ಗದಗ: ವಿಶ್ವದಲ್ಲಿಯೇ ಭಾರತದ ನ್ಯಾಯಾಂಗ ಅತ್ಯುನ್ನತವಾಗಿದ್ದು. ಅಮಾಯಕರು ಶಿಕ್ಷೆಗೆ ಒಳಗಾಗಬಾರದು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನೋಂದವರು, ಅಬಲೆಯರು,ದೀನ ದಲಿತರು,ಅಮಾಯಕರಿಗೆ ಪರಿಹಾರ ಒದಗಿಸುವುದೇ ಕಾನೂನಿನ ಮುಖ್ಯ ಉದ್ದೇಶವಾಗಿದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ವಿ. ಶ್ರೀಶಾನಂದ ಹೇಳಿದರು.
ಕಾನೂನು ಸೌಲಭ್ಯ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇಕಾದ ಮಹತ್ತರ ಉದ್ದೇಶವಾಗಿದ್ದು, ಒಂದು ರಾಷ್ಟ್ರದ ಅಭಿವೃದ್ಧಿ ಹೊಂದಬೇಕಾದರೆ ಆ ರಾಷ್ಟ್ರದಲ್ಲಿ ಶಾಂತಿ ಕಾನೂನು ಸುವ್ಯವಸ್ಥೆ ಪ್ರಮುಖ ಪಾತ್ರ ವಹಿಸುತ್ತದೆ. ಕಾನೂನು ಸಾಕ್ಷರತೆಯು ಬರೀ ಸಾಕ್ಷರತೆಯಾಗದೇ ಸಾರ್ವಜನಿಕರು ಯಾವುದು ತಪ್ಪು ಯಾವುದು ಸರಿ ಎಂದು ತಿಳಿವಳಿಕೆ ಹೊಂದುವಂತಾಗಬೇಕು. ಕಾನೂನಿನ ಅರಿವು ಹಾಗೂ ಸೌಲಭ್ಯಗಳು ಮನೆಮನೆಗೆ ತಲುಪಬೇಕು ಭಾರತೀಯ ನ್ಯಾಯ ಸಂಹಿತೆ-2023, ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ-2023, ಮೂರು ನೂತನ ಕಾನೂನುಗಳ ಪಕ್ಷಿ ನೋಟದ ವಿಷಯಗಳ ಕುರಿತು ವಿವರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ 100 ಗ್ರಾಮಗಳನ್ನು ವ್ಯಾಜ್ಯ ಮುಕ್ತ ಗ್ರಾಮಗಳನ್ನಾಗಿ ಮಾಡುವುದು ನಮ್ಮ ಸರ್ಕಾರದ ಮುಖ್ಯ ಉದೇಶವಾಗಿದ್ದು, ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಶಾಂತಿ ಮನೋಭಾವ ಹೊಂದಿದ ಗದಗ ಜಿಲ್ಲೆಯಲ್ಲಿ 100 ಗ್ರಾಮಗಳನ್ನು ವ್ಯಾಜ್ಯ ಮುಕ್ತ ಮಾಡಲು ಪ್ರಯತ್ನಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ನ್ಯಾಯಾಂಗದ ಸಹಕಾರ ಅತ್ಯಗತ್ಯವಾಗಿದೆ ಎಂದರು.ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಐ. ಹಿರೇಮನಿ ಪಾಟೀಲ ಮಾತನಾಡಿ, ಕಾನೂನು ಕಾರ್ಯಾಗಾರದ ಸದುಪಯೋಗವನ್ನು ಯುವ ವಕೀಲರು ಪಡೆದುಕೊಳ್ಳಬೇಕೆಂದರು.
ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಬಿ.ಎಚ್. ಮಾಡಲಗೇರಿ ಸ್ವಾಗತಿಸಿದರು. ಜಂಟಿ ಕಾರ್ಯದರ್ಶಿ ಪ್ರಕಾಶ ಕಣಗಿನಹಾಳ ವಂದಿಸಿದರು. ವಕೀಲ ಎಂ.ಬಿ. ಮತ್ತೂರ ನಿರ್ವಹಿಸಿದರು.