ಕಚೇರಿಗಳಲ್ಲಿ ಸಿಸಿ ಕ್ಯಾಮೆರಾ, ಬಯೋಮೆಟ್ರಿಕ್‌ ಅಳವಡಿಕೆ ಸಲಹೆ

KannadaprabhaNewsNetwork | Published : Jul 4, 2024 1:06 AM

ಸಾರಾಂಶ

ಎಲ್ಲ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಹಾಗೂ ಸಿ.ಸಿ. ಕ್ಯಾಮೆರಾ ಅಳವಡಿಸಿಕೊಳ್ಳಲು ಇಲಾಖೆ ಮುಂದಾಗಬೇಕು ಎಂದು ಜಿಲ್ಲಾ ಮುಖ್ಯ ಯೋಜನಾಧಿಕಾರಿ ಮತ್ತು ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್ ತಿಳಿಸಿದರು. ಬುಧವಾರ ನಡೆದ ಇಲ್ಲಿನ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಇಲ್ಲಿನ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಬುಧವಾರ ಜಿಲ್ಲಾ ಮುಖ್ಯ ಯೋಜನಾಧಿಕಾರಿ ಮತ್ತು ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಸರ್ಕಾರದಿಂದ ಈಗಾಗಲೇ ನಿಗದಿಗೊಳಿಸಿರುವ ಯೋಜನೆಗಳಿಗೆ ಹಣ ಬರಲಿದ್ದು, ಎಲ್ಲರೂ ತಮಗೆ ನಿಗದಿಗೊಳಿಸಿರುವ ಹಣವನ್ನು ವಾರ್ಷಿಕ ಯೋಜನೆಯಲ್ಲಿ ಬಳಸಿಕೊಳ್ಳಬೇಕೆಂದು ಝೀವಲ್ ಖಾನ್ ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಕಚೇರಿಗಳಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸಿಕೊಳ್ಳುವುದು, ಬಯೋಮೆಟ್ರಿಕ್ ಅಳವಡಿಸಕೊಳ್ಳಲು ಅಧಿಕಾರಿಗಳು ಮುಂದಾಗಬೇಕು. ಎಂದರು.

ಪಶುವೈದ್ಯಕೀಯ ಇಲಾಖೆಯಲ್ಲಿ ಬರುವ ಕಾಯಿಲೆಗಳಿಗೆ ಲಸಿಕೆ ಸಂಗ್ರಹ ಇದೆ. ಕಾಲುಬಾಯಿ ರೋಗಕ್ಕೆ ಈಗಾಗಲೇ ಒಂದು ಬಾರಿ ಲಸಿಕೆ ನೀಡಲಾಗಿದ್ದು, ಎರಡನೇ ಲಸಿಕೆ ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ಇಲಾಖೆಯ ವೈದ್ಯಾಧಿಕಾರಿ ನಾಗರಾಜು ಸಭೆಗೆ ತಿಳಿಸಿದರು.

ಈ ಸಂದರ್ಭ ಹೈನುಗಾರಿಕೆ ರೈತರ ಉಪ ಕಸುಬಾಗಿದ್ದು, ಜಾನುವಾರುಗಳಿಗೆ ಯಾವುದೇ ಕಾಯಿಲೆ ಬಾರದ ಹಾಗೆ ಮುಂಜಾಗ್ರತೆ ವಹಿಸಬೇಕು. ಸಮಯಕ್ಕೆ ಸರಿಯಾಗಿ ಚುಚ್ಚುಮದ್ದುಗಳನ್ನು ನೀಡಬೇಕು. ಪಶುಗಳಿಗೆ ವಿಮೆಯ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ತಾಲೂಕಿನಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಸಭೆಯಲ್ಲಿ ಆರೋಗ್ಯಾಧಿಕಾರಿ ಇಂದೂಧರ್ ತಿಳಿಸಿದರು. ಕಾಯಿಲೆ ಬಗ್ಗೆ ಜನರಿಗೆ ಆಶಾ ಕಾರ್ಯಕರ್ತರ ಮೂಲಕ ಹಾಗೂ ಬೆಳಗ್ಗೆ ತ್ಯಾಜ್ಯ ಸಂಗ್ರಹಿಸುವ ವಾಹನದಲ್ಲಿ ಪ್ರಚಾರ ಮಾಡುವ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಗ್ರಾಮೀಣ ಜನರಿಗೆ ಡೆಂಘೀ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕಿದೆ. ಜ್ವರ ಕಂಡು ಬಂದ ತಕ್ಷಣ ಪರೀಕ್ಷೆ ಮಾಡಿಸಿ, ಪ್ರಾರಂಭದಲ್ಲಿಯೇ ಗುಣಪಡಿಸಲು ಇಲಾಖೆ ಮುಂದಾಗಬೇಕು. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕಾಯಿಲೆ ಬಗ್ಗೆ ಮಾಹಿತಿ ನೀಡಬೇಕೆಂದು ಯೋಜನಾಧಿಕಾರಿ ತಿಳಿಸಿದರು.

ತಾಲೂಕಿನಲ್ಲಿ ಶಾಲೆಯಿಂದ ಹೊರಗೆ 14 ವಿದ್ಯಾರ್ಥಿಗಳು ಇದ್ದರು. ಅವರಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಶಾಲೆಗೆ ಮತ್ತೆ ಕರೆತರುವ ಕೆಲಸವಾಗಿದೆ. ಉಳಿದ 12 ವಿದ್ಯಾರ್ಥಿಗಳ ವಿಳಾಸ ಸರಿಯಾಗಿ ತಿಳಿಯದ ಕಾರಣ ಸಂಬಂಧಿಸಿದ ಶಿಕ್ಷಕರು ಪ್ರಯತ್ನಿಸುತ್ತಿದ್ದಾರೆ ಎಂದು ಬಿಇಒ ಭಾಗ್ಯಮ್ಮ ಮಾಹಿತಿ ನೀಡಿದರು.

ಎಲ್ಲ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಹಾಗೂ ಸಿ.ಸಿ. ಕ್ಯಾಮೆರಾ ಅಳವಡಿಸಿಕೊಳ್ಳಲು ಇಲಾಖೆ ಮುಂದಾಗಬೇಕು ಎಂದು ಯೋಜನಾಧಿಕಾರಿ ತಿಳಿಸಿದರು.

ಕುಡಿಯುವ ನೀರು:

ಜೆಜೆಎಂ ಯೋಜನೆಯಲ್ಲಿ ತಾಲೂಕಿನಲ್ಲಿ 247 ಕುಡಿಯುವ ನೀರಿನ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಅದರಲ್ಲಿ 202 ಕಾಮಗಾರಿಗಳು ಮುಗಿದು ಜನರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಉಳಿದವುಗಳನ್ನು ಡಿಸೆಂಬರ್ ತಿಂಗಳಿನೊಳಗೆ ಮುಗಿಸಲಾಗುವುದು ಎಂದು ಜಿ.ಪಂ ಅಭಿಯಂತರ ವಿರೇಂದ್ರ ತಿಳಿಸಿದರು.

ಸಭೆಯಲ್ಲಿ ಸಮಾಜಕಲ್ಯಾಣ ಇಲಾಖೆ, ಶಿಶು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೃಷಿ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಹಾಜರಿದ್ದು, ತಮ್ಮ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯನಿರ್ವಹಣಾಧಿಕಾರಿ ಕೆ.ಪಿ. ವೀರಣ್ಣ ಇದ್ದರು.

Share this article