಡಿಕೊಳ್ಳದೇ ಆತ್ಮವಿಶ್ವಾಸ ಸ್ವಯಂ ಪ್ರವೃತ್ತಿ, ಸ್ವಯಂ ಆಸಕ್ತಿ ರೂಢಿಸಿಕೊಂಡು ಉತ್ತಮ ವಿದ್ಯಾಭ್ಯಾಸದ ಕಡೆ ಹೋದಾಗ ಕತ್ತಲಾಗಿರುವ ಬದುಕು ಬೆಳಕಾಗುವುದರಲ್ಲಿ ಸಂಶಯವೇ ಇಲ್ಲ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇದೇ ವೇಳೆ ತಾಲೂಕಿನ ಪದವಿಪೂರ್ವ ಕಾಲೇಜಿನಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಏರ್ಪಡಿಸಲಾಗಿತ್ತು. ಸಮಾರಂಭದ ಮುಖ್ಯ ಅತಿಥಿಗಳಾಗಿ ಕಾಲೇಜಿನ ಸಲಹಾ ಸಮಿತಿಯ ಸದಸ್ಯರಾದ ಮಹಾಲಿಂಗಪ್ಪ, ಶಶಿವಾಳ ಗಂಗಾಧರ್, ವೀರಭದ್ರಪ್ಪ, ನಗರಸಭಾ ಆಯುಕ್ತ ಕೃಷ್ಣಮೂರ್ತಿ, ನಗರ ವೃತ್ತ ನಿರೀಕ್ಷಕ ರಾಘವೇಂದ್ರರಾವ್, ಹೊಯ್ಸಳೇಶ್ವರ ಕಾಲೇಜಿನ ಪ್ರಾಂಶುಪಾಲ ವಸಂತಕುಮಾರ್, ಉಪನ್ಯಾಸಕರಾದ ಶಶಿಕುಮಾರ್, ಮಂಜುನಾಥ್, ಪೂರ್ಣಿಮಾ, ರೂಪ, ಮೇಘ, ಪೂಜಾ, ಪಾರ್ವತಮ್ಮ, ಸಯ್ಯದ್ ಆಯುಬ್, ಹಾಗೂ ಕಾಲೇಜಿನ ಎಲ್ಲಾ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.