ಬಾಗಲಕೋಟೆ: ಸಂಸದರು ಮತ್ತು ರೇಲ್ವೆ ಸಚಿವರಿಗೆ ಪತ್ರ ಬರೆದರೂ ಸ್ಪಂದಿಸದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಬೆಂಗಳೂರಿಗೆ ಹೊಸದಾಗಿ ವಂದೇ ಭಾರತ ರೈಲು ಸೇವೆ ಪ್ರಾರಂಭಿಸಬೇಕು. ಮುಂಬೈ-ಸೊಲ್ಲಾಪುರ ರೈಲನ್ನು ವಿಜಯಪುರವರೆಗೆ ವಿಸ್ತರಿಸುವಂತೆ ಆಗ್ರಹಿಸಿದ್ದಾರೆ.
ವಿಜಯಪುರದಿಂದ ಪ್ರತಿದಿನ ರಾತ್ರಿ 9ಕ್ಕೆ ರೈಲು ಸಂಚಾರ ಪ್ರಾರಂಭಿಸಿ ಮರುದಿನ ಬೆಳಗ್ಗೆ 6 ಗಂಟೆಗೆ ಬೆಂಗಳೂರು ತಲುಪುವಂತಾಗಬೇಕು. ಬೆಂಗಳೂರಿನಿಂದಲೂ ಪ್ರತಿದಿನ ರಾತ್ರಿ 9 ಗಂಟೆಗೆ ರೈಲು ಹೊರಟು ಮರುದಿನ ಬೆಳಗ್ಗೆ 6 ಗಂಟೆಗೆ ವಿಜಯಪುರ ತಲುಪುವ ವ್ಯವಸ್ಥೆಯಾಗಬೇಕು. ವಿಜಯಪುರ ಜಿಲ್ಲೆ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿದ್ದು, ಮುಂಬೈ ಮತ್ತು ಕರ್ನಾಟಕ ಮಧ್ಯೆ ಸುಮಾರು 500 ವರ್ಷಗಳಿಂದಲೂ ಅವಿನಾಭಾವ ಸಂಬಂಧವಿದೆ. ಗಡಿ ಭಾಗದ ಜನರು ಮುಂಬೈ ಮತ್ತು ಸೋಲಾಪೂರ ಪಟ್ಟಣಗಳಿಗೆ ಪ್ರಯಾಣ ಮಾಡುತ್ತಾರೆ. ಈ ಭಾಗದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳನ್ನೂ ಸಾಗಿಸುತ್ತಾರೆ. ಇದಕ್ಕೆ ಅನುಕೂಲವಾಗಲು ಮುಂಬೈ-ಸೋಲಾಪೂರ ನಡುವೆ ಸಂಚರಿಸುವ ಒಂದೇ ಭಾರತ ರೈಲನ್ನು ವಿಜಯಪುರವರೆಗೆ ವಿಸ್ತರಿಸಿದರೆ ಅನುಕೂಲವಾಗಲಿದೆ. ಈ ರೈಲು ವಿಜಯಪುರವರೆಗೆ ಓಡಿಸಲು ಆದೇಶ ಹೊರಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.