ಶಂಕರಾಚಾರ್ಯರ ಪರಂಪರೆಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನಕ್ಕೆ ಉತ್ತರಾಧಿಕಾರಿಗಳಾಗಿ, ೫೫ನೇ ನೂತನ ಯತಿಗಳಾಗಿ ಶ್ರೀಆನಂದಬೋಧೇಂದ್ರ ಸರಸ್ವತೀ ಸ್ವಾಮೀಜಿ (ಬ್ರಹ್ಮಚಾರಿ ವಿದ್ವಾನ್ ನಾಗರಾಜ್ ಭಟ್ಟ ಗಂಗೆಮನೆ) ಅವರು ಗುರುವಾರ ಸನ್ಯಾಸ ಗ್ರಹಣ ಮಾಡಿದರು.
ಶಿರಸಿ:ಶಂಕರಾಚಾರ್ಯರ ಪರಂಪರೆಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನಕ್ಕೆ ಉತ್ತರಾಧಿಕಾರಿಗಳಾಗಿ, ೫೫ನೇ ನೂತನ ಯತಿಗಳಾಗಿ ಶ್ರೀಆನಂದಬೋಧೇಂದ್ರ ಸರಸ್ವತೀ ಸ್ವಾಮೀಜಿ (ಬ್ರಹ್ಮಚಾರಿ ವಿದ್ವಾನ್ ನಾಗರಾಜ್ ಭಟ್ಟ ಗಂಗೆಮನೆ) ಅವರು ಗುರುವಾರ ಸನ್ಯಾಸ ಗ್ರಹಣ ಮಾಡಿದರು.
ಸ್ವರ್ಣವಲ್ಲೀ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಶ್ರೀಗಳ ಸಾನ್ನಿಧ್ಯದಲ್ಲಿ ವಿವಿಧ ಧಾರ್ಮಿಕ ಹಾಗೂ ಸನ್ಯಾಸ ಗ್ರಹಣದ ವಿಧಿ ವಿಧಾನಗಳು ನಡೆದವು.ಫೆ. ೧೮ರಿಂದ ನಡೆಯುತ್ತಿದ್ದ ಶಿಷ್ಯ ಸ್ವೀಕಾರ ಮಹೋತ್ಸವದ ಕಾರ್ಯಕ್ರಮಗಳ ಕೊನೆಯ ದಿನವಾದ ಗುರುವಾರ ಬೆಳಗ್ಗೆ ೧೦ರಿಂದ ೧೦.೧೦ರ ಅವಧಿಯಲ್ಲಿ ನೂತನ ಶ್ರೀಗಳಿಗೆ ಸನ್ಯಾಸ ದೀಕ್ಷೆ ನೀಡಲಾಯಿತು. ಮುಂಜಾನೆ ೫ರಿಂದಲೇ ವಿವಿಧ ಧಾರ್ಮಿಕ ಹಾಗೂ ಕಾಯ ಶೋಧನ ಕಾರ್ಯಗಳು ಶ್ರೀಮಠದಲ್ಲಿ ನಡೆದವು. ಬೆಳಗ್ಗೆ ೯.೪೦ರ ಸುಮಾರಿಗೆ ಶ್ರೀಮಠದಿಂದ ಸುಮಾರು ಒಂದು ಕಿಮಿ ದೂರದ ಶಾಲ್ಮಲಾ ನದಿಯತ್ತ ಜಲಾಶಯಗಮನ ಮಾಡಲಾಯಿತು. ಬಳಿಕ ನೂತನ ಉತ್ತರಾಧಿಕಾರಿಗಳು ಸ್ನಾನ ಪೂರ್ಣಗೊಳಿಸಿ ಮೇಲ್ಮುಖವಾಗಿ ಜನಿವಾರ ತೆಗೆದು, ಶಿರದ ಮೇಲಿನ ಆರು ಕೂದಲನ್ನು ಹರಿದು, ಸಂಸಾರದ ಬಂಧ ಸಹಿತ, ಸರ್ವಸ್ವವನ್ನೂ ತ್ಯಾಗ ಮಾಡಿ ಏಳು ಹೆಜ್ಜೆ ಇಟ್ಟರು. ಪ್ರಪಂಚ ಬಂಧನ ಬಿಟ್ಟು ಸಚ್ಚಿದಾನಂದ ಸ್ವರೂಪಿಯಾದ ಅವರಿಗೆ ಸ್ವರ್ಣವಲ್ಲೀ ಶ್ರೀಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಕಾಷಾಯ ವಸ್ತ್ರ ನೀಡಿದರು. ಇದೇ ಶುಭ ಘಳಿಗೆಯಲ್ಲಿ ಸಾವಿತ್ರೀ ಪ್ರವೇಶ, ಪ್ರೇಶೋಚ್ಛಾರಣೆ, ಬ್ರಹ್ಮ ದಂಡದ ಧಾರಣೆ ಕೂಡ ಮಾಡಲಾಯಿತು.