ಮೂಡುಬಿದಿರೆಯ ಸಸ್ಯ ಸಾಮ್ರಾಜ್ಞಿ ಅಸ್ಮಭಾನು, ಸಮಾಜ ಸೇವಕ ಸತೀಶ್ ಸದಾನಂದ, ಕೃಷಿಕ ಸತೀಶ್ ಎಂ. ಶೆಟ್ಟಿ ಪಂಜ ಬೈಲಗುತ್ತು ಅವರಿಗೆ ಗೌರವ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ಮೂಲ್ಕಿ
ಸ್ವಚ್ಛ ಪರಿಸರವಿದ್ದಲ್ಲಿ ಸ್ವಚ್ಛಂದ ಬದುಕು ಸಾಧ್ಯ. ಸಸಿ ವಿತರಣೆ ಬರೀ ಕಾಟಾಚಾರದ ಕಾರ್ಯಕ್ರಮವಾಗಬಾರದು. ಮನೆಗೆ ಕೊಂಡೊಯ್ದ ಗಿಡವನ್ನು ಮಕ್ಕಳ ಕೈಯಲ್ಲಿ ನೆಡುವುದರಿಂದ ಅವರಿಗೂ ಪ್ರಕೃತಿ ಮತ್ತು ಪರಿಸರ ರಕ್ಷಣೆಯ ಕಾಳಜಿ ಮತ್ತು ಪ್ರೀತಿ ಬೆಳೆಯುತ್ತದೆ ಎಂದು ವಿ.ಕೆ. ಸಮೂಹ ಸಂಸ್ಥೆ ಮುಂಬೈಯ ಸಿಎಂಡಿ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು ಹೇಳಿದರು.
ಬಂಟರ ಸಂಘ ಸುರತ್ಕಲ್, ರೋಟರಿ ಕ್ಲಬ್ ಬೈಕಂಪಾಡಿ ಹಾಗೂ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸುರತ್ಕಲ್ ಸಹಯೋಗದಲ್ಲಿ ಮೇಬೈಲು ಸದಾಶಿವ ಶೆಟ್ಟಿ ನೇತೃತ್ವದಲ್ಲಿ ಸುರತ್ಕಲ್ ಬಂಟರ ಸಂಘದಲ್ಲಿ ಆಯೋಜಿಸಲಾದ 15ನೇ ವರ್ಷದ ಸಸಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದಿಕ್ಸೂಚಿ ಭಾಷಣ ಮಾಡಿದ ಎಕ್ಕಾರು ಬಂಟರ ಸಂಘ ಅಧ್ಯಕ್ಷ ರತ್ನಾಕರ್ ಶೆಟ್ಟಿ, ಹಣ್ಣುಗಳ ಗಿಡಗಳನ್ನು ನೆಡುವ ಮೂಲಕ ಪ್ರಾಣಿ ಪಕ್ಷಿಗಳ ಬದುಕಿಗೆ ನಾವು ಸಹಕಾರ ನೀಡಿದಂತಾಗುತ್ತದೆ. ಇದರಿಂದ ಅವುಗಳು ಬೆಳೆ ನಾಶ ಮಾಡುವುದಿಲ್ಲ. ಇಂತಹ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯುವ ಮೂಲಕ ಪರಿಸರಸ್ನೇಹಿಗಳಾಗಿ ಬದುಕಬೇಕೆಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಸಂಘ ಸುರತ್ಕಲ್ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ವಹಿಸಿದ್ದರು.
ಈ ಸಂದರ್ಭ ಭಾರತೀಯ ವಾಯುಸೇನೆ ಮಾಜಿ ಯೋಧ ಜೆಡಬ್ಲ್ಯೂ ಮಹಾಬಲ ಭಂಡಾರಿ, ಅರಣ್ಯ ಇಲಾಖೆ ಎಸಿಎಫ್ಓ ಪಿ. ಶ್ರೀಧರ್, ನಾಗರಿಕ ಸಮಿತಿ ಮಂಗಳೂರು ತಾಲೂಕು ಅಧ್ಯಕ್ಷ ಶುಭಾಶ್ಚಂದ್ರ ಶೆಟ್ಟಿ ಹೊಸಬೆಟ್ಟು, ಮೂಡುಬಿದಿರೆಯ ಸಸ್ಯ ಸಾಮ್ರಾಜ್ಞಿ ಅಸ್ಮಭಾನು, ಸಮಾಜ ಸೇವಕ ಸತೀಶ್ ಸದಾನಂದ, ಕೃಷಿಕ ಸತೀಶ್ ಎಂ. ಶೆಟ್ಟಿ ಪಂಜ ಬೈಲಗುತ್ತು ಅವರಿಗೆ ಗೌರವ ಸಲ್ಲಿಸಲಾಯಿತು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ, ಸಂಘ ಮಾಜಿ ಅಧ್ಯಕ್ಷ ಉಲ್ಲಾಸ್ ಆರ್. ಶೆಟ್ಟಿ ಪೆರ್ಮುದೆ, ರೋಟರಿ ಕ್ಲಬ್ ಬೈಕಂಪಾಡಿ ಅಧ್ಯಕ್ಷ ಹರೀಶ್ ಶೆಟ್ಟಿ, ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ರಮೇಶ್ ಶೆಟ್ಟಿ, ಕೃಷಿ ಸಮಿತಿ ಸಂಚಾಲಕ ಮೇಬೈಲು ಸದಾಶಿವ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಸ್ವಾಗತಿಸಿದರು. ಕೃಷಿ ಸಮಿತಿ ಸಂಚಾಲಕ ಮೇಬೈಲು ಸದಾಶಿವ ಶೆಟ್ಟಿ ಪ್ರಸ್ತಾವನೆಗೈದರು. ಹರೀಶ್ ಶೆಟ್ಟಿ ಇಡ್ಯ ವಂದಿಸಿದರು. ಅರ್ಪಿತಾ ಶಿಶಿರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.