ಶಿವಮೊಗ್ಗ: ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್ ಖಂಡಿಸಿ ಹಾಗೂ ರೈತರ ಕೃಷಿ ಪಂಪ್ ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಸರಬರಾಜಿಗೆ ಆಗ್ರಹಿಸಿ ರಾಜ್ಯ ರೈತ ಸಂಘದ ಸಾಗರ ತಾಲೂಕು ಘಟಕ ವತಿಯಿಂದ ಗುರುವಾರ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ರಾಜ್ಯದಲ್ಲಿ ಅಂದಾಜು 45 ಲಕ್ಷಕ್ಕಿಂತಲೂ ಹೆಚ್ಚು ರೈತರು ನೀರಾವರಿ ಪಂಪ್ ಸೆಟ್ಗಳ ಮೇಲೆ ಅವಲಂಬಿತರಾಗಿದ್ದಾರೆ. ಈ ಮೂಲಕ ಕೃಷಿ ಚಟುವಟಿಕೆ ನಡೆಸುತ್ತಿದ್ದಾರೆ. ಪ್ರಸ್ತುತ ವರ್ಷ ಮುಂಗಾರು ಮಳೆ ಕೈ ಕೊಟ್ಟಿರುವ ಪರಿಣಾಮ ಕೆರೆ-ಕಟ್ಟೆಗಳಲ್ಲಿ ನೀರಿನ ಸಂಗ್ರಹ ಇಲ್ಲವಾಗಿದೆ. ಹೀಗಿರುವಾಗ ಪಂಪ್ ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಪ್ರಸ್ತುತ ಬಿಸಿಲ ತೀವ್ರತೆ ಪ್ರಮಾಣವೂ ಹೆಚ್ಚಿರುವುದರಿಂದ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ನಡೆಸುವಂತಾಗಿದೆ ಎಂದು ದೂರಿದರು. ರಾತ್ರಿವೇಳೆ ಬೇಕಾಬಿಟ್ಟಿಯಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ಹಗಲಿನಲ್ಲಿ ಕೃಷಿ ಪಂಪ್ ಸೆಟ್ಗಳಿಗೆ 7 ಗಂಟೆಗಳ ಕಾಲ ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಲು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದರು. ಜಿಲ್ಲಾ ಗೌರವಾಧ್ಯಕ್ಷ ಯು.ಪಿ. ಜೋಸೆಫ್, ಅಧ್ಯಕ್ಷ ಎಂ.ಬಿ. ಮಂಜಪ್ಪ ಹಿರೇನಲ್ಲೂರು, ಪ್ರಧಾನ ಕಾರ್ಯದರ್ಶಿ ಕೆ.ಟಿ. ರಮೇಶ್ ಐಗಿನ ಬೈಲು, ಮಹಿಳಾ ಘಟಕದ ಅಧ್ಯಕ್ಷೆ ಜಯಲಕ್ಷ್ಮೀ, ಮುಖಂಡರಾದ ಆಲುಳ್ಳಿ ದೇವು, ದಿನೇಶ್ ಕಾನಗೋಡು, ಕನ್ನಪ್ಪ ಸೇರಿದಂತೆ ಮೊದಲಾದವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. - - - (** ಈ ಫೋಟೋ ಪ್ಯಾನೆಲ್ಗೆ ಬಳಸಬಹುದು) -19ಎಸ್ಎಂಜಿಕೆಪಿ02: ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಕೃಷಿ ಪಂಪ್ ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಸಾಗರ ತಾಲೂಕು ರೈತ ಸಂಘದಿಂದ ಪ್ರತಿಭಟನೆ ನಡೆಯಿತು.