ಬಿಸಿಲು: ಗರ್ಭಿಣಿಯರು ಮಧ್ಯಾಹ್ನ ಹೊರ ಹೋಗದಿರಿ

KannadaprabhaNewsNetwork |  
Published : Mar 08, 2026, 02:00 AM IST
ಬಳ್ಳಾರಿಯ ವಿದ್ಯಾನಗರ ಬಡಾವಣೆಯ ಕರಿಮಾರೆಮ್ಮ ದೇವಸ್ಥಾನದ ಬಳಿಯ ನಮ್ಮ ಕ್ಲಿನಿಕ್ ಗೆ ಭೇಟಿ ನೀಡಿದ ಡಿಎಚ್‌ಒ ಡಾ.ಯಲ್ಲಾ ರಮೇಶ ಬಾಬು ಅವರು ಸಾರ್ವಜನಿಕರೊಂದಿಗೆ ಮಾತನಾಡಿದರು.  | Kannada Prabha

ಸಾರಾಂಶ

ಗರ್ಭಿಣಿಯರು ಆದಷ್ಟು ಮನೆಯಲ್ಲಿಯೇ ಇರುವ ಮೂಲಕ ಆರೋಗ್ಯದ ಕಾಳಜಿಗೆ ಒತ್ತು ನೀಡಬೇಕು. ಕುಟುಂಬದ ಸದಸ್ಯರು ಸಹ ಮುತುವರ್ಜಿ ವಹಿಸಬೇಕು

ಬಳ್ಳಾರಿ: ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನದ ಅವಧಿಯಲ್ಲಿ ಗರ್ಭಿಣಿಯರು ಹೊರಗಡೆ ಓಡಾಡಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಮನವಿ ಮಾಡಿದ್ದಾರೆ.

ಇಲ್ಲಿನ ವಿದ್ಯಾನಗರ ಬಡಾವಣೆಯ ಕರಿಮಾರೆಮ್ಮ ದೇವಸ್ಥಾನದ ಬಳಿಯ ನಮ್ಮ ಕ್ಲಿನಿಕ್ ಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಅವರು ಮಾತನಾಡಿದರು.ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆಯು ಹೆಚ್ಚುತ್ತಿರುವುದರಿಂದ ಮಧ್ಯಾಹ್ನ 12 ರಿಂದ 3 ಗಂಟೆ ಅವಧಿಯಲ್ಲಿ ಬಿಸಿಲಿನ ತೀವ್ರತೆಯು ಹೆಚ್ಚು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಗರ್ಭಿಣಿಯರು ಆದಷ್ಟು ಮನೆಯಲ್ಲಿಯೇ ಇರುವ ಮೂಲಕ ಆರೋಗ್ಯದ ಕಾಳಜಿಗೆ ಒತ್ತು ನೀಡಬೇಕು. ಕುಟುಂಬದ ಸದಸ್ಯರು ಸಹ ಮುತುವರ್ಜಿ ವಹಿಸಬೇಕು ಎಂದು ತಿಳಿಸಿದರು.

ದೇಹದಲ್ಲಿ ನೀರಿನಾಂಶದಿಂದ ಆಗಬಹುದಾದ ಅನಾನುಕೂಲತೆಗಳನ್ನು ತಡೆಗಟ್ಟಲು ಹೆಚ್ಚು ನೀರನ್ನು ಕುಡಿಯಲು ಆದ್ಯತೆ ಮಾಡಿಕೊಳ್ಳಬೇಕು. ಬೇಸಿಗೆ ಹಿನ್ನೆಲೆಯಲ್ಲಿ ಬಾಣಂತಿಯರು ನವಜಾತ ಶಿಶುವಿಗೆ ತಾಯಿ ಹಾಲು ಕಡಿಮೆ ಆಗಬಹುದೆಂಬ ಭಾವನೆಯಿಂದ ತಾಯಿ ಹಾಲು ಬಿಟ್ಟು ಬೇರೆ ಏನನ್ನೂ ಕೊಡಬಾರದು. ತಾಯಿ ಹಾಲಿನಲ್ಲಿ ಸಾಕಷ್ಟು ನೀರಿನಾಂಶ ಇರುವುದರಿಂದ ದಿನಕ್ಕೆ ಕನಿಷ್ಠ 10 ರಿಂದ 12 ಬಾರಿ ಅಥವಾ ಮಗು ಅತ್ತಾಗಲೆಲ್ಲ ಹಾಲುಣಿಸಬೇಕು ಎಂದು ತಿಳಿಸಿದರು.