೧೦. ೩೦ರ ಸುಮಾರಿಗೆ ಶಾಲ್ಮಾಲಾ ನದಿ ತಟದಲ್ಲಿ ನೂತನ ಯತಿಗಳು ಭೂ ಸ್ಪರ್ಶ ಮಾಡಿದರು. ಅಲ್ಲಿಂದ ಪಂಚ ವಾದ್ಯಗಳ, ವೈದಿಕರ ವೇದ ಘೋಷ, ನಾಲ್ಕು ಸಾವಿರಕ್ಕೂ ಅಧಿಕ ಮಾತೆಯರಿಂದ ಪೂರ್ಣ ಕುಂಭ ಸ್ವಾಗತದ ಮೂಲಕ ನೂತನ ಯತಿಗಳನ್ನು, ಸ್ವರ್ಣವಲ್ಲೀ ಹಾಗೂ ಇತರ ಮಠಗಳ ಯತಿಗಳನ್ನು ಶ್ರೀಮಠಕ್ಕೆ ಬರ ಮಾಡಿಕೊಳ್ಳಲಾಯಿತು. ಶ್ರೀಮಠದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್. ಹೆಗಡೆ ಬೊಮ್ಮನಳ್ಳಿ, ಕೇಂದ್ರ ಮಾತೃ ಮಂಡಳಿ ಪ್ರಮುಖರು ಮಠದ ಆವಾರದಲ್ಲಿ ಸಾಂಪ್ರದಾಯಿಕ ಸ್ವಾಗತಿಸಿದರು. ಶ್ರೀಮಠಕ್ಕೆ ಆಗಮಿಸಿದ ಬಳಿಕ ಆರಾಧ್ಯ ದೇವರ ದರ್ಶನ ಪಡೆದು ಗುರುಮೂರ್ತಿ ಭವನಕ್ಕೆ ತೆರಳಿದರು. ಬಳಿಕ ಶಂಖ ಸ್ನಾನ, ಪ್ರಣವ ಮಹಾ ವಾಕ್ಯೋಪದೇಶ ನೀಡಿ ನೂತನ ಶ್ರೀಗಳಿಗೆ ಶ್ರೀಆನಂದಬೋಧೇಂದ್ರ ಸರಸ್ವತೀ ಸ್ವಾಮೀಜಿ ಎಂದು ನಾಮಕರಣವನ್ನು ಸ್ವರ್ಣವಲ್ಲೀ ಶ್ರೀ ಮಾಡಿದರು. ಪರ್ಯಂಕಶೌಚ, ಯೋಗಪಟ್ಟ, ಬ್ರಹ್ಮವಿದಾಶೀರ್ವಚನ ನಡೆಸಲಾಯಿತು.
ನಾಡಿನ ಹೆಸರಾಂತ ಯತಿಗಳಾದ ಎಡತೋರೆ ಶ್ರೀಶಂಕರ ಭಾರತೀ ಸ್ವಾಮೀಜಿ, ಹರಿಹರ ಪುರದ ಶ್ರೀಸ್ವಯಂಪ್ರಕಾಶ ಸಚ್ಚಿದಾನಂದ ಸ್ವರೂಪಿ ಮಹಾ ಸ್ವಾಮೀಜಿ, ಬೆಂಗಳೂರಿನ ಕೂಡ್ಲಿ ಶೃಂಗೇರಿ ಮಠದ ವಿದ್ಯಾ ವಿಶ್ವೇಶ್ವರ ಭಾರತೀ ಸ್ವಾಮೀಜಿ, ಹೋಳೆನರಸೀಪುರದ ಶ್ರೀಪ್ರಕಾಶಾನಂದೇಂದ್ರ ಸ್ವಾಮೀಜಿ , ಶ್ರೀಮನ್ನೆಲಮಾವು ಮಠದ ಶ್ರೀಮಾಧವಾನಂದ ಭಾರತೀ ಸ್ವಾಮೀಜಿ, ತುರುವೇಕೇರೆಯ ಶ್ರೀಪ್ರಣವಾನಂದ ತೀರ್ಥ ಸ್ವಾಮೀಜಿ ಹಾಗೂ ಹಲವು ವಿದ್ವಾಂಸರು ಮೂವತ್ತು ಸಾವಿರಕ್ಕೂ ಅಧಿಕ ಭಕ್ತ ಶಿಷ್ಯರು ಸಾಕ್ಷಿಯಾದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.