ಅರಣ್ಯ ಬೆಂಕಿ ತಡೆಯಲು ಮುಂಜಾಗ್ರತಾ ಕ್ರಮ ಕೈಗೊಳ್ಳಿ

KannadaprabhaNewsNetwork | Published : Mar 5, 2025 1:34 AM

ಸಾರಾಂಶ

ಅರಣ್ಯ ರಕ್ಷಣೆಗೆ ಜನರ ಸಹಕಾರ ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಬೇಕು

ಕನ್ನಡಪ್ರಭ ವಾರ್ತೆ ಮೈಸೂರು

ಬೇಸಿಗೆ ದಿನಗಳು ಹತ್ತಿರವಾಗುತ್ತಿದ್ದಂತೆ ಅರಣ್ಯ ಇಲಾಖೆಗೆ ಬೆಂಕಿ ನಂದಿಸುವ ಸವಾಲು ಎದುರಾಗುತ್ತದೆ. ಅರಣ್ಯ ಬೆಂಕಿ ತಡೆಯಲು ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಅರಣ್ಯ ಬೆಂಕಿ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಸಂಬಂಧ ಅಗ್ನಿಶಾಮಕ ಇಲಾಖೆ ಹಾಗೂ ಅರಣ್ಯ ಇಲಾಖೆಯ ಉತ್ತಮ ಸಮನ್ವಯತೆಯಿಂದ ಯಾವುದೇ ಅವಘಡಗಳು ಸಂಭವಿಸದಂತೆ ನಿಭಾಯಿಸಬೇಕು. ಈ ಸಂಬಂಧ ಅರಣ್ಯ ರಕ್ಷಣೆಗೆ ಜನರ ಸಹಕಾರ ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಬೇಕು ಎಂದು ಹೇಳಿದರು.

ಅರಣ್ಯ ಹಾಗೂ ಅಗ್ನಿಶಾಮಕ ಇಲಾಖೆಯವರ ಉತ್ತಮ ಸಮನ್ವಯತೆಯಿಂದ ಅನಾಹುತ ಆಗದಂತೆ ಯಶಸ್ವಿಯಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಂಬಂಧ ಅರಣ್ಯದಲ್ಲಿ ಬೆಂಕಿ ಸಂಭವಿಸದ ಹಾಗೆ ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಹಾಗೂ ಅನಿವಾರ್ಯ ಸಂದರ್ಭದಲ್ಲಿ ಅರಣ್ಯ ಬೆಂಕಿ ಕಾಣಿಸಿಕೊಂಡರೆ ತಕ್ಷಣ ಕ್ರಮ ಕೈಗೊಂಡು ಅಗತ್ಯ ಕ್ರಮ ವಹಿಸಲು ಅಧಿಕಾರಿಗಳು ಮತ್ತು ಸಿಬ್ಬಂದಿ ಸಜ್ಜಾಗಿರಬೇಕು ಎಂದರು.

ಜಿಲ್ಲಾ ವಿಪತ್ತು ನಿರ್ವಹಣೆಯಿಂದ ಅರಣ್ಯ ಇಲಾಖೆ ಹಾಗೂ ಅಗ್ನಿ ಶಾಮಕ ಇಲಾಖೆಯ ಉಪಕರಣಗಳ ಖರೀದಿಗೆ ಹಾಗೂ ವಾಹನಗಳ ಖರೀದಿಗೆ ಅನುದಾನ ನೀಡಲು ಕ್ರಮ ವಹಿಸಲಾಗುವುದು. ಬೆಂಕಿ ಕಾಣಿಸಿಕೊಂಡರೆ ಜನ ತಕ್ಷಣ ಅರಣ್ಯ ಇಲಾಖೆ ಹಾಗೂ ಅಗ್ನಿ ಶಾಮಕ ಇಲಾಖೆಗೆ ಮಾಹಿತಿ ನೀಡಬೇಕು. ಕಾಡಂಚಿನ ಪದೇಶಗಳ ಜನರು ಬಿಡಿ ಸಿಗರೇಟ್ ಸೇದು ಬೆಂಕಿ ನಂದಿಸದೆ ಎಸೆಯಬಾರದು. ಇದರಿಂದ ಬೆಂಕಿ ಕಾಣಿಸಿಕೊಳ್ಳುವ ಸಂಭವ ಹೆಚ್ಚು ಇರುತ್ತದೆ. ಅರಣ್ಯ ಬೆಂಕಿ ಕಾಣಿಸಿಕೊಳ್ಳದ ಹಾಗೆ ತಡೆಯಲು ಸಾರ್ವಜನಿಕರು ಹೆಚ್ಚಿನ ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು.