ಈಗಾಗಲೇ ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಅವರ ಕುಟುಂಬದ ಸದಸ್ಯರಲ್ಲಿ ನಿರ್ಜಲೀಕರಣ ತಡೆಗಾಗಿ ಎಲ್ಲ ಆರೋಗ್ಯ ಕೇಂದ್ರಗಳಿಗೆ ಒ.ಆರ್.ಎಸ್. ಕಾರ್ನರ್ ಮಾಡಲು ಸೂಚಿಸಲಾಗಿದೆ. ಆಸ್ಪತ್ರೆ ಭೇಟಿ ಸಂದರ್ಭದಲ್ಲಿ ಓ.ಆರ್.ಎಸ್ ದ್ರಾವಣ ಸೇವಿಸುವ ಮೂಲಕ ದೇಹದಲ್ಲಿ ನಿರ್ಜಲೀಕರಣದಿಂದಾಗುವ ಅಪಾಯಗಳನ್ನು ತಪ್ಪಿಸಬಹುದಾಗಿದೆ ಎಂದರು.

ಈಗಾಗಲೇ ಬಿಸಿಲಿನ ಶಾಖಾಘಾತದಿಂದ ಸಂಭವಿಸಬಹುದಾದ ತೊಂದರೆಯನ್ನು ತಪ್ಪಿಸಲು ತಕ್ಷಣ ಚಿಕಿತ್ಸೆ ನೀಡಲು ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಲಾ 01 ಬೆಡ್, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ 2 ಬೆಡ್, ಜಿಲ್ಲಾ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಕನಿಷ್ಠ 5 ಬೆಡ್‌ಗಳ ಕೊಠಡಿಗಳನ್ನು ಕಾಯ್ದಿರಿಸಲು ಸೂಚಿಸಲಾಗಿದೆ ಎಂದರು.

ಜಿಲ್ಲೆಯ ಗ್ರಾಮ ಮಟ್ಟದಲ್ಲಿರುವ ಆಯುಷ್ಮಾನ್ ಆರೋಗ್ಯ ಮಂದಿರ ಸೇರಿದಂತೆ ಎಲ್ಲ ಆರೋಗ್ಯ ಕೇಂದ್ರಗಲ್ಲಿ ಬಿಸಿಲಿನ ಶಾಖಾಘಾತದ ಚಿಕಿತ್ಸೆಗೆ ಸಂಬಂಧಿಸಿದಂತೆ ಅಗತ್ಯ ತುರ್ತು ಔಷಧಿಗಳು ಕೊರತೆಯಾಗದಂತೆ ದಾಸ್ತಾನು ಇರಿಸಿಕೊಳ್ಳಲಾಗಿದೆ ಎಂದು ಹೇಳಿದರು.

ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಡಾ.ಮುಜಾಮಿಲ್ ಫಿರ್ದೊಜ್, ಸಿಬ್ಬಂದಿ ಗಂಗಾ ಭವಾನಿ, ಪದ್ಮಾ, ಝೈಬಾ ನಾಜ್ ಹಾಗೂ ಸಾರ್ವಜನಿಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾರ್ಖಾನೆಯ ಮಾಲಿನ್ಯದಿಂದ ಕೃಷಿ ವಲಯಕ್ಕೆ ಬಿಕ್ಕಟ್ಟು; ಕ್ರಮಕ್ಕೆ ಆಗ್ರಹ
ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಎಸಿ ವ್ಯವಸ್ಥೆಯೇ ಇಲ್ಲ