ನಿರಂತರ ಪ್ರಯತ್ನದಿಂದ ಯಶಸ್ಸು ಸಾಧ್ಯ: ಪ್ರೊ. ಶಂಕ್ರಯ್ಯ ಅಬ್ಬಿಗೇರಿಮಠ

KannadaprabhaNewsNetwork | Published : Jul 23, 2024 12:44 AM

ಸಾರಾಂಶ

ಅತ್ಯುತ್ತಮವಾದ ಅಧ್ಯಯನ ಸಾಮಗ್ರಿ, ಪರಿಕಲ್ಪನಾತ್ಮಕ ಓದುಗಾರಿಕೆ, ನಿರಂತರ ಪ್ರಯತ್ನ ಯಶಸ್ಸನ್ನು ತಂದುಕೊಡುತ್ತದೆ.

ಕನ್ನಡ ಭಾಷೆ ಮತ್ತು ವ್ಯಾಕರಣ ಎಂಬ ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಕೊಪ್ಪಳ

ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಸ್ಪರ್ಧಾರ್ಥಿಗಳು ತಾಳ್ಮೆ, ಆತ್ಮವಿಶ್ವಾಸ ಮತ್ತು ಪರಿಶ್ರಮದಿಂದ ಓದನ್ನು ಮುಂದುವರಿಸಬೇಕು. ಅತ್ಯುತ್ತಮವಾದ ಅಧ್ಯಯನ ಸಾಮಗ್ರಿ, ಪರಿಕಲ್ಪನಾತ್ಮಕ ಓದುಗಾರಿಕೆ, ನಿರಂತರ ಪ್ರಯತ್ನ ಯಶಸ್ಸನ್ನು ತಂದುಕೊಡುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇರಕಲ್ಲಗಡದ ಸಹಾಯಕ ಪ್ರಾಧ್ಯಾಪಕ ಶಂಕ್ರಯ್ಯ ಅಬ್ಬಿಗೇರಿಮಠ ಹೇಳಿದರು.

ತಾಲೂಕಿನ ಹಿಟ್ನಾಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ (IQAC) ಮತ್ತು ಕನ್ನಡ ವಿಭಾಗದಿಂದ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡ ಭಾಷೆ ಮತ್ತು ವ್ಯಾಕರಣ ಎಂಬ ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡ ಭಾಷೆ, ವ್ಯಾಕರಣ, ಸಾಹಿತ್ಯದ ಕುರಿತು ಕೇಳಲಾಗುವ ಪ್ರಶ್ನೆಗಳಿಗೆ ಉತ್ತರಿಸುವ ಕಲೆ ಮತ್ತು ಕೌಶಲ ಹೇಗೆ ಹೆಚ್ಚಿಸಿಕೊಳ್ಳಬೇಕು. ಜೊತೆಗೆ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾರ್ಥಿಗಳಲ್ಲಿ ಇರಬೇಕಾದ ಲಕ್ಷಣ ಮತ್ತು ಅರ್ಹತೆಗಳನ್ನು ಮನಮುಟ್ಟುವಂತೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಇಬ್ರಾಹಿಂ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಅನೇಕ ಸರ್ಕಾರಿ ಉದ್ಯೋಗಾವಕಾಶಗಳು ಹೆಚ್ಚಾಗಿದ್ದು, ಅತ್ಯುತ್ತಮ ತಯಾರಿ ನೆಡೆಸಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅರ್ಹತೆ ಪಡೆಯುವ ಮೂಲಕ ತಮ್ಮ ಕನಸನ್ನು ನನಸಾಗಿಸಿಕೊಳ್ಳುವಂತೆ ತಿಳಿಸಿದರು.

ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ನಿಂಗಪ್ಪ ಕಂಬಳಿ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಾದ ತಾವು ಸರ್ಕಾರಿ ನೌಕರಿ ಪಡೆಯಬೇಕೆಂಬ ಇಚ್ಛೆ ಹೊಂದಿರುವವರು ಸದರಿ ಕಾರ್ಯಾಗಾರದ ಸದುಪಯೋಗಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಕಾಲೇಜಿನ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕ ಹಾಗೂ ಐಕ್ಯೂಎಸಿ ಘಟಕದ ಸಹ ಸಂಚಾಲಕ ಡಾ. ಟಿ.ಎಚ್. ಬಸವರಾಜ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಸಹಾಯಕ ಪ್ರಾಧ್ಯಾಪಕ ಪ್ರೊ. ಬಿ. ಫಣಿರಾಜ ಕಾರ್ಯಕ್ರಮ ನಿರೂಪಿಸಿದರು. ನೀಲಾಂಬರಿ ಪ್ರಾರ್ಥಿಸಿದರು.

ಉಪನ್ಯಾಸಕ ಚಂದ್ರಶೇಖರ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಸಿದ್ದಚಾರಿ ವಂದಿಸಿದರು. ಉಪನ್ಯಾಸಕರಾದ ಮಂಜುನಾಥ ಮುತ್ತಾಳ, ತಾಜುದ್ದೀನ್, ಮಂಜುನಾಥ ಜೆ., ಡಾ. ಹನುಮಂತರಾಯಡು ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.

Share this article