ಅನುದಾನಕ್ಕೆ ಮನವಿ

ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ. ಮಾಲತಿಪ್ರಿಯಾ ಮಾತನಾಡಿ, ಕಳೆದ ವಾರ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಬೆಂಕಿ ಕಾಣಸಿಕೊಂಡಿತ್ತು. ಅಗ್ನಿಶಾಮಕ ಇಲಾಖೆಯ ಸಹಕಾರದಿಂದ ನಮ್ಮ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದು ಬೆಂಕಿಯನ್ನು ಯಶಸ್ವಿಯಾಗಿ ನಂದಿಸಲಾಯಿತು ಎಂದರು.

ವಾಚ್ ಟವರ್ ಗಳನ್ನು ಮಾಡಿಕೊಂಡು, ಅಲ್ಲಿ ಸಿಬ್ಬಂದಿ ಇದ್ದು ವಾಚ್ ಮಾಡುತ್ತಾರೆ. ಬೆಂಕಿ ಕಾಣಿಸಿಕೊಂಡರೆ ಅರಿಸಲು ನೀರು ಅತ್ಯಗತ್ಯ. ಹೀಗಾಗಿ, ನೀರು ಲಭ್ಯವಿರುವ ಸ್ಥಳಗಳನ್ನು ಗುರುತಿಸಿಕೊಳ್ಳಾಗಿದೆ. ಇನ್ನು ಹೆಚ್ಚಿನ ಕಾರ್ಯಕ್ಷಮತೆಯಿಂದ ಕೆಲಸ ನಿರ್ವಹಣೆ ಮಾಡಲು ಜಿಲ್ಲಾ ವಿಪತ್ತು ನಿರ್ವಹಣೆಯಡಿ ಅನುದಾನ ನೀಡುವಂತೆ ಜಿಲ್ಲಾಧಿಕಾರಿಗಳಲ್ಲಿ ಅವರು ಮನವಿ ಮಾಡಿದರು.

ಡಿಸಿಎಫ್ ಡಾ.ಕೆ.ಎನ್. ಬಸವರಾಜ ಮಾತನಾಡಿ, ಅರಣ್ಯ ಬೆಂಕಿಯನ್ನು ತಡೆಯಲು ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಾಚ್ ಟವರ್ ಗಳನ್ನು ನಿರ್ಮಿಸಲಾಗಿದೆ. ಅಗ್ನಿಶಾಮಕ ಇಲಾಖೆಯ ಜೊತೆ ಸಂಪರ್ಕದಲ್ಲಿ ಇರುತ್ತೇವೆ. ಬೆಂಕಿ ಕಂಡು ಬರುವ ಪ್ರದೇಶಗಳನ್ನು ಗುರುತಿಸಿ ಸಿಬ್ಬಂದಿ ನಿಯೋಜಿಸಲಾಗಿದ್ದು, ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ನಗರ ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸಿಫ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

----

ಬಾಕ್ಸ್...

ಅಸಹಕಾರ ತೋರಿದರೇ ಕ್ರಮ- ಎಚ್ಚರಿಕೆ

ಅರಣ್ಯದಲ್ಲಿ ಬೆಂಕಿ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ನೀರು ಲಭ್ಯವಿರುವ ಪ್ರದೇಶಗಳನ್ನು ಗುರುತಿಸಿಕೊಳ್ಳಿ. ಅರಣ್ಯ ಬೆಂಕಿ ಕಾಣಿಸಿಕೊಂಡಾಗ ಹತ್ತಿರದಲ್ಲಿರುವ ಕಾರ್ಖಾನೆಗಳು, ಮಾಲ್ ಗಳು ಹಾಗೂ ಸಾರ್ವಜನಿಕರು ತಮ್ಮ ಬಳಿ ಲಭ್ಯವಿರುವ ನೀರು ಹಾಗೂ ಸೌಲಭ್ಯಗಳನ್ನು ಅಧಿಕಾರಿಗಳು ಕೋರಿದರೆ ತಕ್ಷಣ ಒದಗಿಸಬೇಕು. ಈ ಸಂಬಂಧ ಅಸಹಕಾರ ತೋರಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ್ ಎಚ್ಚರಿಸಿದರು.

ಅಗ್ನಿಶಾಮಕ ಕಾರ್ಯವೈಖರಿಗೆ ಶ್ಲಾಘನೆ

ಮಹಾರಾಣಿ ಕಾಲೇಜು ಕಟ್ಟಡ ಕುಸಿದ ಸಂದರ್ಭದಲ್ಲಿ, ಟಿ. ನರಸೀಪುರ ಕುಂಭಮೇಳದಲ್ಲಿ ಯಾವುದೇ ಅಹಿತಕರ ಘಟನೆ ಆಗದಂತೆ ಹಾಗೂ ಚಾಮುಂಡಿಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳಾದ ಚಂದನ್, ಗುರುರಾಜ್ ಮತ್ತು ಸಿಬ್ಬಂದಿ ಕಾರ್ಯವೈಖರಿಯನ್ನು ಜಿಲ್ಲಾಧಿಕಾರಿ ಶ್ಲಾಘಿಸಿದರು.

Share this article