ಸಮೀಕ್ಷೆಯಿಂದ ಜನತೆಯ ಪ್ರಗತಿ ಗುರುತಿಸಲು ಸಾಧ್ಯ: ಕಾಂತರಾಜ್

KannadaprabhaNewsNetwork |  
Published : Sep 22, 2025, 01:02 AM IST
ಕೂಡ್ಲಿಗಿಯಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಜಾಗೃತಿ ಸಮಾವೇಶವನ್ನು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ ಉದ್ಘಾಟಿಸಿದರು. | Kannada Prabha

ಸಾರಾಂಶ

ಹಿಂದುಳಿದ ವರ್ಗಗಳ ಶೈಕ್ಷಣಿಕ, ಸಾಮಾಜಿಕ ಆರ್ಥಿಕ ಸ್ಥಿತಿಗತಿ ತಿಳಿಯಲು ಸಮೀಕ್ಷೆ ಎನ್ನುವುದು ಅಳತೆಗೋಲಾಗಿದ್ದು, ಆ ಮೂಲಕ ಆ ಸಮುದಾಯಗಳ ಏಳ್ಗೆಗೆ ಸರ್ಕಾರ ಕ್ರಮಕೈಗೊಳ್ಳಲು ಸಾಧ್ಯವಾಗುತ್ತದೆ.

ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ

ಕನ್ನಡಪ್ರಭ ವಾರ್ತೆ ಕೂಡ್ಲಿಗಿ

ಹಿಂದುಳಿದ ವರ್ಗಗಳ ಶೈಕ್ಷಣಿಕ, ಸಾಮಾಜಿಕ ಆರ್ಥಿಕ ಸ್ಥಿತಿಗತಿ ತಿಳಿಯಲು ಸಮೀಕ್ಷೆ ಎನ್ನುವುದು ಅಳತೆಗೋಲಾಗಿದ್ದು, ಆ ಮೂಲಕ ಆ ಸಮುದಾಯಗಳ ಏಳ್ಗೆಗೆ ಸರ್ಕಾರ ಕ್ರಮಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ್ ತಿಳಿಸಿದರು.

ಪಟ್ಟಣದ ಚಂದ್ರಶೇಖರ ಆಜಾದ್ ರಂಗಮಂದಿರದಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ತಾಲೂಕು ಘಟಕದಿಂದ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಸಮೀಕ್ಷೆ ನಡೆಸಲು ಕೇಂದ್ರಕ್ಕೆ ಮಾತ್ರ ಅಧಿಕಾರವಿದ್ದು, ರಾಜ್ಯ ಸರ್ಕಾರಕ್ಕಿಲ್ಲ ಎಂಬ ಅಪಸ್ವರಗಳು ಕೇಳಿಬರುತ್ತಿವೆ. ಆದರೆ, ರಾಜ್ಯ ಸರ್ಕಾರವೂ ಸಮೀಕ್ಷೆ ನಡೆಸಬಹುದೆಂದು ಸುಪ್ರೀಂಕೋರ್ಟ್ ಹೇಳಿದೆ. ೨೦೧೩ರಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಆಯೋಗದಿಂದ ಸಮೀಕ್ಷೆಗೆ ಆದೇಶಿಸಿದ್ದರು. ಆಗ ನಾನು ಆಯೋಗದ ಅಧ್ಯಕ್ಷನಾಗಿ ವೈಜ್ಞಾನಿಕ, ವಸ್ತುನಿಷ್ಠ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದ್ದೆ. ಆ ವರದಿ ಜಾರಿಗೆ ಪ್ರಬಲ ಜಾತಿಗಳು ವಿರೋಧಿಸಿದ್ದರು. ಈಗ ಮತ್ತೆ ಜನಗಣತಿಗೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆಯಾಗಿದೆ, ಯಾವುದೇ ಆಯೋಗ ವರದಿ ಸಲ್ಲಿಸಿದರೆ ಅದನ್ನು ಜಾರಿಗೊಳಿಸಿ ಕಾರ್ಯರೂಪಕ್ಕೆ ತರಬೇಕಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಸ್ಸಿ, ಎಸ್ಟಿ, ಇತರೆ ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ್ದಾರೆ. ಆದರೆ, 1993ರಲ್ಲಿ ಪ್ರಧಾನಿಯಾಗಿದ್ದ ವಿ.ಪಿ. ಸಿಂಗ್ ಅವರು ಇತರೆ ಹಿಂದುಳಿದ ಜಾತಿಗಳಿಗೆ ಮೀಸಲಾತಿ ಜಾರಿಗೊಳಿಸಿದ್ದರು. ಮಂಡಲ್ ಆಯೋಗದ ವರದಿ ಪ್ರಕಾರ ಇತರೆ ಹಿಂದುಳಿದ ಜಾತಿಗಳಿಗೆ ಶೇ.57 ರಷ್ಟು ಮೀಸಲಾತಿ ಇದ್ದರೂ, ಕೇವಲ ಶೇ.27ರಷ್ಟು ಸಹ ಸರಿಯಾಗಿ ಜಾರಿಯಾಗಿಲ್ಲ. ಸರ್ಕಾರಗಳು ನಿರುದ್ಯೋಗಿ ವಿದ್ಯಾವಂತರಿಗೆ ನೌಕರಿ ಕೊಡುವ ಬದಲು ಗುತ್ತಿಗೆ ಆಧಾರದಲ್ಲೇ ಕೆಲಸ ನೀಡುತ್ತಿರುವುದಕ್ಕೆ ಮುಂದಾಗಿರುವುದು ಮೀಸಲಾತಿ ಇದ್ದರೂ ಪ್ರಯೋಜನವಿಲ್ಲದಂತಾಗಿದೆ ಎಂದು ತಿಳಿಸಿದರು.

ವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ಎಐಸಿಸಿ ಸದಸ್ಯ ಎಂ.ಸಿ. ವೇಣುಗೋಪಾಲ ಮಾತನಾಡಿ, ಹಿಂದುಳಿದ ಜಾತಿಗಳು ಒಗ್ಗೂಡದಿದ್ದರೆ ಮುಂದೆ ಯಾವ ಸೌಲಭ್ಯವನ್ನೂ ಪಡೆಯಲು ಆಗುವುದಿಲ್ಲ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಸೆ.22ರಿಂದ ಅ.7 ರವರೆಗೆ ನಡೆಸಲಿದ್ದು, ಪ್ರತಿಯೊಬ್ಬರೂ ತಮ್ಮ ತಮ್ಮ ಜಾತಿಗಳ ಹೆಸರು ಬರೆಸಬೇಕೆಂದು ತಿಳಿಸಿದರು.

ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಬುಡ್ಡಿ ಬಸವರಾಜ ಪ್ರಾಸ್ತಾವಿಕ ನುಡಿದರು. ತಿಂಥಿಣಿ ಬ್ರಿಡ್ಜ್ ಕನಕಗುರು ಪೀಠದ ಸಿದ್ಧರಾಮಾನಂದ ಸ್ವಾಮೀಜಿ, ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಚಿತ್ರದುರ್ಗದ ಡಾ. ಬಸವ ಮಾಚೀದೇವ ಸ್ವಾಮೀಜಿ, ಕೃಷ್ಣ ಯಾದವಾನಂದ ಸ್ವಾಮೀಜಿ, ಬಸವಮೂರ್ತಿ ಕುಂಬಾರ ಗುಂಡಯ್ಯ ಸ್ವಾಮೀಜಿ, ನರಸೀಪುರ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ, ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಮಂಗಲ್‌ನಾಥ ಜೀ ಮಹರಾಜ್, ಪಟ್ಟಸಾಲಿ ಪೀಠದ ಗುರುಸಿದ್ಧ ಪಟ್ಟದಾರ್ಯ ಸ್ವಾಮೀಜಿ, ನೀಲಕಂಠಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಹಿಂದುಳಿದ ಜಾತಿಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಗೊಲ್ಲರ ಸಣ್ಣ ಕೆಂಚಪ್ಪ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಒಕ್ಕೂಟದ ಜಿಲ್ಲಾ ಗೌರವಾಧ್ಯಕ್ಷ ಜಿ.ಪಿ. ಗುರುಲಿಂಗಪ್ಪ, ಜಿಲ್ಲಾ ಕೋಶಾಧ್ಯಕ್ಷ ಮಾರೇಶ್ ಮಡಿವಾಳ್, ಪಪಂ ಅಧ್ಯಕ್ಷ ಕಾವಲ್ಲಿ ಶಿವಪ್ಪನಾಯಕ, ಮಾಜಿ ಅಧ್ಯಕ್ಷ ಉದಯಜನ್ನು, ಲಕ್ಕಜ್ಜಿ ಮಲ್ಲಿಕಾರ್ಜುನ, ಗಂಗಾಮತಸ್ಥರ ಸಂಘದ ತಾಲೂಕು ಅಧ್ಯಕ್ಷ ಗುಡೇಕೋಟೆ ಹುಲಿರಾಜಪ್ಪ, ಗುಡೇಕೋಟೆ ಉಮೇಶ್, ಕುರಿ ಶಿವಮೂರ್ತಿ, ಟಿ.ದೇವಪ್ಪ, ಹೊಸಪೇಟೆ ನಗರಸಭೆ ಅಧ್ಯಕ್ಷ ರೂಪೇಶ್‌ಕುಮಾರ್, ಯಾದವ ಸಮಾಜದ ಆಶಾಲತಾ ಸೋಮಪ್ಪ ಸೇರಿ ಇತರರಿದ್ದರು. ಹಿಂದುಳಿದ ಜಾತಿಗಳ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