ರಾಜ್ಯ ಪುರಸ್ಕಾರ ಪಡೆದವರಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭ
ಜೀವನದಲ್ಲಿ ಅವಕಾಶಗಳು ಸಿಗುತ್ತವೆ. ಅವುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕಾಗಿದೆ. ಸಮಯಪ್ರಜ್ಞೆ ಹಾಗೂ ಸತತ ಪ್ರಯತ್ನದಿಂದ ಯಶಸ್ಸು ಸಿಗುತ್ತದೆ ಎಂದು ಭಾರತ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ. ಆರ್. ಸಿಂಧ್ಯಾ ಹೇಳಿದರು.
ನಗರದ ಕೆಎಲ್ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ರೋವರ್ ರೇಂಜರ್ಸ್ ಘಟಕ ಮತ್ತು ಜಿಲ್ಲಾ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ ಆಶ್ರಯದಲ್ಲಿ ರಾಜ್ಯ ಪುರಸ್ಕಾರ ಪಡೆದವರಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಡಿಡಿಪಿಐ ಮತ್ತು ಸ್ಕೌಟ್ ಗೈಡ್ಸ್ನ ಜಿಲ್ಲಾ ಆಯುಕ್ತ ಸುರೇಶ ಹುಗ್ಗಿ ಮಾತನಾಡಿ, ಸ್ಕೌಟ್ಸ್ ಸಂಘಟನೆಯು ಉತ್ತಮ ನಾಗರಿಕರನ್ನು ನಿರ್ಮಾಣ ಮಾಡುವುದರಲ್ಲಿ ಮಹತ್ತರ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಡಾ. ಎಸ್.ಎಲ್. ಬಾಲೆಹೊಸೂರ ಮಾತನಾಡಿ, ಪ್ರತಿ ವಿದ್ಯಾರ್ಥಿಯೂ ಸ್ಕೌಟ್ ತರಬೇತಿಯನ್ನು ಪಡೆದು ಉನ್ನತ ಸ್ಥಾನಕ್ಕೆ ಏರಿ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರಾಚಾರ್ಯೆ ಡಾ. ಸಂಧ್ಯಾ ಆರ್. ಕುಲಕರ್ಣಿ ಸ್ವಾಗತಿಸಿದರು. ಪ್ರೊ. ಹೇಮಂತ ಸಿ.ಎನ್. ಪರಿಚಯಿಸಿದರು. ಡಾ. ಎಂ.ಪಿ. ಕಣವಿ ಪ್ರಮಾಣ ಪತ್ರ ವಿತರಣಾ ಸಮಾರಂಭ ನಡೆಸಿಕೊಟ್ಟರು. ಪ್ರೊ. ಪೂಜಾ ಎಂ. ವಂದಿಸಿದರು. ಮಲ್ಲೇಶಪ್ಪ ಕೆ.ಟಿ., ಸ್ಥಾನಿಕ ಮಂಡಳಿಯ ಸದಸ್ಯ ಬಸವರಾಜ ಮಾಸೂರ ಸೇರಿದಂತೆ ಇತರರು ಉಪಸ್ಥಿತರಿದ್ದರು. ಶ್ರೀದೇವಿ ದೊಡ್ಡಮನಿ ನಿರ್ವಹಿಸಿದರು.